ರಾಜ್ಯಕ್ಕೆ ಶುರುವಾಯ್ತು ಕೊರೊನಾ 3ನೇ ಅಲೆ ಆತಂಕ: ಕರ್ನಾಟಕಕ್ಕೆ ಬರುವವರು ಕಡ್ಡಾಯವಾಗಿ ಗಮನಿಸಿ!
ಬೆಂಗಳೂರು, ಆ. 01: ರಾಜ್ಯಕ್ಕೆ ಕೊರೊನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ದಿಢೀರ್ ಎಂದು ಕೊರೊನಾ ವೈರಸ್ ಹಿಡಿತಕ್ಕೆ ಸಿಗುತ್ತಿಲ್ಲ. ಅದರ ನೇರ ಪರಿಣಾಮ ರಾಜ್ಯದ ಮೇಲಾಗುವ ಸಾಧ್ಯತೆಯನ್ನು ತಜ್ಞರು ಕೊಟ್ಟಿದ್ದಾರೆ. ಹೀಗಾಗಿ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳೂ ಸೇರಿದಂತೆ 8 ಜಿಲ್ಲೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಜೊತೆಗೆ ಹಲವು ಸೂಚನೆಗಳನ್ನೂ ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕೊಟ್ಟಿದ್ದಾರೆ.
ಅಧಿಕಾರಿಗಳೊಂದೊಗೆ ಸಭೆ ಮಾಡಿದ ಬಳಿಕ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, "ಕೊರೊನಾ ಕೆಚ್ಚಾಗುತ್ತಿರುವ ಎಂಟು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೇರಳ ಗಡಿಗೆ ಹೊಂದಿರುವ ಜಿಲ್ಲೆಗಳ ಅಧಿಕಾರಿಗಳು ಸಬೆಯಲ್ಲಿ ಭಾಗವಹಿಸಿದ್ದರು. ಕೇರಳದಿಂದ ನಮಗೆ ಎರಡನೇ ಅಲೆ ಎದುರಾಗಿತ್ತು. ಜೊತೆಗೆ ಮಹಾರಾಷ್ಟ್ರದಿಂದಲೂ ಹರಡಿತ್ತು. ಆದರೆ ಈ ಭಾರಿ ಕೇರಳದಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಆದರಿಂದ ಗಡಿಯಲ್ಲಿ ಹೆಚ್ಚು ಗಮನಹರಿಸಬೇಕಾಗಿದೆ. ಆಯಾ ಜಿಲ್ಲೆಗಳ ಡಿವೈಎಸ್ಪಿ ಮಟ್ಟದಲ್ಲಿ ಜವಾಬ್ದಾರಿ ವಹಿಸುವಂತೆ ಸೂಚನೆ ಕೊಟ್ಟಿದ್ದೇನೆ. ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹೆಚ್ಚು ಜವಾಬ್ದಾರಿ ಕೊಟ್ಟಿದ್ದೇನೆ. ಅದರೊಂದಿಗೆ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿಮಾಡುವಂತೆ ಅಲ್ಲಿನ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ" ಎಂದು ಹೇಳಿದ್ದಾರೆ.
ಜೊತೆಗೆ ಕೊರೊನಾ ಮೂರನೇ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಇತರ ಕ್ರಮಗಳು ಹಾಗೂ ಮಾರ್ಗಸೂಚಿ ಮುಂದಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ!
ಮೂರನೇ ಅಲೆಯಲ್ಲಿ ಕೊರೊನಾ ವೈರಸ್ ಮಕ್ಕಳ ಮೇಲೆ ಪರಿಣಾಮ ಉಂಟಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಬೊಮ್ಮಾಯಿ ಅವರು, "ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದೇವೆ. ಜೊತೆಗೆ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ವಿತರಣೆ ಮಾಡುತ್ತಿದ್ದೇವೆ" ಎಂಬ ಮಾಹಿತಿ ನೀಡಿದ್ದಾರೆ. ಜೊತೆಗೆ ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಮುಖ್ಯಮಂತ್ರಿಗಳ ಸೂಚನೆಯಂತೆ ಜಾರಿಗೆ ತರಲಾಗಿದೆ.
ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಲಾಗಿದ್ದು, ಆಕ್ಸಿಜನ್ ಪೂರೈಕೆ, ಔಷಧಿ ಲಭ್ಯತೆ, ಮುನ್ನೆಚ್ಚರಿಕೆ ಕ್ರಮಗಳು, ಗಡಿ ಭಾಗಗಳಲ್ಲಿ ತಪಾಸಣೆ ಮೊದಲಾದ ವಿಷಯಗಳನ್ನು ಅಧಿಕಾರಿಗಳೊಂಧಿಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ.

ಮೂರನೇ ಅಲೆ ಎಚ್ಚರಿಕೆ ಕೊಟ್ಟಿ ಸಿಎಂ ಬೊಮ್ಮಾಯಿ
ಕೇರಳದೊಂದಿಗೆಡಿ ಗಡಿ ಹಂಚಿಕೊಂಡಿರುವ ಜಿಲ್ಲೆಗಳೂ ಸೇರಿದಂತೆ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೊ ಕಾನ್ಫರೆನ್ಸ್ ನಡೆಸಿದ್ದಾರೆ. ಕೋವಿಡ್ ಎರಡನೇ ಅಲೆಯನ್ನು ಕಠಿಣ ಪರಿಶ್ರಮದಿಂದ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಿಯಂತ್ರಿಸಲಾಗಿದೆ. ಈಗ ಮತ್ತೆ ಪ್ರಕರಣಗಳು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
ಅಂತರರಾಜ್ಯ ಗಡಿ ಚೆಕ್ಪೋಸ್ಟ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ರಾಜ್ಯಕ್ಕೆ ಪ್ರವೇಶ ಮಾಡಲು ಕಡ್ಡಾಯವಾಗಿ ಆರ್.ಟಿ., ಪಿ.ಸಿ.ಆರ್. ಪರೀಕ್ಷೆಯಲ್ಲಿ ನೆಗೆಟಿವ್, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ನಿಯಮ ಮಾಡಲಾಗಿದೆ. ಗಡಿ ಭಾಗದಲ್ಲಿ ಚೆಸ್ಟ್ಪೋಸ್ಟ್ ಬಿಗಿ ಮಾಡಿ. ಹಿರಿಯ ಅಧಿಕಾರಿಗಳನ್ನು ನಿಯೋಜಿಸಿ. ಡಿವೈಎಸ್ಪಿ, ಉಪ ವಿಭಾಗಾಧಿಕಾರಿ, ವೈದ್ಯರು, ಮತ್ತು ಇತರ ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂಗೆ ಸೂಚನ ಕೊಡಲಾಗಿದೆ.

ಮುಖ್ಯ ಕಾರ್ಯದರ್ಶಿಗೆ ವರದಿ ಕೊಡಲು ಸೂಚನೆ
ಜೊತೆಗೆ ಯಾಯಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ಎರಡು ದಿನಕ್ಕೊಮ್ಮೆ ಭೇಟಿ ಕೊಟ್ಟು ಪರಿಸ್ಥಿತಿ ಪರಿಶೀಲಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ವರದಿ ಕೊಡುವಂತೆ ಸಿಎಂ ಬೊಮ್ಮಾಯಿ ಸಂವಾದದಲ್ಲಿ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಜೊತೆಗೆ ಗಡಿ ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಸೂಚಿಸಲಾಗಿದ್ದು, ಬಂದರುಗಳಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ಕೊಡಲಾಗಿದೆ. ಕೇರಳದಿಂದ ಶಿಕ್ಷಣ, ಉದ್ಯೋಗಕ್ಕೆಂದು ಪ್ರತಿದಿನ ಪ್ರಯಾಣಿಸುವವರಿಗೆ ಒಂದು ವಾರದ ಅವಧಿಗೆ ಪಾಸ್ ನೀಡುವ ವ್ಯವಸ್ಥೆ ಹಾಗೂ ಅವರಿಗೆ ಪ್ರತಿ ವಾರ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯ ಮಾಡುವಂತೆ ಸೂಚಿಸಲಾಗಿದೆ. ಈ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Recommended Video

ಹೋಮ್ ಸ್ಟೇ, ರೇಸಾರ್ಟ್ಗಳಲ್ಲಿ ಪರೀಕ್ಷೆ ಕಡ್ಡಾಯ
ಹೊರ ರಾಜ್ಯದಿಂದ ಆಗಮಿಸಿರುವ ಹಾಗೂ ಆಗಮಿಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿಯೇ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ. ಅದರೊಂದಿಗೆ ಚಿಕಿತ್ಸಾ ಸೌಲಭ್ಯದಲ್ಲಿ, ಆಕ್ಸಿಜೆನ್, ಔಷಧ ಪೂರೈಕೆಯಲ್ಲಿ ಯಾವುದೇ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯ ಸೌಲಭ್ಯಕ್ಕೆ ಅಗತ್ಯವಿರುವ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದ್ದು, ಅವುಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಗಳಿಗೆ ಹಂಚಿಕೆ ಮಾಡಿರುವ ಪಿಎಸ್ಎ ಘಟಕಗಳನ್ನು ತ್ವರಿತವಾಗಿ ಅಳವಡಿಸಲು ಸೂಚಿಸಲಾಗಿದೆ. ಪಿ.ಎಸ್.ಎ ಘಟಕಗಳಿಗೆ ಅಗತ್ಯ ಸಾಮರ್ಥ್ಯದ ವಿದ್ಯುತ್ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಸಿಎಂ ಸೂಚಿಸಿದ್ದಾರೆ. ಪ್ರಮುಖವಾಗಿ ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಪಿಎಸ್ಎ ಘಟಕ ಒಂದು ವಾರದೊಳಗೆ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗಳ ಪ್ರಮಾಣ ಹೆಚ್ಚಿಸುವಂತೆ ಸೂಚಿಸಿದರು. ಪ್ರವಾಸಿಗರು ಹೆಚ್ಚಾಗಿ ಆಗಮಿಸುವ ಕಾರಣ, ಹೋಮ್ ಸ್ಟೇಗಳು, ರೆಸಾರ್ಟ್ಗಳಲ್ಲಿ ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ.
ಇನ್ನು ಲಸಿಕೆ ಹಾಕುವುದನ್ನು ಹೆಚ್ಚಿಸುವ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಅದರೊಂದಿಗೆ ಸಂಪರ್ಕಿತರ ಪತ್ತೆ ತೀವ್ರಗೊಳಿಸಲು ಸೂಚಿಸಿದ್ದು, ಗಡಿ ಪ್ರದೇಶಗಳಲ್ಲಿ RAT ಪರೀಕ್ಷೆ ಹೆಚ್ಚಿಸಬೇಕು. ಮೈಕ್ರೋ ಕಂಟೇನ್ಮೆಂಟ್ ಝೋನ್ಗಳನ್ನು ಮಾಡಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಎಲ್ಲರೂ ಮನೆಯಿಂದ ಹೊರಗೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡುವಂತೆ ಸೂಚಿಸಬೇಕು. ರೆಸಾರ್ಟ್ಗಳಲ್ಲಿ ಅತಿಥಿಗಳಿಗೆ ಆರ್ಟಿಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಕಡ್ಡಾಯಗೊಳಿಸಬೇಕು. ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ನಿಯಂತ್ರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.












Click it and Unblock the Notifications