ಹಿಜಾಬ್ ವಿವಾದ; ಸಿದ್ದರಾಮಯ್ಯ ಆಗ್ರಹಕ್ಕೆ ಮಣಿದ ಬಿಜೆಪಿ ಸರ್ಕಾರ!
ಬೆಂಗಳೂರು, ಫೆಬ್ರವರಿ 08; ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಈಗ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹಬ್ಬಿದೆ. ಹಿಜಾಬ್ ಬೇಕು, ಬೇಡ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್ನಲ್ಲಿಯೂ ಈ ಕುರಿತು ಅರ್ಜಿ ಸಲ್ಲಿಕೆಯಾಗಿದೆ. ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿದೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಹೈಸ್ಕೂಲ್, ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಮೂಲಕ ಕರ್ನಾಟಕ ಸರ್ಕಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಕ್ಕೆ ಮಣಿದಿದೆ.
ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, "ಹಿಜಾಬ್, ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ" ಎಂದು ಹೇಳಿದ್ದರು.
ಸಂಜೆ ಸರ್ಕಾರ ಫೆಬ್ರವರಿ 9ರಿಂದ ಮೂರು ದಿನಗಳ ಕಾಲ ಹೈಸ್ಕೂಲ್, ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ತೀರ್ಮಾನ ಕೈಗೊಂಡಿದೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ಗೆ ಉಡುಪಿಯ ವಿದ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ಬುಧವಾರಕ್ಕೆ ಮುಂದೂಡಲಾಗಿದೆ.

ಆತಂಕ ಹುಟ್ಟಿಸಿದೆ ಎಂದು ಟ್ವೀಟ್
"ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಈಗ ಸರ್ಕಾರ ಕೈ ಚೆಲ್ಲಿ ಕೂತಿದೆ
"ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯ ಸರ್ಕಾರ ಈಗ ಪರಿಸ್ಥಿತಿ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಆನ್ಲೈನ್ ತರಗತಿ ಆರಂಭಿಸಿ
"ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ತಕ್ಷಣ ಶುರು ಮಾಡಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದರು.
|
ಬಸವರಾಜ ಬೊಮ್ಮಾಯಿ ಟ್ವೀಟ್
ಮಂಗಳವಾರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ" ಎಂದು ಹೇಳಿದ್ದಾರೆ.

ನಗರದಲ್ಲಿ ನಿಷೇಧಾಜ್ಞೆ ಜಾರಿ
ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ 08-02-2022 ಮತ್ತು 09-02-2022 ರಂದು 02 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕಲಂ 144 CrPC ರೀತ್ಯಾ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಸಾರ್ವಜನಿಕರ ಗಮನಕ್ಕೆ ತಂದಿರುತ್ತದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.












Click it and Unblock the Notifications