ಹಿಜಾಬ್ ವಿವಾದ; ಅನೇಕ ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಫೆಬ್ರವರಿ 17; ಹಿಜಾಬ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಒಂದು ಕಡೆ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿಗಳ ವಿಚಾರಣೆ ಪ್ರತಿದಿನ ನಡೆಯುತ್ತಿದೆ. ಮತ್ತೊಂದು ಕಡೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ.
ಗುರುವಾರವೂ ರಾಜ್ಯದ ವಿವಿಧ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಸದ್ದು ಮಾಡಿದೆ. ಬುಧವಾರದಿಂದ ರಾಜ್ಯದಲ್ಲಿ ಕಾಲೇಜು ಆರಂಭವಾಗಿತ್ತು. ಗುರುವಾರ ಕೆಲವು ಕಡೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತೇವೆ ಎಂಬ ವಿದ್ಯಾರ್ಥಿಗಳಿಗೆ ಕಾಲೇಜಿನ ಸಿಬ್ಬಂದಿ ಅವಕಾಶ ನೀಡಿಲ್ಲ. ಇದರಿಂದ ತರಗತಿಯ ಹೊರಗೆ ಹಲವು ವಿದ್ಯಾರ್ಥಿನಿಯರು ಉಳಿದರು. ಪೋಷಕರು ಸಹ ಕಾಲೇಜಿಗೆ ಬರುತ್ತಿದ್ದಾರೆ.

ರಜೆ ಘೋಷಣೆ; ರಾಮನಗರದ ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಆನ್ಲೈನ್ ಕ್ಲಾಸ್ ನಡೆಯಲಿದೆ. ಬುಧವಾರ ಕಾಲೇಜಿನಲ್ಲಿ ಹಿಜಾಬ್ ವಿಚಾರವಾಗಿ ಗಲಾಟೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿಗೆ ತಾತ್ಕಾಲಿಕ ರಜೆ ಘೋಷಣೆ ಮಾಡಲಾಗಿದೆ.
* ಮಂಗಳೂರಿನ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಲಾಗಿದೆ. 10 ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಬರಲು ನಿರಾಕರಿಸಿದರು.
* ಮತ್ತೊಂದು ಕಡೆ ಉಡುಪಿಯ ಡಾ. ಜಿ. ಶಂಕರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಆಗಮಿಸಲು ಅವಕಾಶ ನೀಡಲಿಲ್ಲ. ಇದರಿಂದಾಗಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆದರು.
* ಗುರುವಾರ ಹಾಸನದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಹಲವು ವ್ಯಕ್ತಿಗಳು ಆಗಮಿಸಿದ್ದರು. ಆಗ ಡಿವೈಎಸ್ಪಿ ಉದಯ್ ಭಾಸ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕಾಲೇಜಿನ ಬಳಿ ಬಂದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದರು.
* ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದರು. ತರಗತಿಗೆ ಹೋಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಆದರೆ ಅವಕಾಶವನ್ನು ಉಪನ್ಯಾಸಕರು ನೀಡಲಿಲ್ಲ.
* ಹಾಸನ ನಗರದ ಗಂಧದಕೋಠಿಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ತೆಗೆಯಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಹಿಜಾಬ್ ತೆಗೆಯುವಂತೆ ಉಪನ್ಯಾಸಕರು ಮಾಡಿದ ಮನವಿಗೆ ವಿದ್ಯಾರ್ಥಿನಿಯರು ಸ್ಪಂದಿಸಲಿಲ್ಲ. ಕಾಲೇಜಿನಿಂದ ಹೊರಗುಳಿದು ವಿದ್ಯಾರ್ಥಿನಿಯರು ಪ್ರತಿಭಟಿಸಿದರು. ಆಗ ಪೊಲೀಸರು ವಿದ್ಯಾರ್ಥಿನಿಯರನ್ನು ಮನೆಗೆ ಕಳಿಸಿದರು.
* ಶಿವಮೊಗ್ಗದ ಡಿವಿಎಸ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಗೇಟ್ ಬಳಿ ತಡೆಯಲಾಯಿತು. ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ಬನ್ನಿ ಎಂದು ಸೂಚಿಸಲಾಯಿತು. ಆದರೆ ವಿದ್ಯಾರ್ಥಿನಿಯರು ಒಪ್ಪಲಿಲ್ಲ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
* ಬೆಳಗಾವಿಯ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮನೆಗೆ ವಾಪಸ್ ಆದರು. ಹಿಜಾಬ್ ಧರಿಸಿ ಬಂದಿದ್ದವರಿಗೆ ಕಾಲೇಜಿನ ಪ್ರತ್ಯೇಕ ಕೊಠಡಿಯಲ್ಲಿ ಸುಮಾರು 2 ಗಂಟೆ ಕೂರಿಸಲಾಗಿತ್ತು. ಹಿಜಾಬ್ ತೆಗೆಯುವಂತೆ ಮನವೊಲಿಕೆ ಮಾಡಿದರು ಅವರು ಪಟ್ಟು ಸಡಿಲಿಸಲಿಲ್ಲ.
* ಬೆಳಗಾವಿ ಗೋಕಾಕ್ನಗರದ ಜಿಎಸ್ಎಸ್ ಕಾಲೇಜಿನ ಮುಂದೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಸುಮಾರು 2 ಗಂಟೆಗಳ ಕಾಲ ಪ್ರತಿಭಟನೆ ನಡೆಸಲಾಯಿತು.
* ಯಾದಗಿರಿ ನಗರದ ಸಿಟಿ ನ್ಯೂ ಕನ್ನಡ ಪಿಯು ಕಾಲೇಜಿನಲ್ಲಿ 30 ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನಲೆ ಮನೆಗೆ ತೆರಳಿದರು.












Click it and Unblock the Notifications