ಹಿಜಾಬ್ ವಿವಾದ: ಎರಡು ದಿನದಲ್ಲಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ?
ಬೆಂಗಳೂರು, ಏ.26. ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಒಂದೆರಡು ದಿನಗಳಲ್ಲಿ ವಿಶೇಷ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ವಿವಾದದ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಮಂಗಳವಾರ ಸಮ್ಮತಿ ಸೂಚಿಸಿದ್ದಾರೆ.
ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಕನಿಷ್ಠ ಮೂರು ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲರು, ಸಿಜೆ ಎದುರು ವಿಷಯ ಪ್ರಸ್ತಾಪಿಸಿ, ಪ್ರಕರಣ ಪಟ್ಟಿ ಮಾಡುವಂತೆ ಪ್ರಸ್ತಾಪಿಸಿದರು. ಆಗ ಸಿಜೆಐ ದಯವಿಟ್ಟು ಎರಡು ದಿನ ಕಾಯಿರಿ ಎಂದು ನ್ಯಾ. ರಮಣ ತಿಳಿಸಿದರು.
ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಕಳೆದ ಮಾರ್ಚ್ತಿಂಗಳು ನಿರಾಕರಿಸಿತ್ತು.
ಹೈಕೋರ್ಟ್ ಆದೇಶವೇನು?
ಕಳೆದ ಮಾ.15 ರಂದು ಹೈಕೋರ್ಟ್ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದು ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಮಹತ್ವದ ಆದೇಶ ನೀಡಿತ್ತು.

ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ ವಜಾಗೊಳಿಸಿದೆ.
2022ರ ಜನವರಿ 31 ಮತ್ತು ನಂತರದ ದಿನಗಳಲ್ಲಿ ವಿದ್ಯಾರ್ಥಿನಿಯರು ಸಲ್ಲಿಸಿರುವ 7 ರಿಟ್ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. 11 ದಿನಗಳ ಕಾಲ ವಿಚಾರಣೆ ನಡೆಸಿದ್ದ ಪೀಠ, ಫೆಬ್ರವರಿ 25ರಂದು ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿತ್ತು.
ಮಾ.15ರಂದು ತೀರ್ಪು ಪ್ರಕಟಿಸಿದ ನ್ಯಾಯಪೀಠ, ಪ್ರಕರಣದ ಸ್ಮೂಕ್ಷತೆ ಹಿನ್ನೆಲೆಯಲ್ಲಿ ನಾಲ್ಕು ಪ್ರಶ್ನೆಗಳನ್ನು ರಚಿಸಿಕೊಂಡು ಅವುಗಳಿಗೆ ಉತ್ತರಿಸಲಾಗಿದೆ. ಆದರಂತೆ ನಾಲ್ಕು ಪ್ರಶ್ನೆಗಳಲ್ಲೂ ಸರ್ಕಾರದ ವಾದ ಎತ್ತಿಹಿಡಿದಿದೆ, ಅರ್ಜಿದಾರರ ವಾದಗಳಲ್ಲಿ ಯಾವುದೇ ಮೆರಿಟ್ ಇಲ್ಲ ಎಂದು ವಜಾಗೊಳಿಸಿದೆ. ಮುಖ್ಯವಾಗಿ ಸಮವಸ್ತ್ರ ಕಡ್ಡಾಯಗೊಳಿಸಿರುವ ಆದೇಶದಿಂದ ಮೂಲಭೂತ ಹಕ್ಕು ಉಲ್ಲಂಘನೆಯಾಗಿಲ್ಲ, ಸಂವಿಧಾನಿಕ ಹಕ್ಕುಗಳ ಮೊಟಕಾಗಿಲ್ಲ. ಅರ್ಜಿದಾರರು ಸರ್ಕಾರದ ನಿಯಮವನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ.












Click it and Unblock the Notifications