ಹಿಜಾಬ್ vs ಕೇಸರಿ ಶಾಲು: ಹಾಸನ, ಚಿಕ್ಕಮಗಳೂರಿನಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು
ಹಾಸನ, ಫೆಬ್ರವರಿ 5: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದೇಶದಲ್ಲೆಡೆ ಸದ್ದು ಮಾಡುತ್ತಿದ್ದು, ಇದು ರಾಜಕೀಯ ಆರೋಪ- ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ.
ಉಡುಪಿ ಹಾಗೂ ಕುಂದಾಪುರದ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದರ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬರಲು ಮುಂದಾದರು. ಅಲ್ಲಿಂದ ಇದು ಇಡೀ ರಾಜ್ಯದಾದ್ಯಂತ ವ್ಯಾಪಿಸಿದೆ.
ಹಿಜಾಬ್ vs ಕೇಸರಿ ಶಾಲು ವಿವಾದ ಇದೀಗ ಹಾಸನ ಮತ್ತು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೂ ಕಾಲಿಟ್ಟಿದ್ದು, ಬುರ್ಕಾ- ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡ ಬಂದಿದ್ದಾರೆ.

ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಹಿಜಾಬ್ vs ಕೇಸರಿ ಶಾಲು ಘಟನೆ ನಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಲಿ ಹಾಗೂ ಉಪನ್ಯಾಸಕರಾಗಲಿ ವಿದ್ಯಾರ್ಥಿಗಳನ್ನು ಪ್ರಶ್ನಿಸಿಲ್ಲ. ವಿದ್ಯಾರ್ಥಿಗಳು ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಕಾಫಿನಾಡಿನಲ್ಲೂ ಕೇಸರಿ ಶಲ್ಯ ಧರಿಸಿ ಠಕ್ಕರ್ ಕೊಟ್ಟ ವಿದ್ಯಾರ್ಥಿಗಳು
ಹಾಸನ ಜಿಲ್ಲೆ ಮಾತ್ರವಲ್ಲದೆ ಹಿಜಾಬ್ vs ಕೇಸರಿ ಶಾಲು ವಿವಾದ ಪಕ್ಕದ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸದ್ದು ಮಾಡಿದೆ. ಕೇಸರಿ ಶಲ್ಯ ಧರಿಸಿ ಬಂದು ಹಿಜಾಬ್ಗೆ ಠಕ್ಕರ್ ಕೊಟ್ಟಿದ್ದಾರೆ.

ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರಿಗೆ ಕೇಸರಿ ಶಲ್ಯ ಧರಿಸಿ ಪ್ರತಿಭಟನೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ IDSG ಕಾಲೇಜಿನಲ್ಲಿ ನಡೆದಿದೆ. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಯಾರಿಗೂ ಹಿಜಾಬ್ ಧರಿಸಲು ಅವಕಾಶ ಕೊಡದಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಗಮನಹರಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಜಾತಿ- ಧರ್ಮ ಬದಿಗಿಟ್ಟು ಕಾಲೇಜಿನಲ್ಲಿ ಎಲ್ಲರೂ ಒಟ್ಟಾಗಿ ಕಲಿಯೋಣ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.












Click it and Unblock the Notifications