Breaking; ಹಿಜಾಬ್ ತೀರ್ಪು, ಮುಂದಿನ ಆದೇಶದ ತನಕ ಯಥಾಸ್ಥಿತಿ
ಬೆಂಗಳೂರು, ಅಕ್ಟೋಬರ್ 13; ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕದ ವಿದ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತಾ, ನ್ಯಾಯಮೂರ್ತಿ ಸುಧಾಂಶು ದುಲಿಯಾ ಅವರ ಪೀಠ ಗುರುವಾರ ತೀರ್ಪು ನೀಡಿತು.

ಇಬ್ಬರು ನ್ಯಾಯಮೂರ್ತಿಗಳ ನಡುವೆ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದರು.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಪ್ರಕರಣದ ವಿಚಾರಣೆಗೆ ಸಂವಿಧಾನಿಕ ಪೀಠ ರಚನೆ ಮಾಡಬೇಕೋ? ಅಥವ ಸಾಮಾನ್ಯ ಪೀಠದಲ್ಲಿ ವಿಚಾರಣೆ ನಡೆಸಬೇಕೋ? ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ತೀರ್ಪು ಪ್ರಕಟಿಸುವಾಗ ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ಮುಖ್ಯ ನ್ಯಾಯಮೂರ್ತಿಗಳು ಮುಂದಿನ ತೀರ್ಮಾನ ಪ್ರಕಟಿಸುವ ತನಕ ಕರ್ನಾಟಕ ಹೈಕೋರ್ಟ್ ಆದೇಶ ಜಾರಿಯಲ್ಲಿರುತ್ತದೆ. ಯಥಾಸ್ಥಿತಿ ಕಾಪಾಡಬೇಕಾಗುತ್ತದೆ.
ಆದ್ದರಿಂದ ಮುಂದಿನ ಆದೇಶದ ತನಕ ಕರ್ನಾಟಕ ಹೈಕೋರ್ಟ್ ಆದೇಶದಂತೆ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನವೆಂಬರ್ 8ರಂದು ನಿವೃತ್ತರಾಗಲಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಗೂ ಮೊದಲೇ ಪ್ರಕರಣದ ವಿಚಾರಣೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಾಮಾನ್ಯ ಪೀಠದಲ್ಲಿ ವಿಚಾರಣೆ ನಡೆಸುವುದಾದರೆ ಪ್ರತಿದಿನ ವಿಚಾರಣೆ ನಡೆಯಲಿದೆಯೇ? ಎಂದು ಕಾದು ನೋಡಬೇಕಿದೆ.












Click it and Unblock the Notifications