Breaking; ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ನಾಯಕ ಬಿಜೆಪಿಗೆ ರಾಜೀನಾಮೆ!
ಬೆಂಗಳೂರು, ನವೆಂಬರ್ 09; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯ ಪ್ರಭಾವಿ ನಾಯಕರೊಬ್ಬರು ಬಿಜೆಪಿ ತೊರೆದಿದ್ದಾರೆ. ಮಂಗಳವಾರ ಸಿಎಂ ಜೊತೆ ಅವರು ಜನಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಯು. ಬಿ. ಬಣಕರ್ ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕರ ಮುಂದಿನ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ ಬಳಗದ ನಾಯಕರಲ್ಲಿ ಒಬ್ಬರಾದ ಯು. ಬಿ. ಬಣಕರ್, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಯು. ಬಿ. ಬಣಕರ್ 1994 ಮತ್ತು 2013ರ ಚುನಾವಣೆಯಲ್ಲಿ ಹಿರೇಕೆರೂರು ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ. ಸಿ. ಪಾಟೀಲ್ ಎದುರು 71,906 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಬಿ. ಸಿ. ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಬಿಜೆಪಿ ಸೇರಿದ್ದರು. ಆಗ ನಡೆದ ಹಿರೇಕೆರೂರು ಉಪ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡರು. ಆ ಗೆಲುವಿನಲ್ಲಿ ಯು. ಬಿ. ಬಣಕರ್ ಶ್ರಮವೂ ಇತ್ತು.
ಬಿ. ಸಿ. ಪಾಟೀಲ್ ಬಿಜೆಪಿಗೆ ಬಂದಾಗ ಯು. ಬಿ. ಬಣಕರ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿತು. ಆಗ ಅಸಮಾಧಾನಗೊಂಡ ಅವರನ್ನು ಸಮಾಧಾನಪಡಿಸಲು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು.
2023ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಯು. ಬಿ. ಬಣಕರ್ಗೆ ಟಿಕೆಟ್ ಸಿಗುವುದಿಲ್ಲ. ಬಿ. ಸಿ. ಪಾಟೀಲ್ ಮತ್ತೆ ಟಿಕೆಟ್ ಪಡೆಯುವ ಸಾಧ್ಯತೆ ಹೆಚ್ಚಿದೆ. ಯು. ಬಿ. ಬಣಕರ್ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications