School Holiday: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ಸಾಮಾನ್ಯವಾಗಿ ಹಬ್ಬಗಳು, ವಿದ್ಯಾರ್ಥಿಗಳಿಗೆ ಪ್ರಕೃತಿ ವಿಕೋಪದಿಂದ ತೊಂದರೆ ಆಗುವಂತಹ ಮುನ್ಸೂಚನೆ ಸಮಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ ಇದೀಗ ಬೇರೆಯದ್ದೇ ಕಾರಣದಿಂದ ರಾಜ್ಯದ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು (ಜನವರಿ 09) ರಜೆ ಘೋಷಣೆ ಮಾಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
ಇಂದು (ಜನವರಿ 09) ಬೀದರ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಈ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶ ನಿನ್ನೆ ಅಂದರೆ ಜನವರಿ 8ರಂದೇ ಹೊರಬಿದ್ದಿತ್ತು.

ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎನ್ನುವ ವಿಚಾರ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಲೇ ಇವೆ.
ಕರ್ನಾಟಕದಲ್ಲೂ ಕೂಡ ಆಕ್ರೋಶಗಳು ಭುಗಿಲೆದ್ದಿವೆ. ಈ ಹಿನ್ನೆಲೆ ಇಂದು ವಿವಿಧ ದಲಿತ ಪರ ಸಂಘಟನೆಯಿಂದ ಬೀದರ್ ಬಂದ್ಗೆ ಕರೆ ನೀಡಿದ್ದು, ಈ ಬಂದ್ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಶಾಲಾ ಶಿಕ್ಷಣ ಉಪನಿರ್ದೇಶಕ ಎಸ್ಎಸ್ ಪ್ರಸನ್ನಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್ ಅವರು ಬುಧವಾರ (ಜನವರಿ 08) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಷ್ಟೇ ಅಲ್ಲದೆ ಹುಬ್ಬಳ್ಳಿ ಧಾರವಾಡದಲ್ಲೂ ಕೂಡ ಬಂದ್ಗೆ ಕರೆ ನೀಡಿದ ಹಿನ್ನೆಲೆ ಈ ಭಾಗದ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಮಿತ್ ಶಾ ಹೇಳಿದ್ದೇನು?: ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ. ಅಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಅಂಬೇಡ್ಕರ್ ಅವರ ಹೆಸರನ್ನು ಕಾಂಗ್ರೆಸ್ ತೆಗೆದುಕೊಳ್ಳುತ್ತಿರುವುದಕ್ಕೆ ಬಿಜೆಪಿ ಸಂತೋಷವಾಗಿದೆ. ಆದರೆ ಪಕ್ಷವು ಅವರ ಬಗ್ಗೆ ತನ್ನ ನಿಜವಾದ ಭಾವನೆಗಳ ಬಗ್ಗೆ ಮಾತನಾಡಬೇಕು ಎಂದು ಗೃಹ ಸಚಿವರು ಹೇಳಿದರು.
ಅಂಬೇಡ್ಕರ್ ಅವರು 370ನೇ ವಿಧಿ ಸೇರಿದಂತೆ ಆಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರದ ನೀತಿಗಳೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಮೊದಲ ಕ್ಯಾಬಿನೆಟ್ನಿಂದ ಹೇಗೆ ರಾಜೀನಾಮೆ ನೀಡಬೇಕಾಯಿತೆಂದು ಹೇಳಿದರು.
ಈಗಾಗಲೇ ನಿನ್ನೆ ಹಾಸನದಲ್ಲಿಯೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಿದ್ದಾರೆ. ದಲಿತ ಹಾಗೂ ಪ್ರಗತಿ ಪರ ಸಂಘಟನೆಗಳ ನೇತೃತ್ವದಲ್ಲಿ ಹಾಸನದ ಕಸ್ತೂರವಳ್ಳಿ ಗೇಟ್ ಬಳಿ ಧರಣಿ ನೂರಾರು ಜನರು ಹೆದ್ದಾರಿ ತಡೆ ಪ್ರತಿಭಟನೆ ಮಾಡಿದ್ದಾರೆ. ಕೇಂದ್ರ ಸಂಪುಟದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪ್ರತಿಭಟನೆ ಮಾಡಲಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಇನ್ನು ಮೊನ್ನೆ ಮೈಸೂರು ಬಂದ್ಗೆ ಕರೆ ನೀಡಲಾಗಿತ್ತು. ಮೈಸೂರಿನ ಪಂಚವಟಿ ವೃತ್ತದಲ್ಲಿರುವ ಆರ್ಎಸ್ ಕಚೇರಿಗೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಪ್ರತಿಭಟನಾಕರರು ಯತ್ನಿಸಿದ್ದರು. ಈ ವೇಳೆ ಲಕ್ಷ್ಮಣ್ ಮತ್ತು ಪೋಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬ್ಯಾರಿಕೇಡ್ ತಳ್ಳಿ ಪ್ರವೇಶಿಸಲು ಯತ್ನಿಸಿದ್ದರು. ಆದರೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಾತಾವರಣವನ್ನು ಶಾಂತಗೊಳಿಸಿದರು.












Click it and Unblock the Notifications