Darshan Thoogudeepa: ದರ್ಶನ್ಗೆ ಮನೆಯ ಊಟದ ಭಾಗ್ಯವಿಲ್ಲ!
ಬೆಂಗಳೂರು, ಜುಲೈ 22: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಮನೆಯ ಊಟದ ಭಾಗ್ಯವಿಲ್ಲ. ಮನೆಯ ಊಟ ತರಿಸಿಕೊಳ್ಳಲು ಅವಕಾಶ ನೀಡಬೇಕು ಎಂಬ ದರ್ಶನ್ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ವಜಾಗೊಳಿಸಿದೆ. ದರ್ಶನ್ ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 1ರ ತನಕ ವಿಸ್ತರಣೆಯಾಗಿದೆ.
ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮೊದಲು ಮನೆಯ ಊಟ ತರಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ದರ್ಶನ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಂಗ ಬಂಧನದಲ್ಲಿರುವ ವಿಚಾರಣಾಧೀನ ಕೈದಿ ದರ್ಶನ್ಗೆ ಮನೆಯ ಊಟ ತರಿಸಿಕೊಳ್ಳಲು ಕೋರ್ಟ್ ಒಪ್ಪಿಗೆ ನೀಡಿಲ್ಲ. ಆದ್ದರಿಂದ ಅವರಿಗೆ ಜೈಲು ಊಟವೇ ಗತಿಯಾಗಿದೆ.
ಮನೆಯ ಊಟ, ಹಾಸಿಗೆ ಸೌಲಭ್ಯ: ಜೈಲು ಊಟದಿಂದ ಅಜೀರ್ಣ, ಅತಿಸಾರವಾಗುತ್ತಿದೆ. ಆದ್ದರಿಂದ ಜೈಲಿನಲ್ಲಿ ಮನೆಯ ಊಟ ತರಿಸಿಕೊಳ್ಳಲು ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ತನಗೆ ಅನುಮತಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ಸೂಚಿಸಬೇಕು ಎಂದು ಕೋರಿ ಮೊದಲು ದರ್ಶನ್ ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣ ಕುಮಾರ್ ಕೆಲ ಕಾಲ ದರ್ಶನ್ ಮತ್ತು ಸರ್ಕಾರ ಪರ ವಕೀಲರ ವಾದ ಆಲಿಸಿತ್ತು. ಬಳಿಕ ಅರ್ಜಿದಾರರು ತಮ್ಮ ಮನವಿ ಕುರಿತು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಜುಲೈ 27ರೊಳಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತ್ತು.
ಹೈಕೋರ್ಟ್ ಆದೇಶದಂತೆ ದರ್ಶನ್ ಪರ ವಕೀಲರು ಜುಲೈ 20ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ 24ನೇ ಎಸಿಎಂಎಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಗುರುವಾರ ಆದೇಶವನ್ನು ನೀಡಲಾಗಿದೆ.
ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿಗೆ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಭಾನು ಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದ್ದರು. ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ 5 ಸಾವಿರ ಕೈದಿಗಳು ದಿನವೂ ಊಟ ಮಾಡುತ್ತಿದ್ದಾರೆ. ಬೇರೆ ಯಾವುದೇ ಕೈದಿಗೂ ಫುಡ್ ಪಾಯಿಸನ್ ಆಗಿಲ್ಲ. ದರ್ಶನ್ ಸಹ ಫುಡ್ ಪಾಯಿಸನ್ ಆಗಿರುವ ಬಗ್ಗೆ ವೈದ್ಯರಿಗೆ ಹೇಳಿಲ್ಲ ಎಂದು ವಾದಿಸಿದ್ದರು.
ನ್ಯಾಯಮೂರ್ತಿಗಳು ಕರ್ನಾಟಕ ಬಂಧಿಖಾನೆ ಕಾಯ್ದೆ-1963ರ ಸೆಕ್ಷನ್ 30ರ ಅಡಿಯಲ್ಲಿ ಮನೆಯಿಂದ ಊಟ ಪಡೆಯಲು ವಿಚಾರಣಾಧೀನ ಕೈದಿಗೆ ಅವಕಾಶವಿದೆ ಎಂದು ಆದೇಶ ನೀಡಿದರೆ, ಅದು ಎಲ್ಲಾ ಕೈದಿಗಳಿಗೆ ಹಕ್ಕು ಆಗಿಬಿಡುತ್ತದೆ. ವಿಚಾರಣಾಧೀನ ಕೈದಿಗಳಿಗೆ ಮನೆ ಊಟ ಪಡೆಯುವುದು ಮೂಲಭೂತ ಹಕ್ಕಾಗುತ್ತದೆಯೇ? ಎಂಬ ಬಗ್ಗೆ ಕಾನೂನುಗಳ ಪರಾಮರ್ಶೆ ಅಗತ್ಯವಿದೆ ಎಂದು ಹೇಳಿದ್ದರು.
ಹೈಕೋರ್ಟ್ ನೀಡುವ ತೀರ್ಪು ಇತರೆ ಕೈದಿಗಳಿಗೆ ಅನ್ವಯವಾಗುತ್ತದೆ. ಹಾಗಾಗಿ, ಪ್ರಕರಣದಲ್ಲಿ ನಾನು ಮಧ್ಯಂತರ ಆದೇಶ ನೀಡುವುದಿಲ್ಲ. ಸಂಪೂರ್ಣ ವಾದ ಮಂಡನೆ ಆಲಿಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಅದಕ್ಕೆ ಮತ್ತಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದ್ದರು. ಆದ್ದರಿಂದ ಜುಲೈ 29ರಂದು ನಟ ದರ್ಶನ್ ರಿಟ್ ಅರ್ಜಿ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.












Click it and Unblock the Notifications