ಜಗದೀಶ್ ಶೆಟ್ಟರ್ಗೆ ಕರೆ ಮಾಡಿದ ಅಮಿತ್ ಶಾ: ಬಿಜೆಪಿಗೆ ಮರುಸೇರ್ಪಡೆ ಕುರಿತು ಮಾತುಕತೆ? ಮಾಜಿ ಸಿಎಂ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 26: ಕರ್ನಾಟಕ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಕೈಹಾಕಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಲಿಂಗಾಯತ ನಾಯಕರನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶೆಟ್ಟರ್ಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಶುಕ್ರವಾರ ಚರ್ಚೆ ನಡೆಸಿದರು ಎಂದು ವರದಿಯಾಗಿದೆ.
ಲೋಕಸಭೆ ಚುನಾವಣೆಗೆ ಮುನ್ನ ಪಕ್ಷಕ್ಕೆ ಮರು ಸೇರ್ಪಡೆಗೊಳ್ಳುವಂತೆ ಶೆಟ್ಟರ್ ಅವರನ್ನು ಶಾ ಆಹ್ವಾನಿಸಿದ್ದಾರೆ ಎಂದು 'ಟಿವಿ9 ಕನ್ನಡ' ವಾಹಿನಿ ವರದಿ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಯಿತು. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಶೆಟ್ಟರ್ ಸೋಲು ಅನುಭವಿಸಿದ್ದಾರೆ.
ಶೆಟ್ಟರ್ ಅವರನ್ನು ಸೋಲಿಸಲು ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ಮೋದಿ ವ್ಯಾಪಕ ಪ್ರಚಾರ ನಡೆಸಿದ್ದರು. 67 ವರ್ಷ ವಯಸ್ಸಿನ ಲಿಂಗಾಯತ ನಾಯಕರಾಗಿರುವ ಶೆಟ್ಟರ್ ಮುಂಬೈ ಕರ್ನಾಟಕದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ, ಅವರು ಕಾಂಗ್ರೆಸ್ ಎಂಎಲ್ಸಿಯಾಗಿ ಆಯ್ಕೆಯಾದರು.
ಬಿಜೆಪಿ ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳುತ್ತಿದೆ ಎಂಬ ವದಂತಿಗಳು ಹರಡಿಕೊಂಡಿದೆ. ಇದೇ ವೇಳೆ, ಅಮಿತ್ ಶಾ ಅವರು ಶೆಟ್ಟರ್ ಅವರನ್ನು ಸಂಪರ್ಕಿಸಿದ್ದಾರೆ. ಅವರಿಗೆ ಲೋಕಸಭೆ ಟಿಕೆಟ್ ಭರವಸೆ ನೀಡುವ ಮೂಲಕ ಪಕ್ಷಕ್ಕೆ ಮರಳಲು ಅವರನ್ನು ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಶೆಟ್ಟರ್ ಅವರು ಶಾಗೆ ಏನು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ಬಿಜೆಪಿ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರನ್ನು ಮಾಜಿ ಸಿಎಂ ನೇರವಾಗಿ ದೂಷಿಸಿದ್ದರು.
ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ಶೆಟ್ಟರ್ ಕಾಂಗ್ರೆಸ್ಗೆ ಪ್ಲಸ್ ಪಾಯಿಂಟ್ ಆಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ತೋರಿದೆ. ಇದನ್ನೇ ಲೋಕಸಭೆ ಚುನಾವಣೆಗೂ ಮುಂದುವರಿಸುವುದು ಕಾಂಗ್ರೆಸ್ ಪ್ಲ್ಯಾನ್ ಆಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತರ ಕರ್ನಾಟಕದ ಲಿಂಗಾಯತ ನಾಯಕರ ಮೇಲೆ ಕಣ್ಣು ಹಾಕಿದೆ.
ಕೆಲ ವರ್ಷಗಳಿಂದ ಲಿಂಗಾಯತರು ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಲಿಂಗಾಯರ ಮತಗಳು ಬಿಜೆಪಿಯಿಂದ ಶಿಫ್ಟ್ ಆಗಿವೆ ಎಂದು ಹೇಳಲಾಗಿದೆ. ಒಟ್ಟು 224 ಸ್ಥಾನಗಳ ಪೈಕಿ ಕೇವಲ 66 ಸ್ಥಾನಗಳನ್ನು ಗಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದೆ.
ಮೇ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಲಿಂಗಾಯತ ಮತಗಳನ್ನು ಕ್ರೋಢೀಕರಿಸಲು ಬಿಜೆಪಿ ಶೆಟ್ಟರ್ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ.
2019 ರ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಸುಮಲತಾ ಗೆದ್ದಿದ್ದರು.
ಅಮಿತ್ ಶಾರಿಂದ ಕರೆ ಬಂದಿಲ್ಲ: ಶೆಟ್ಟರ್
ಅಮಿತ್ ಶಾ ಅವರಿಂದ ಯಾವುದೇ ಕರೆ ಬಂದಿಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. 'ನಾನೀಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಅವರಿಂದ ಯಾವುದೇ ಕರೆ ಬಂದಿಲ್ಲ. ಕರೆ ಬಂದರೂ ಅವರಿಗೆ ಉತ್ತರಿಸುವ ಅವಶ್ಯಕತೆ ಇಲ್ಲ' ಎಂದು ಶೆಟ್ಟರ್ ತಿಳಿಸಿದ್ದಾರೆ.












Click it and Unblock the Notifications