ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಗಮನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ!
ಬೆಂಗಳೂರು, ಮಾ. 09: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಮಂಡಿಸಿದ ಈ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ ಪ್ರಗತಿಗೆ ಒತ್ತು ಕೊಡುವ ಸಮತೋಲನ ಕಾಯ್ದುಕೊಂಡಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ರಾಜ್ಯ ಬಜೆಟ್ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೃಷಿ, ನೀರಾವರಿ, ಮಹಿಳೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಮೂಲಸೌಕರ್ಯ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ನಂಜುಂಡಪ್ಪ ವರದಿಯ ಆಧಾರದ ಮೇಲೆ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿಗಳನ್ನು ನೀಡಿರುವುದು ಗಮನಾರ್ಹ ಎಂದಿದ್ದಾರೆ.
ಕರ್ನಾಟಕ ಬಜೆಟ್ 2021: ಯಾವ ಕ್ಷೇತ್ರಕ್ಕೆ ಯಾವ ಕೊಡುಗೆ? ಮುಖ್ಯಾಂಶಗಳು
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಗಮನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1500 ಕೋಟಿ ರೂಪಾಯಿ ಅನುದಾನವನ್ನು ಬಜೆಟ್ನಲ್ಲಿ ನಿಗದಿಪಡಿಸಿದ್ದಾರೆ. ನೀರಾವರಿ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗಿದೆ. ಮೂಲಭೂತ ಸೌಕರ್ಯಕ್ಕೆ ಹಣದ ಬೆಂಬಲ ನೀಡಲಾಗಿದೆ. ಕಳೆದ ವರ್ಷ ಮಂಡಿಸಲಾದ ಬಜೆಟ್ ನ್ನು ಶೇ. 93ರಷ್ಟು ಸಾಧನೆ ಮಾಡುವ ವಿಶ್ವಾಸ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಳೆ ಯೋಜನೆಗಳನ್ನು ಕೈಬಿಟ್ಟಿಲ್ಲ
ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಯಾವುದೇ ಹಳೇ ಯೋಜನೆಗಳನ್ನು ಕೈಬಿಟ್ಟಿಲ್ಲ . ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಅನುದಾನ ನೀಡಿರುವುದು ಈ ಬಜೆಟಿನ ವಿಶೇಷತೆ. ಗೃಹ ನಿರ್ಮಾಣಕ್ಕೆ ಗ್ರಾಮೀಣ ಅಭಿವೃದ್ಧಿಗೆ ಕುಡಿಯುವ ನೀರಿಗೆ ಅತಿ ಹೆಚ್ಚು ಅನುದಾನವನ್ನು ನೀಡಲಾಗಿದೆ. ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರಿಗೆ ಹತ್ತಿರವಾಗಿ ಜನಸ್ನೇಹಿಯಾದ ಕಾರ್ಯಕ್ರಮಗಳನ್ನು ಯಡಿಯೂರಪ್ಪ ಅವರು ನೀಡಿದ್ದಾರೆ. ಸಂಕಷ್ಟದಲ್ಲಿ ಸಹಿತ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ, ಅಭಿವೃದ್ಧಿಗೆ ಪೂರಕವಾದ, ದೂರದೃಷ್ಟಿಯುಳ್ಳ ಬಜೆಟ್ನ್ನು ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ನುಡಿದಂತೆ ನಡೆದ ಸಿಎಂ ಯಡಿಯೂರಪ್ಪ
ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೊಡ ಹೈಬ್ರೀಡ್ ಬೀಜ ನೀತಿ ನಿರೂಪಣೆಗೆ ಕ್ರಮ, ಸಾವಯವ ಕೃಷಿ ಉತ್ತೇಜನಕ್ಕೆ ಐದು ನೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ಜಾರಿ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಪ್ರಮಾಣ ಶೇಕಡಾ 50 ಕ್ಕೆ ಹೆಚ್ಚಳ, ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಶುಲ್ಕವನ್ನು ಕಡಿಮೆಗೊಳಿಸಲಾಗಿದೆ. ಕೃಷಿ ಉತ್ಪನ್ನ ಸಂಗ್ರಹಣೆ ಹಾಗೂ ಸಂಸ್ಕರಣೆಗೆ ಆದ್ಯತೆ ನೀಡಲಾಗಿದೆ. ಒಟ್ಟಾರೆ ಕೃಷಿ ಆದಾಯವನ್ನು 2023 ರ ವೇಳೆಗೆ ದ್ವಿಗುಣಗೊಳಿಸುವ ಕನಸಿನೊಂದಿಗೆ ಯಡಿಯೂರಪ್ಪ ಹಲವಾರು ಯೋಜನೆಗಳನ್ನು ರೈತರಿಗೆ ನೀಡಿದ್ದಾರೆ.
ಕರ್ನಾಟಕ ಬಜೆಟ್ 2021: ಬೆಂಗಳೂರಿಗೆ ಸಿಕ್ಕಿದ್ದೇನು?
ನೀರಾವರಿ ಯೋಜನೆಗಳಿಗೆ ವಿಶೇಷ ಆಸಕ್ತಿಯನ್ನು ಯಡಿಯೂರಪ್ಪ ತೋರಿಸಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ 1677 ಕೋಟಿ ರೂಪಾಯಿಯನ್ನು ಮೀಸಲಿರಿಸಿದ್ದಾರೆ. ಕೃಷ್ಣ ಜಲಭಾಗ್ಯ ನಿಗಮಕ್ಕೆ 5600 ಕೋಟಿ ರೂಪಾಯಿ ಅನುದಾನ ಮೀಸಲಿರಿಸಲಾಗಿದೆ. ಸಮುದ್ರಕ್ಕೆ ಸೇರುವ ನೀರನ್ನು ಕೃಷಿಗೆ ಬಳಕೆ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಲು 5 ನೂರು ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ. ಬೇಡ್ತಿ-ವರದಾ ನದಿ ಜೋಡಣೆ ಅಡಿ 22 ಟಿಎಂಸಿ ನೀರನ್ನು ಬಳಸಿಕೊಳ್ಳಲು ವಿವರವಾದ ಯೋಜನಾ ವರದಿ ರೂಪಿಸಲು ಸಿಎಂ ಕ್ರಮ ಕೈಗೊಂಡಿದ್ದಾರೆ.
ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್
ಅದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಾವರಿ ಅನುಕೂಲವಾಗಲಿದೆ. ಏತ ನೀರಾವರಿ ಯೋಜನೆಗಳ ವ್ಯವಸ್ಥಿತ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಕಾರ್ಯ ನೀತಿ ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಡ್ರಿಪ್ ಯೋಜನೆಯಡಿ ರಾಜ್ಯದ 58 ಅಣೆಕಟ್ಟೆಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ 1500 ಕೋಟಿ ರೂಪಾಯಿಗಳ ಪ್ರಸ್ತಾವನೆ ಇರಿಸಿದ್ದಾರೆ. ಈ ಕ್ರಮಗಳು ಮುಖ್ಯಮಂತ್ರಿಗಳ ದೂರದೃಷ್ಟಿಗೆ ಹಿಡಿದ ಕೈಗನ್ನಡಿ ಎಂದು ಬೊಮ್ಮಾಯಿ ಅವರು ಹೇಳಿದರು.
ಕಿತ್ತೂರು ಕೋಟೆ ಅಭಿವೃದ್ಧಿ ಮತ್ತು ಆದುನಿಕರಣಕ್ಕೆ 50 ಕೋಟಿ, ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಯಾತ್ರಿ ನಿವಾಸ ನಿರ್ಮಾಣ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 5 ನೂರು ಕೋಟಿ ರೂಪಾಯಿ ಮಿಸಲಿರಿಸಿರುವುದು ನಿಜಕ್ಕೂ ಸ್ವಾಗತಾರ್ಹ ಎಂದಿದ್ದಾರೆ.
Recommended Video
ಪೊಲೀಸ್ ಇಲಾಖೆಗೆ ಸಾಕಷ್ಟು ಅನುದಾನ
ರಾಜ್ಯದಲ್ಲಿ ಸ್ವಂತ ಜಾಗದಲ್ಲಿ 100 ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ 2 ನೂರು ಕೋಟಿ ರೂ., ಪೊಲೀಸ್ ಗೃಹ ನಿರ್ಮಾಣ ಯೋಜನೆಯಡಿ 10,032 ವಸತಿಗೃಹ ನಿರ್ಮಾಣಕ್ಕೆ 2740 ಕೋಟಿ ರೂ. ನಿಗದಿ, ಶಿಗ್ಗಾವಿ ತಾಲೂಕಿನ ರಾಜ್ಯ ಮೀಸಲು ಪಡೆಯ ಹತ್ತನೇ ಬಟಾಲಿಯನ್ ಬಲಪಡಿಸಲು ಎಂಟು ಕೋಟಿ ರೂಪಾಯಿ ಅನುದಾನ, ಹಾವೇರಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನೂತನ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ತಲಾ 8 ಕೋಟಿ ನಿಗದಿ, ಕರಾವಳಿ ಕಾವಲು ಪಡೆಯನ್ನು ಹಂತಹಂತವಾಗಿ ಬಲಪಡಿಸಲು 2 ಕೋಟಿ, 8 ಕಾರಾಗೃಹಗಳ ಸಾಮರ್ಥ್ಯ ಹೆಚ್ಚಿಸಲು 40 ಕೋಟಿ ರೂ. ಅನುದಾನ, ಕೈದಿಗಳನ್ನು ಕಾರಾಗ್ರಹದಿಂದ ಆನ್ಲೈನ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲು ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯಕ್ಕಾಗಿ 15 ಕೋಟಿ ಹಣವನ್ನು ಬಜೆಟ್ ನಲ್ಲಿ ನಿಗದಿ ಮಾಡಿರುವ ಮುಖ್ಯಮಂತ್ರಿಗಳು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿರುವುದನ್ನು ಸ್ವಾಗತಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯ ಬಜೆಟ್ 2021: ಆದಾಯ ಮತ್ತು ಖರ್ಚಿನ ಲೆಕ್ಕಾಚಾರ ಹೀಗಿದೆ