ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಕ್ವಾರಂಟೈನ್ನಲ್ಲಿ; ಸಚಿವರ ಸ್ಪಷ್ಟನೆ
ಬೆಂಗಳೂರು, ಜೂನ್ 28 : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಜುಲೈ 4ರ ತನಕ ಪರೀಕ್ಷೆಗಳು ನಡೆಯಲಿವೆ. ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವರು ಅಭಯ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ 25 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಒಟ್ಟು 57 ವಿದ್ಯಾರ್ಥಿಗಳನ್ನು ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಶಿಕ್ಷಣ ಸಚಿವರು ಈ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ ದೃಢ
"ರಾಜ್ಯಾದಾದ್ಯಂತ ಹೋಂ ಕ್ವಾರೆಂಟೈನ್ನಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನವೇ 57 ವಿದ್ಯಾರ್ಥಿಗಳಿದ್ದರು. ಅವರು ಪರೀಕ್ಷೆ ಬರೆಯಲು ಬಂದೇ ಇಲ್ಲ. ಕೊರೊನಾ ಪಾಸಿಟಿವ್ ಎಂದು 25 ವಿದ್ಯಾರ್ಥಿಗಳೂ ಸಹ ಪರೀಕ್ಷೆಯ ಮುಂಚಿನಿಂದಲೇ ಗುರುತಿಸಲ್ಪಟ್ಟವರು. ಅವರೂ ಸಹ ಒಂದು ಪರೀಕ್ಷೆಗೂ ಬಂದಿಲ್ಲ" ಎಂದು ಸಚಿವರು ಹೇಳಿದ್ದಾರೆ.
ಕೈ ಇಲ್ಲದೆ ಕಾಲಿನಲ್ಲಿ ಪರೀಕ್ಷೆ ಬರೆದ ಬಂಟ್ವಾಳ ಹುಡುಗ
ಬೇರೆ-ಬೇರೆ ಕಡೆ ಹರಿದಾಡುತ್ತಿರುವ ಸುದ್ದಿಗಳನ್ನು ನೋಡಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಜುಲೈ 4ರ ತನಕ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
Breaking: ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ಪರೀಕ್ಷೆ ರದ್ದು
ಪೂರಕ ಪರೀಕ್ಷೆ ಬರೆಯಲು ಅವಕಾಶ
ಈಗ ಪರೀಕ್ಷೆಗೆ ಹಾಜರಾಗದ ಈ ವಿದ್ಯಾರ್ಥಿಗಳಿಗೆ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಕುಳಿತುಕೊಳ್ಳುವ ಅವಕಾಶ ನೀಡಲಾಗುವುದು ಮತ್ತು ಅವರನ್ನು Fresh Candidates ಎಂದೇ ಪರಿಗಣಿಸಲಾಗಿಸಲಾಗುವುದು. ಇವರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಯಾವುದೇ ಸೋಂಕಿನ ಲಕ್ಷಣವಿಲ್ಲ
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ಶನಿವಾರ ಪರೀಕ್ಷೆಗೆ ಒಬ್ಬ ವಿದ್ಯಾರ್ಥಿ ಹಾಜರಾಗಿದ್ದ. ಅವನು ಬಂದಾಗ ಸೋಂಕಿನ ಯಾವುದೇ ಲಕ್ಷಣ ಇರಲಿಲ್ಲ. ಆದರೆ, ಈ ಮೊದಲು ಆತ ಡೆಂಗ್ಯೂ ಜ್ವರದ ತಪಾಸಣೆಗೊಳಗಾಗಿದ್ದ. ಆ ಸಂದರ್ಭದಲ್ಲಿ ಕೊರೊನಾ ಸೋಂಕಿನ ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿತ್ತು.
ಕೊರೊನಾ ಸೋಂಕು ದೃಢ
ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾಗ ಪರೀಕ್ಷಾ ಕೇಂದ್ರದಲ್ಲಿಯೇ ಸ್ವೀಕೃತವಾದ ವೈದ್ಯಕೀಯ ವರದಿಯಲ್ಲಿ ಸೋಂಕು ದೃಡಪಟ್ಟಿದ್ದು ಕೂಡಲೇ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಯಿತು. ಆತನ ಜೊತೆ ಆ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಇತರೆ 19 ವಿದ್ಯಾರ್ಥಿಗಳನ್ನು ಸಹ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಅವರ ಫಲಿತಾಂಶ ದೊರಕಲಿದೆ ಎಂದು ಸಚಿವರು ಹೇಳಿದ್ದಾರೆ.
ಆರೋಗ್ಯ ಇಲಾಖೆ ಅಭಿಪ್ರಾಯ
ಆರೋಗ್ಯ ಇಲಾಖೆಯ ಅಭಿಪ್ರಾಯ ಪಡೆದು ಈ ವಿದ್ಯಾರ್ಥಿಗಳಿಗೆ ಮುಂದಿನ ಪರೀಕ್ಷೆ ಕುರಿತು ನಿರ್ಧರಿಸಲಾಗುತ್ತದೆ. ಆ ಎಲ್ಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆಯ ಕ್ರಮ ಕೈಗೊಳ್ಳಲಾಗುತ್ತದೆ. ಶನಿವಾರ ಇಡೀ ರಾಜ್ಯದಲ್ಲಿ ಗಣಿತ ಪರೀಕ್ಷೆಗೆ 97.93% ಮಕ್ಕಳು ಹಾಜರಾಗಿದ್ದರು. ಪರೀಕ್ಷಾ ಕೇಂದ್ರದಿಂದ ಹೊರಬಂದಾಗ ಅವರೆಲ್ಲರ ಮುಖದಲ್ಲಿ ಗೆಲುವು ಇದ್ದದ್ದನ್ನು ಎಲ್ಲ ಪೋಷಕರು ಗಮನಿಸಿ ಆನಂದ ಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.