ಬೆಂಗಳೂರಿನಲ್ಲಿ ಕೊರೊನಾ ಸೋಂಕು ಏರಿಕೆ: ತಪ್ಪು ಆಗುತ್ತಿರುವುದು ಎಲ್ಲಿ?
ಬೆಂಗಳೂರು, ಮಾರ್ಚ್ 17: ದೇಶಾದ್ಯಂತ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ಕ್ರಮೇಣ ಹೆಚ್ಚುತ್ತಿದೆ. ಮಹಾಮಾರಿ ಕೊವಿಡ್-19 ಹೊಸ ಅಲೆ ಆತಂಕದ ನಡುವೆ ಸೋಂಕು ನಿಯಂತ್ರಿಸುವ ಭರವಸೆ ಕ್ಷೀಣಿಸುತ್ತಿದೆ. ಇದರ ಮಧ್ಯ ಸರ್ಕಾರದ ಕಣ್ಗಾವಲು ವ್ಯವಸ್ಥೆಗಳೂ ಕಡಿಮೆಯಾಗುತ್ತಿದೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಯನ್ನೇ ಬರೆದಿದೆ. ಡಿಸೆಂಬರ್.25ರ ನಂತರದಲ್ಲಿ ಮೊದಲ ಬಾರಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ 1,000ದ ಗಡಿ ದಾಟಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ಬೆಂಗಳೂರಿನಲ್ಲಿ 2021ರ ಆರಂಭದಿಂದ ಈಚೆಗೆ ಕೊರೊನಾವೈರಸ್ ಸೋಂಕಿತರ ಸಂಪರ್ಕಿತರನ್ನು ಶೋಧಿಸುವುದು ಮತ್ತು ಗೃಹ ದಿಗ್ಬಂಧನದಲ್ಲಿ ಇಡುವ ವ್ಯವಸ್ಥೆಯನ್ನು ಕಡೆಗಣಿಸಿರುವುದೇ ಈ ಪರಿಸ್ಥಿತಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಕಳೆದ 7 ದಿನಗಳಲ್ಲಿ ಶೇ.53.30 ಸೋಂಕಿತರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. ಇದೇ 7 ದಿನಗಳ ಅವಧಿಯಲ್ಲಿ ಶೇ.53.90ರಷ್ಟು ಹೊಸ ಪ್ರಕರಣಗಳು ಪತ್ತೆಯಾಗಿದೆ.

ಎಲ್ಲ ಇಲಾಖೆ ಸಿಬ್ಬಂದಿಗೆ ಕೊರೊನಾ ಲಸಿಕೆ ವಿತರಣೆ
ಕೊರೊನಾವೈರಸ್ ಲಸಿಕೆ ಚಾಲನೆಗೆ ಪ್ರೇರೇಪಿಸಲ್ಪಟ್ಟ ಸಿಬ್ಬಂದಿ ಕೊರತೆಯಿಂದಾಗಿ ಸೋಂಕಿತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ.ಗಿರಿಧರ್ ಬಾಬು ದೂಷಿಸಿದ್ದಾರೆ. ಇದೀಗ ಎಲ್ಲಾ ಇಲಾಖೆಗಳ ಸಿಬ್ಬಂದಿಗೆ ಲಸಿಕೆ ನೀಡುವುದಕ್ಕಾಗಿ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಕೊರೊನಾವೈರಸ್ ಸೋಂಕಿತರನ್ನು ಪತ್ತೆ ಹಚ್ಚಲಾಗುತ್ತಿದೆಯಾದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೂ ಆ ಸಂಖ್ಯೆಗಳನ್ನು ನಮೂದಿಸಿಕೊಳ್ಳುತ್ತಿಲ್ಲ ಎಂದು ಮತ್ತೊಬ್ಬ ಅಧಿಕಾರಿ ಆರೋಪಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದ ಹೆಚ್ಚಿದ ಆತಂಕ
ಬೆಂಗಳೂರಿನಲ್ಲಿ ಕೊವಿಡ್-19 ಸೋಂಕಿನ ಸಮಸ್ಯೆ ತೀವ್ರಗೊಂಡಿದೆ ಎಂದು ರಾಜ್ಯ ಕೊವಿಡ್ ವಾರ್ ರೂಮ್ ನಿರ್ದೇಶಕ ಮುನೀಷ್ ಮೌದ್ಗಿಲ್ ತಿಳಿಸಿದ್ದಾರೆ. ಜನರು ಸ್ವಯಂಪ್ರೇರಿತರಾಗಿ ಐಸೋಲೇಟ್ ಆಗುತ್ತಿಲ್ಲದ ಕಾರಣದಿಂದಾಗಿಯೇ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮನೆಯ ಒಬ್ಬ ಸದಸ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದರೆ, ಇಡೀ ಕುಟುಂಬಕ್ಕೆ ಸೋಂಕು ಹರಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಎರಡು ವಾರಗಳಲ್ಲಿ ಪ್ರಾಥಮಿಕ ವರದಿ
ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಸಂಬಂಧಿಸಿದಂತೆ ಒಂದೆರೆಡು ವಾರಗಳಲ್ಲಿ ಪ್ರಾಥಮಿಕ ವರದಿಯನ್ನು ನಿರೀಕ್ಷಿಸಲಾಗಿದೆ. ಎರಡನೇ ಹಂತದಲ್ಲಿ ರೋಗ ಹರಡುವಿಕೆಯ ಮಾದರಿಯಲ್ಲಿ ಬದಲಾವಣೆ ಆಗಿದೆಯೇ ಎಂಬುದನ್ನು ಪತ್ತೆ ಮಾಡುವುದಕ್ಕೆ ಹಾಗೂ ಜಿಲ್ಲಾವಾರು ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಬಗ್ಗೆ ಕಂಡು ಹಿಡಿಯುವುದಕ್ಕೆ ಸಾಧ್ಯವಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಪ್ರತಿರಕ್ಷಣಾ ವ್ಯವಸ್ಥೆ ವೃದ್ಧಿಸುವ ಬಗ್ಗೆ ಕ್ರಮ
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಡಬಲ್ಲ ಪ್ರತಿರಕ್ಷಣಾ ವ್ಯವಸ್ಥೆ ಬಗ್ಗೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಸಮೀಕ್ಷೆಯ ಮುಖ್ಯ ತನಿಖಾಧಿಕಾರಿ ಡಾ. ಬಾಬು ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಡಾ. ಟಿ ಜಾಕೊಬ್ ಜಾನ್ ಅವರು, ಒಂದು ಸಮುದಾಯವನ್ನು ಐಸೋಲೇಟ್ ಮಾಡಿದ ಸಂದರ್ಭದಲ್ಲಿ ಮಾತ್ರ ಪ್ರತಿರಕ್ಷಣಾ ಶಕ್ತಿ ವೃದ್ಧಿಸುವುದಕ್ಕೆ ಸಾಧ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನೀವು ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದ್ದಲ್ಲಿ ಪ್ರತಿರಕ್ಷಣಾ ಶಕ್ತಿ ಹೆಚ್ಚಿಸುವುದಕ್ಕೆ ಸಾಧ್ಯವಾಗುವುದಿಲ್ಲ.

ರಾಜ್ಯದಲ್ಲಿ 1000ದ ಗಡಿ ದಾಟಿದ ಕೊರೊನಾವೈರಸ್
ಕರ್ನಾಟಕದಲ್ಲಿ ಒಂದೇ ದಿನ 1135 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಪೈಕಿ 710 ಕೊವಿಡ್-19 ಹೊಸ ಪ್ರಕರಣಗಳು ಬೆಂಗಳೂರು ನಗರದಲ್ಲೇ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6832ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 962339ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 6 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12403ಕ್ಕೆ ಏರಿಕೆಯಾಗಿದೆ. ಈವರೆಗೂ 940489 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications