ಸಿಎಂ ಕುರ್ಚಿಗಾಗಿ ಪೈಪೋಟಿ, ಕಾಂಗ್ರೆಸ್ನಲ್ಲಿ ಕುದುರೆ ವ್ಯಾಪಾರ: ಬಿವೈ ವಿಜಯೇಂದ್ರ ಹೊಸ ಬಾಂಬ್
ಕಲಬುರ್ಗಿ, ಜುಲೈ 19: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭರ್ಜರಿಯಾಗಿ ಪೈಪೋಟಿ ನಡೆಯುತ್ತಿದೆ. ಕುದುರೆ ವ್ಯಾಪಾರವೂ ಆರಂಭವಾಗಿದೆ. ಈ ಸರಕಾರ ಯಾವುದೇ ಸಾಧನೆ, ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆರೋಪಿಸಿದರು. ಶಾಸಕರ ಬಲಕ್ಕಾಗಿ ರೇಟ್ ಫಿಕ್ಸಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯನವರು ನಾನೇ 5 ವರ್ಷ ಸಿಎಂ ಎಂದು ದೆಹಲಿಯಲ್ಲಿ ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡಿಗೆ ನೇರವಾಗಿ ಸವಾಲನ್ನು ಹಾಕಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರ ಕುರ್ಚಿ ಯಾವಾಗ ಬಲ ಕಳಕೊಳ್ಳುತ್ತದೋ, ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ ಅನಿಸಿದಾಗ, ಅಸ್ಥಿರತೆ ಕಾಡಿದಾಗಲೆಲ್ಲ ಸಮಾವೇಶಗಳನ್ನು ಅವರು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಸಿದ್ದರಾಮಯ್ಯನವರು ಎಂದರೆ ಸಮಾವೇಶ, ಸಮಾವೇಶ ಎಂದರೆ ಸಿದ್ದರಾಮಯ್ಯನವರು. ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಅಹಿಂದ ಸಮುದಾಯಗಳನ್ನು ಮುಂದೆ ಇಡುತ್ತಾರೆ. ಆ ಸಮುದಾಯಗಳನ್ನು ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಸಮಾವೇಶ ಮಾಡಿ, ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಬೆದರಿಕೆ ಒಡ್ಡುವ ಕುತಂತ್ರಗಳನ್ನು ಮಾಡುತ್ತಾರೆಯೇ ವಿನಾ ರಾಜ್ಯದ ಮುಖ್ಯಮಂತ್ರಿಯಾಗಿ ಅವರ ಎರಡೂವರೆ ವರ್ಷದ ಆಡಳಿತದಲ್ಲಿ ಸಾಧನೆ ಶೂನ್ಯ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಸಾಧನೆ ಮಾಡಿದ್ದರೆ ರಾಜ್ಯದ ಉಸ್ತುವಾರಿ ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬಂದು ಶಾಸಕರನ್ನು ಮಾತನಾಡಿಸುವ ಮತ್ತು ಅವರ ಅಸಮಾಧಾನ ಹೋಗಲಾಡಿಸುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ. ಶಾಸಕರ ಅಸಮಾಧಾನ ಅರ್ಥ ಮಾಡಿಕೊಳ್ಳಲು ಮತ್ತು ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಯಾರನ್ನು ಮಾಡಬೇಕೆಂದು ಶಾಸಕರ ಅಂತರಾಳದಲ್ಲಿ ಏನಿದೆ ಎಂದು ತಿಳಿಯಲು ಸುರ್ಜೇವಾಲಾ ಅವರು ಪದೇಪದೇ ಬರುತ್ತಿದ್ದಾರೆ. ಸಿದ್ದರಾಮಯ್ಯನವರ ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ಅನಿಶ್ಚಿತತೆ ಕಾಡುತ್ತಿರುವ ಕಾರಣ ಈ ರೀತಿ ಸಮಾವೇಶ ಮಾಡುವ ಮೂಲಕ ಹೈಕಮಾಂಡ್ಗೆ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ದೆಹಲಿಯಲ್ಲಿ ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಭೇಟಿಗೆ ಅವಕಾಶವನ್ನೂ ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದು ವಿವರಿಸಿದರು. ಕಾಂಗ್ರೆಸ್ ಶಾಸಕರು ಒಳಗೊಳಗೇ ಕತ್ತಿ ಮಸೆಯುತ್ತಿದ್ದಾರೆ. ಸಿದ್ದರಾಮಯ್ಯರ ಪರ ಕೆಲವರು, ಡಿಕೆಶಿ ಪರ ಇನ್ನೂ ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಶಾಸಕರಿಗೆ ಅನುದಾನದಲ್ಲಿ ತಾರತಮ್ಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಕೃಪೆ ತೋರಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಎರಡು ವರ್ಷ ಆಡಳಿತಾವಧಿ ಮುಗಿದರೂ ಅನುದಾನ ಸಿಗದ ಕುರಿತು ಅವರ ಪಕ್ಷದ ಶಾಸಕರೇ ಅಸಮಾಧಾನ ತೋಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಅನುದಾನದ ಕಪಟ ನಾಟಕ ಆಡುತ್ತಿದ್ದಾರೆ ಎಂದು ಟೀಕಿಸಿದರು. 50 ಕೋಟಿ ಬಿಡುಗಡೆಗೆ ಸಿಎಂ ಪತ್ರ ಬರೆದಿದ್ದಾರೆ. ಅಷ್ಟೇ ಬಿಡುಗಡೆ ಆಗಲಿದೆಯೇ? ಯಾವಾಗ ಬಿಡುಗಡೆ ಆಗಲಿದೆ? ಯಾವಾಗ ಶಾಸಕರ ಕೈ ಸೇರಲಿದೆ? ಅಭಿವೃದ್ಧಿ ಕೆಲಸ ಆಗುವುದು ಯಾವಾಗ- ಇವೆಲ್ಲವೂ ಯಕ್ಷಪ್ರಶ್ನೆ ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಆಡಳಿತ ಪಕ್ಷದವರ ಕಣ್ಣಿಗೆ ಬೆಣ್ಣೆ, ವಿಪಕ್ಷದವರ ಕಣ್ಣಿಗೆ ಸುಣ್ಣ ಎಂಬುದು ನಿರಂತರವಾಗಿ ನಡೆಯುತ್ತ ಬಂದಿದೆ. ಈಗಲೂ ಅದನ್ನೇ ಮುಂದುವರೆಸಿದ್ದಾರೆ ಎಂದು ತಿಳಿಸಿದರು.












Click it and Unblock the Notifications