ಆಸ್ಪತ್ರೆಗಳಿಗೆ ನಿರಂತರ ವಿದ್ಯುತ್: ಸಚಿವ ಖಾದರ್ ಆದೇಶ

ಅತ್ಯಗತ್ಯ ಆರೋಗ್ಯ ಸೇವಾ ಕ್ಷೇತ್ರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಅವರು ಕೋಲಾರ ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ದಿನದ 24 ಗಂಟೆಯೂ ಕಡ್ಡಾಯವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಸಚಿವ ಯುಟಿ ಖಾದರ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆಯಲ್ಲಿ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಸುವಲ್ಲಿ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬುದರ ಬಗ್ಗೆ ಕೇಳಿಬಂದ ದೂರಿಗೆ ಸ್ಪಂದಿಸಿದ ಸಚಿವರು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾ, ಈ ಆದೇಶ ಹೊರಡಿಸಿದರು.
'ಅಗತ್ಯ ಸೇವೆಗಳಲ್ಲಿ ಒಂದಾದ ಆರೋಗ್ಯ ಇಲಾಖೆಯ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ಆಸ್ಪತ್ರೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಬೇಕು. ಹಾಗೆಯೇ, ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ಆದ್ಯತೆಯಿಂದ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು' ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಕೊಳವೆ ಬಾವಿಗಳನ್ನು ಕೊರೆದು ಹಲವು ತಿಂಗಳಾದರೂ ವಿದ್ಯುತ್ ಸಂಪರ್ಕ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಹಾಗೂ ಅನಿಯತಕಾಲಿಕವಾಗಿ ಲೋಡ್ ಶೆಡ್ಡಿಂಗ್ ಮಾಡುವುದರ ಬಗ್ಗೆಯೂ ವಿಚಾರಣೆ ನಡೆಸಿದ ಸಚಿವ ಖಾದರ್ ಅವರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಹಾಗೂ ಬೆಸ್ಕಾಂ ನಡುವೆ ಸಂಪರ್ಕ ಸಂಯೋಜನೆಯ ಕೊರತೆ ಕಾಣುತ್ತಿದೆ. ಇದರ ಪರಿಣಾಮ ಅಭಿವೃದ್ಧಿ ಕುಂಠಿತವಾಗುತ್ತಿದೆ. ಮುಂದೆ ಹಾಗಾಗದಂತೆ ಜಾಗ್ರತೆ ವಹಿಸುವಂತೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮುನಿ ಆಂಜನಪ್ಪ, ಜಿಲ್ಲಾಧಿಕಾರಿ ಡಿಕೆ ರವಿ ಅವರು ಸಭೆಯಲ್ಲಿ ಮಾತನಾಡಿದರು. ಜಿಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ಎಂ ಝುಲ್ಫಿಖರುಲ್ಲಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಕೋಲಾರಕ್ಕೆ ಹೊಸ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ : ಹಿರಿಯ ಐಎಎಸ್ ವಿನೋತ್ ಪ್ರಿಯಾ ಅವರು ಕೋಲಾರ ಜಿಲ್ಲಾ ಪಂಚಾಯತ್ ಹೊಸ CEO ಆಗಿ ವರ್ಗಾವಣೆಗೊಂಡಿದ್ದಾರೆ.












Click it and Unblock the Notifications