28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳೆಷ್ಟು?
ಬೆಂಗಳೂರು, ಮೇ 20: ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಪುನರ್ ರಚನೆ ಕುರಿತು ಚರ್ಚೆ ನಡೆಯುತ್ತಿದ್ದು, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ .ಆದ್ರೆ ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ನೇಹಾ ಕೊಲೆ ಪ್ರಕರಣದ ಆರೋಪಿ ಬಂಧಿತನಾಗಿ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಆಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕೊಲೆ ಗಳ ಪ್ರಮಾಣ ಕಡಿಮೆ ಆಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಆದರೆ ಅಂಕಿ ಅಂಶಗಳಿಗಿಂತ ಸಮಾಜದ ಸ್ವಾಸ್ಥ್ಯ ಮುಖ್ಯ. ಹೀಗಾಗಿ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟಲು ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇವೆ. ಕರ್ತವ್ಯಲೋಪ ಮಾಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸಣ್ಣ ಪುಟ್ಟ ಪಕ್ಷಗಳ ಜೊತೆ ಒಕ್ಕೂಟ ರಚಿಸಿಕೊಂಡಿದೆ ಎನ್ನುವ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, NDA ಕೂಡ ಒಕ್ಕೂಟವೇ ಆಗಿದೆ. ಅವರು ಇತರೆ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ನಾವು ಮಾಡಿಕೊಳ್ಳಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ರಾಜ್ಯ ಭೀಕರ ಪರಿಹಾರಕ್ಕೆ ತುತ್ತಾದಾಗಲೂ ರಾಜ್ಯದ ಪಾಲಿನ ಬರ ಪರಿಹಾರವನ್ನು ಕೇಂದ್ರ ಕೊಡಲಿಲ್ಲ. ನಾವು ನಮ್ಮ ಪಾಲು ಕೇಳಲು ಪದೇ ಪದೇ ಕೇಂದ್ರಕ್ಕೆ ಹೋಗಿ ಮನವಿ ಮಾಡಿದರೂ ಕೊಡಲಿಲ್ಲ. ನಾನೇ ಪ್ರಧಾನಿ ಮತ್ತು ಅಮಿತ್ ಶಾ ಅವರಿಗೆ ಮನವಿ ಕೊಟ್ಟೆ. ಆದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು.
ಆಮೇಲೆ ಅಮಿತ್ ಶಾ, ಮೋದಿ, ನಿರ್ಮಲಾ ಸೀತಾರಾಮನ್ ಪದೇ ಪದೇ ರಾಜ್ಯಕ್ಕೆ ಬಂದು ಜನರಿಗೆ ಸುಳ್ಳು ಹೇಳಿದರು. ಆದರೆ, ಸುಪ್ರೀಂಕೋರ್ಟ್ ಎದುರು ಮಾತ್ರ ಎರಡು ವಾರ ಸಮಯ ಕೇಳಿದರು. ಸುಪ್ರೀಂಕೋರ್ಟ್ ಗಟ್ಟಿಯಾಗಿ ಹೇಳಿದ ಬಳಿಕ ನಾವು ಕೇಳಿದ್ದರಲ್ಲಿ 19% ಮಾತ್ರ ಪರಿಹಾರ ಕೊಟ್ಟಿದ್ದಾರೆ. ನಾವು ಬಾಕಿ ಪರಿಹಾರಕ್ಕಾಗಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು.
ಕೇಂದ್ರದ ಅಸಹಕಾರದ ನಡುವೆಯೂ ನಾವು ರಾಜ್ಯದ ಜನತೆಯ ಕೈ ಬಿಡಲಿಲ್ಲ. ಪರಿಹಾರ ಕೊಟ್ಟೆವು. ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ. ರೈತರಿಗೆ ಮಾತ್ರ ಪರಿಹಾರದ ಹಣ ಮೀಸಲಿಟ್ಟಿದ್ದೇವೆ ಎಂದರು.
ಇನ್ನೂ ಬಿಜೆಪಿಯ ದೇವರಾಜೇಗೌಡ ಅವರೇ ಮೊದಲಿಗೆ ಪತ್ರಿಕಾಗೋಷ್ಠಿ ನಡೆಸಿದ್ದರು. ಅತ್ಯಾಚಾರಕ್ಕೆ ಒಳಗಾದವರು ದೂರು ಕೊಟ್ಟರು. ಆರು ತಿಂಗಳ ಮೊದಲೇ ಬಿಜೆಪಿಗೆ ವಿಷಯ ಗೊತ್ತಿತ್ತು. ಆದರೂ ಬಿಜೆಪಿ ಪ್ರಜ್ವಲ್ ಗೆ NDA ಟಿಕೆಟ್ ನೀಡಿತು. ಮೋದಿ ಬಂದು ಪ್ರಜ್ವಲ್ ಗೆಲ್ಲಿಸಲು ಭಾಷಣ ಮಾಡಿದರು.
ದೇಶದಲ್ಲಿ ಗುಜರಾತ್ ಮಾದರಿಯೇ ಇಲ್ಲ. ಅದು ಸುಳ್ಳು ಎನ್ನುವುದು ಸಾಬೀತಾಗಿದೆ. ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ, ಜಾರಿ ಮಾಡಿದ್ದರಿಂದ ದೇಶದಲ್ಲಿ ಕರ್ನಾಟಕ ಮಾಡೆಲ್ ಜಾರಿಯಲ್ಲಿದೆ. ಕೆಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು ನಮ್ಮ ಕಾರ್ಯಕ್ರಮಗಳ ಜಾರಿ ಆಧಾರದಲ್ಲಿ ಚರ್ಚಿಸಿ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications