ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಗೆ ಸಿದ್ದರಾಮಯ್ಯ ಕೊಟ್ಟ ಸಲಹೆ
ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವ್ಯಂಗ್ಯವಾಗಿ ಸಲಹೆಯನ್ನು ನೀಡಿದ್ದಾರೆ.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣದಿಂದಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯಸಭಾ ಚುನಾವಣೆ : ಕ್ರಾಸ್ ವೋಟಿಂಗ್ ಭೀತಿ: ಪಕ್ಷದ ಅಧಿಕೃತ ಏಜೆಂಟ್ ಆಗಿ ಖುದ್ದು ಡಿಕೆಶಿ
"ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ @BCNagesh_bjp ಅವರನ್ನು ಮುಖ್ಯಮಂತ್ರಿ @BSBommai ಅವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು"ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ವಿಚಾರದಲ್ಲಿ ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆ NSUI ಕಾರ್ಯಕರ್ತರು ಶಿಕ್ಷಣ ಸಚಿವರ ತಿಪಟೂರು ನಿವಾಸದಲ್ಲಿ ಪ್ರತಿಭಟನೆ ನಡೆಸಿದ್ದರು. ಸಂಘಟನೆಯ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತು ಇತರ ಪದಾಧಿಕಾರಿಗಳನ್ನು ಬಂಧಿಸಲಾಗಿತ್ತು. ಗುರುವಾರ (ಜೂನ್ 9) ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಮುಖಂಡರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ. ಬೊಮ್ಮಾಯಿಗೆ ಸಿದ್ದರಾಮಯ್ಯ ಕೊಟ್ಟ ಸಲಹೆ, ಮುಂದೆ ಓದಿ..
ಕನ್ನಡ ಭಾಷೆ ಕಲಿಸುವ ನಿಯಮ ತಿದ್ದುಪಡಿಗೆ ಟಿಎಸ್ ನಾಗಾಭರಣ ಆಕ್ಷೇಪ
ಸಿದ್ದರಾಮಯ್ಯ ಟ್ವೀಟ್ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.
"ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿರುವ ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ತಕ್ಷಣ ಬಂಧಿಸಿ, ಈತನಿಂದ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಕಕ್ಕಿಸಬೇಕು" ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.
ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು
"ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರಗಳನ್ನು ಕಲುಷಿತಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು @CMofKarnataka ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು"ಎಂದು ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.
ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ
"ಪಠ್ಯಪುಸ್ತಕ ಪರಿಷ್ಕರಣೆಯಂತಹ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಟ್ರೋಲರ್ ಗೆ ಒಪ್ಪಿಸಿ, ಅವನ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿರುವ ರಾಡಿಗಳನ್ನು ಸಮರ್ಥಿಸುತ್ತಿರುವ @BJP4Karnataka ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ? ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಇದೇ ರೀತಿ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ @BJP4Karnataka ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ" ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ
"ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ. @CMofKarnataka ಅವರೇ, ಮೊದಲು ಇದನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಇಷ್ಟೆಲ್ಲ ತಪರಾಕಿಗಳ ನಂತರವೂ @CMofKarnataka ಅವರು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ಈ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ಧವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ನಿಮ್ಮ ತಲೆದಂಡ ಅನಿವಾರ್ಯವಾಗಬಹುದು" ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.
Recommended Video