ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ನಲ್ಲಿ ಫೈಟ್: ಶಾಮನೂರು ಕುಟುಂಬಕ್ಕೆ ಹೊಸ ತಲೆ ಸವಾಲು
ದಾವಣಗೆರೆ, ಫೆಬ್ರವರಿ 07: ವಿದ್ಯಾಕಾಶಿ ಎಂದೇ ಹೆಸರು ಪಡೆದಿರುವ ದಾವಣಗೆರೆಯಲ್ಲಿ 2024ರ ಲೋಕಸಭೆ ಚುನಾವಣೆ ಕಾವು ಜೋರಾಗಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.
ಹೌದು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಹಾಲಿ ಸಂಸದರಾದ ಜಿ ಎಂ ಸಿದ್ದೇಶ್ವರ್ ಇದ್ದಾರೆ. ಈ ಬಾರೀ ಬಿಜೆಪಿಯಿಂದ ಜಿ ಎಂ ಸಿದ್ದೇಶ್ವರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದಿಲ್ಲ ಎನ್ನುವ ಮಾತುಗಳು ಕೇಳಿ ಬಂದಿದ್ದು, ಬಿಜೆಪಿಯಿಂದ ಮಾತ್ರವಲ್ಲದೇ ಕಾಂಗ್ರೆಸ್ ನಲ್ಲೂ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಕಾಂಗ್ರೆಸ್ನಲ್ಲಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಇನ್ ಸೈಟ್ಸ್ ಐಎಎಸ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕ ವಿನಯ್ ಕುಮಾರ್ ಹೆಸರು ಹೆಚ್ಚು ಪ್ರಚಲಿತದಲ್ಲಿದ್ದರೇ ಕಾಂಗ್ರೆಸ್ನ ಯುವ ನಾಯಕ ನಿಖಿಲ್ ಕೊಂಡಜ್ಜಿ ಹೆಸರು ತೆರೆಮರೆಯಲ್ಲಿ ಓಡಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್ ಅವರು ದಾವಣೆಗೆರೆ ಜಿಲ್ಲೆಯಲ್ಲಿ ಪ್ರಚಾರ ಕಾರ್ಯವನ್ನ ಆರಂಭಿಸಿದ್ದು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಯುವ ನಾಯಕರಾಗಿರುವ ವಿನಯ್ ಕುಮಾರ್ ಅವರು ಕುರುಬ ಸಮುದಾಯದ ನಾಯಕರಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರ ಜೊತೆಗೆ ಟಿಕೆಟ್ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಶಾಮಾನೂರು ಕುಟುಂಬಕ್ಕೆ ಹೊಸ ತಲೆ ಮಾರು ಸವಾಲು ಹಾಕುವ ನಿಟ್ಟಿನಲ್ಲಿ ವಿನಯ್ ಕುಮಾರ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿದ್ದು, ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಇನ್ನೂ ಶಾಮನೂರು ಶಿವಶಂಕರಪ್ಪ ಅವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಹ ಕ್ಷೇತ್ರದಲ್ಲಿ ಸಂಚಾರಕಾರ್ಯ ಆರಂಭಿಸಿದ್ದಾರೆ. ಶಾಮನೂರು ಕುಟುಂಬಸ್ಥರಿಂದಲೂ ಟಿಕೆಟ್ ಗಾಗಿ ಲಾಬಿ ಮುಂದೂವರೆದಿದೆ ಎನ್ನಲಾಗಿದೆ. ಈ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಟಿಕೆಟ್ಗೆ ತಲೆಕೆಡಿಸಿಕೊಂಡಿಲ್ಲ, ಮನೆ ಮನೆಗೆ ಆರೋಗ್ಯ ಸೇವೆ ನೀಡಬೇಕು ಎಂಬ ಕಲ್ಪನೆಯೊಂದಿಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಲೋಕಸಭಾ ಚುನಾವಣೆಯ ಅಜೆಂಡಾ ಇಟ್ಟುಕೊಂಡು ಈ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ನಾನು ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ಕುರಿತಂತೆ ಮನೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಕಳೆದ ಮೂರ್ನಾಲ್ಕು ತಿಂಗಳಿನಿಂದಲೂ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಮಾತು ಕೇಳಿ ಬರುತ್ತಿವೆ. ಕಾರ್ಯಕರ್ತರು, ಮುಖಂಡರ ಅಪೇಕ್ಷೆ ಇದೆ. ಹಾಗೆಂದ ಮಾತ್ರಕ್ಕೆ ನಾನು ತೀರ್ಮಾನಿಸಲು ಆಗುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ದಾವಣಗೆರೆ ಕಾಂಗ್ರೆಸ್ ಸಂಯೋಜಕರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.
ಒಟ್ನಲಿ ಮಧ್ಯ ಕರ್ನಾಟಕದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಾವಣಗೆರೆ ಸದ್ಯ ಬಿಜೆಪಿ ಸಂಸದರಿದ್ದು, ಈ ಬಾರಿ ಜಿ ಎಂ ಸಿದ್ದೇಶ್ವರ್ ಅವರಿಗೆ ಟಿಕೆಟ್ ಕೈ ತಪ್ಪಿಲಿದೆ ಎಂದು ಹೇಳಲಾಗಿದ್ದು, ಇತ್ತ ಕಾಂಗ್ರೆಸ್ ನಲ್ಲಿ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಕುಟುಂಬಸ್ಥರನ್ನ ಕಣ್ಕಕಿಳಿಸಲು ಪ್ಲಾನ್ ನಡೆಸಿದ್ದು, ಇತ್ತ ಶಾಮನೂರು ಕುಟುಂಬಕ್ಕೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಯುವ ನಾಯಕ ವಿನಯ್ ಕುಮಾರ್ ಕಣದಲ್ಲಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದು ನೋಡ್ಬೇಕಾಗಿದೆ.












Click it and Unblock the Notifications