Lok Sabha Election 2024: ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಲಾಬಿ: ರೇಸ್ ನಲ್ಲಿ ಯಾರಿದ್ದಾರೆ?
ಬೆಂಗಳೂರು,ಡಿಸೆಂಬರ್ 29: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಸರ್ಕಾರವನ್ನ ರಚಿಸಿರುವ ಕಾಂಗ್ರೆಸ್ ಇದೀಗ ಭರ್ಜರಿ ಲೋಕಸಮರದ ತಯಾರಿ ನಡೆಸುತ್ತಿದೆ. ಅಲ್ಲದೇ ಹೈಕಮಾಂಡ್ ಕೊಟ್ಟ ಟಾರ್ಗೆಟ್ ಗೆಲ್ಲಲ್ಲು ಸಚಿವರಿಗೆ ಟಾಸ್ಕ್ ಕೊಟ್ಟಿದ್ದು, ಇತ್ತ ಟಿಕೆಟ್ ಗಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.
ಹೌದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದರಾದ ಶ್ರೀನಿವಾಸಪ್ರಸಾದ್ ಅವರಿದ್ದಾರೆ. ಆದರೆ ಈ ಬಾರೀ ಚಾಮರಾಜನಗರ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ಕಳೆದ ಚಾಮರಾಜನಗರ ಕ್ಷೇತ್ರವನ್ನ ವಶಪಡಿಸಿಕೊಳ್ಳುವ ಸಲುವಾಗಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡಿತ್ತು. ಹೀಗಾಗಿ ಈ ಬಾರಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಚಾಮರಾಜನಗರ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ನಾಯಕರು ಈಗಿನಿಂದಲೇ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನಂಜನಗೂಡು ತಾಲೂಕು ದೊಡ್ಡಕವಲಂದೆಯಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಕ್ಕಾಗಿ ಸಭೆ ನಡೆಸಲಾಗಿದೆ.
ಈಗಾಗಲೇ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೆ. ವೆಂಕಟೇಶ್ ಸಭೆಯಲ್ಲಿ ಭಾಗವಹಿಸಿ ಚಾಮರಾಜನಗರ ಕ್ಷೇತ್ರದ ಆಕಾಂಕ್ಷಿಗಳ ಅಭಿಪ್ರಾಯ ಹಾಗೂ ಕೆಲ ಅಯ್ದ ಮುಖಂಡ ಅಭಿಪ್ರಾಯಗಳನ್ನು ಕೇಳಿ ಹೋಗಿದ್ದಾರೆ. ಆದರೆ, ಈಗಿನ ಆಕಾಂಕ್ಷಿಗಳ ಪೈಕಿ ಯಾರಿಗೆ ಕೈ ಟಿಕೆಟ್ ಸಿಗಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಎಸ್ಸಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಹುರಿಯಾಳು ಯಾರಾಗಲಿದ್ದಾರೆ ಎಂಬ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
2024 ರ ಲೋಕಸಭೆ ಸಮರದಲ್ಲಿ ಕಾಂಗ್ರೆಸ್ ಹುರಿಯಾಳಾಗಲು ಹಲವಾರು ಮಂದಿ ಆಕಾಂಕ್ಷಿಗಳಿದ್ದಾರೆ. ಈ ಆಕಾಂಕ್ಷಿಗಳ ಪೈಕಿ ರಾಜ್ಯ ಸರಕಾರದ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಹೆಸರು ಸಹ ಚಾಲ್ತಿಯಲ್ಲಿದೆ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕರು ಮಹದೇವಪ್ಪ ಅವರ ಹೆಸರನ್ನೇ ಹೆಚ್ಚಾಗಿ ಸೂಚಿಸುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬಂದಿದೆ. ಆದರೆ, ಮಹದೇವಪ್ಪ ಅವರು ಇದಕ್ಕೆ ಒಪ್ಪುತ್ತಿಲ್ಲ. ನನ್ನ ಬದಲಿಗೆ ತಮ್ಮ ಪುತ್ರ ಸುನೀಲ್ ಬೋಸ್ ಅವರಿಗೆ ಟಿಕೆಟ್ ಕೊಡಿ ತಾವು ಗೆಲ್ಲಿಸಿಕೊಂಡು ಬರುತ್ತೇನೆ ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಅವರನ್ನು ಕಣಕ್ಕಿಳಿಸಬೇಕೆಂಬ ಮಾತು ಕಾಂಗ್ರೆಸ್ ಪಡೆಯಲ್ಲಿ ಕೇಳಿ ಬಂದಿದೆ. ಆದರೆ, ಆ ಪ್ರಸ್ತಾಪವನ್ನು ದರ್ಶನ್ ನಯವಾಗಿ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಸಂಸದ ಕಾಗಲವಾಡಿ ಎಂ. ಶಿವಣ್ಣ , ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಸಹ ತಮಗೆ ಟಿಕೆಟ್ ಕೊಡಿ ಎಂದು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಇತ್ತ ಉದ್ಯಮಿ ಕಿರಣ್, ಡಿ.ಎನ್. ನಟರಾಜು, ಡಾ.ರೇಣುಕಾ ಅವರು ಸಹ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ನಲಿ ಕಳೆದುಕೊಂಡ ಚಾಮರಾಜನಗರ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಸೂಕ್ತ ಅಭ್ಯರ್ಥಿಗಳ ಹುಡುಕಾಟವನ್ನ ನಡೆಸಿದ್ದಾರೆ. ಹತ್ತುಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ಚಾಮರಾಜನಗರ ಕ್ಷೇತ್ರದ ಟಿಕೆಟ್ ಗಾಗಿ ಕೇಳಿ ಬಂದಿವೆ, ಆದರೆ ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ವರಿಷ್ಠರು ಎಲ್ಲರ ಅಭಿಪ್ರಾಯವನ್ನು ಪರಿಗಣಿಸಿಯೇ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.












Click it and Unblock the Notifications