ಮಾಜಿ ಸಿಎಂ ಸಂಬಂಧಿಯಿಂದ ನೂರಾರು ಕೋಟಿ ರೂ.ಅಕ್ರಮ
ಬೆಂಗಳೂರು, ನವೆಂಬರ್ 03: ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರ ಹತ್ತಿರದ ಸಂಬಂಧಿಯಿಂದ ಕಿದ್ವಾಯಿ ಆಸ್ಪತ್ರೆ ಹೆಸರಲ್ಲಿ ನೂರಾರು ಕೋಟಿ ರೂ. ವಂಚನೆಯಾಗಿದೆ ಎಂದು ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ಗಂಭೀರ ಆರೋಪ ಮಾಡಿದರು.
ಬಿಜೆಪಿ ಮುಖಂಡರು ಯಾವಾಗಲೂ ನೀತಿ ಬಗ್ಗೆ ಮಾತನಾಡುತ್ತಾರೆ. ಆದರೆ, ಭ್ರಷ್ಟಾಚಾರದಲ್ಲಿ ಮುಳುಗಿರುತ್ತಾರೆ. ಕಿದ್ವಾಯಿ ಆಸ್ಪತ್ರೆ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಟೆಂಡರ್ ಕರೆಯದೆಯೇ ಹಲವು ಬಾರಿ ಆಸ್ಪತ್ರೆಗೆ ನೂರಾರು ಕೋಟಿ ರೂ. ಮೌಲ್ಯದ ಉಪಕರಣಗಳನ್ನು ಖರೀದಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಲಭ್ಯವಾಗಿವೆ. ಮುಖ್ಯಮಂತ್ರಿ ಅಥವಾ ಆರೋಗ್ಯ ಸಚಿವರ ಕುಮ್ಮಕ್ಕು ಇಲ್ಲದೆ ಇದೆಲ್ಲ ಸಾಧ್ಯವಿಲ್ಲ ಎಂದು ದೂರಿದರು.

ಆಸ್ಪತ್ರೆಯಲ್ಲಿ ಸಾಕಷ್ಟು ಉಪಕರಣಗಳಿದ್ದರೂ ಪಿಪಿಪಿ ಮಾದರಿಯಲ್ಲಿ ಲ್ಯಾಬ್ ನಿರ್ಮಾಣಕ್ಕೆ ನಿರ್ಧರಿಸಲಾಯಿತು. ಟೆಂಡರ್ ನಲ್ಲಿ ಭಾಗವಹಿಸುವ ಕಂಪನಿ ಕೇಂದ್ರ ಸರ್ಕಾರದಿಂದ ಮಾನ್ಯತೆ ಸೇರಿ ಐಎಸ್ಒ ಸರ್ಟಿಫಿಕೇಟ್ ಮತ್ತು ಐಸಿಎಂಆರ್ ನಿಂದಲೂ ಪ್ರಮಾಣಪತ್ರ ಪಡೆಯಬೇಕು. ಅಲ್ಲದೆ, ಎನ್ಎಪಿಯಿಂದಲೂ ಪ್ರಮಾಣಪತ್ರ ಪಡೆದಿರಬೇಕು. ಆದರೆ, ಇದ್ಯಾವುದೂ ಇಲ್ಲದೆ ಬಿಎಂಎಸ್ (ಬೆಂಗಳೂರು ಮೆಡಿಕಲ್ ಸಿಸ್ಟಮ್ಸ್) ಎಂಬ ಕಂಪನಿ ಹೋಲ್ ಸೇಲ್ ಡಿಸ್ಟ್ರಿಬ್ಯೂಟರ್ ಆಗಿ ನೋಂದಾಯಿಸಿಕೊಂಡು ಟೆಂಡರ್ ಪಡೆದಿದೆ.
ನವೆಂಬರ್ 06, 2019 ರಲ್ಲಿ ಆಸ್ಪತ್ರೆ ನಿರ್ದೇಶಕರಾಗಿದ್ದ ಡಾ. ರಾಮಚಂದ್ರ ಅವರು ಟೆಂಡರ್ ಗೆ ಒಪ್ಪಿಗೆ ಪತ್ರ ನೀಡಿದ್ದಾರೆ. ಆದರೆ, ಟೆಂಡರ್ ಅಪ್ರೂವ್ ಮಾಡಲು ಅಗತ್ಯವಿರುವ 22 ದಿನಕ್ಕೂ ಮುಂಚಿತವಾಗಿಯೇ ಟೆಂಡರ್ ಅಕ್ಸೆಪ್ಟೆನ್ಸ್ ಲೆಟರ್ ಅನ್ನು ರಾಮಚಂದ್ರ ಅವರು ಬಿಎಂಎಸ್ ಗೆ ನೀಡಿದ್ದಾರೆ. ಈ ರೀತಿ ಮಾಡಲು ಇವರ ಮೇಲೆ ಒತ್ತಡ ಹೇರಿದವರು ಯಾರು?. ಈ ಸಂಬಂಧ ದೊಡ್ಡ ಮಟ್ಟದ ತನಿಖೆ ಅಗತ್ಯವಿದೆ ಎಂದು ಹೇಳಿದರು.

ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿಯೇ ತೆರೆಯಬೇಕು, ಅದಕ್ಕೆ ಒಂದು ಲಕ್ಷ ಬಾಡಿಗೆ ನೀಡಬೇಕು ಮತ್ತು ಬರುವ ಆದಾಯ ಸಮ ಪ್ರಮಾಣದಲ್ಲಿ ಹಂಚಿಕೆಯಾಗಬೇಕೆಂದು ಬಿಎಂಎಸ್-ಕಿದ್ವಾಯಿ ನಡುವೆ ಒಪ್ಪಂದವಾಗಿತ್ತು. ಆದರೆ, ಬಿಎಂಎಸ್ ಈವರೆಗೂ ಬಾಡಿಗೆಯಾಗಲಿ, ಆದಾಯವನ್ನಾಗಲಿ ನೀಡಿಲ್ಲ ಎಂದು ಆರೋಪಿಸಿದರು.
ಕೋವಿಡ್ ಸಾಂಕ್ರಾಮಿಕದ ಕಾಲದಲ್ಲಿ ಐಸಿಎಂಆರ್ ಕೋವಿಡ್ ಪರೀಕ್ಷೆಗಾಗಿ ಕೆಲವು ಆಸ್ಪತ್ರೆಗಳನ್ನು ಆಯ್ಕೆ ಮಾಡಿತ್ತು. ಈ ಪೈಕಿ ಕಿದ್ವಾಯಿ ಆಸ್ಪತ್ರೆ ಕೂಡ ಒಂದು. ಐಸಿಎಂಆರ್ ಕಿದ್ವಾಯಿಗೆ ಒಪ್ಪಿಗೆ ನೀಡುವ ಒಂದು ತಿಂಗಳ ಮೊದಲೇ ಕಿದ್ವಾಯಿ ನಿರ್ದೇಶಕರು ಕೋವಿಡ್ ಪರೀಕ್ಷೆ ನಡೆಸಲು ಯಾವುದೇ ಅರ್ಹತಾ ಪ್ರಮಾಣಪತ್ರ ಇಲ್ಲದ ಬಿಎಂಎಸ್ ಗೆ ಕೋವಿಡ್ ಪರೀಕ್ಷೆಗೆ ಅನುಮತಿ ನೀಡಿದ್ದಾರೆ.
ಕೋವಿಡ್ ಪರೀಕ್ಷೆಗಾಗಿ ಬಿಬಿಎಂಪಿಯವರು ಕಿದ್ವಾಯಿಗೆ ಹಂತ ಹಂತವಾಗಿ 124 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡುತ್ತಾರೆ. ಆದರೆ, ಕಿದ್ವಾಯಿ ಆಸ್ಪತ್ರೆ ಯಾವುದೇ ಅಧಿಕೃತ ಒಪ್ಪಂದವಿಲ್ಲದೆ ಬಿಎಂಎಸ್ ಗೆ ಸಂಪೂರ್ಣ 119 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದೆ. ಈ ಪೈಕಿ 59 ಕೋಟಿ ಹಣ ಕಿದ್ವಾಯಿ ಆಸ್ಪತ್ರೆಗೆ ಬರಬೇಕಿತ್ತು. ಆದರೆ,ಕಿದ್ವಾಯಿಗೆ ಬರಬೇಕಿದ್ದ ಹಣ ಯಾರ ಜೇಬಿಗೆ ಸೇರಿದೆ ಎಂದು ಪ್ರಶ್ನಿಸಿದರು.












Click it and Unblock the Notifications