ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ
ಬಾಗಲಕೋಟೆ, ಆಗಸ್ಟ್ 13: ಅಬಕಾರಿ ಖಾತೆ ಮಾಜಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಟಿ ಬೆಂಬಲಿಗರಿಂದ ನಿರಂತರ ಬೆದರಿಕೆ ಬರುತ್ತಿದ್ದ ಕಾರಣ, ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾರೆ.
ಸಂತ್ರಸ್ತ ಮಹಿಳೆ ವಿಜಯಲಕ್ಷ್ಮಿ ಅವರು ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಹೀಳೆಗೆ 108 ಆಂಬುಲೆನ್ಸ್ ನಲ್ಲೆ ಸೂಕ್ತ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಂದಿರುವ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಅವರು ಪರಿಶೀಲನೆ ನಡೆಸಿದ್ದಾರೆ.
ಮೇಟಿ ಅವರು ಆರೋಪ ಹೊತ್ತ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಸಿಐಡಿ ತನಿಖೆ ನಡೆದು, ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಲಾಯಿತು.
ಆದರೆ, ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಅವರು ಮನಸ್ಸು ಮಾಡಲಿಲ್ಲ. ಇತ್ತ ಸಂತ್ರಸ್ತ ಮಹಿಳೆ ಇತ್ತೀಚೆಗೆ ಆಯುಷ್ ಇಲಾಖೆಯಲ್ಲಿದ್ದ ತಮ್ಮ ಉದ್ಯೋಗ ಉಳಿಸಿಕೊಳ್ಳಲು ಹೆಣಗಾಡಿ, ಪ್ರತಿಭಟನೆ ನಡೆಸಿದ ಘಟನೆ ಇತ್ತೀಚೆಗೆ ವರದಿಯಾಗಿತ್ತು.
ಮೇಟಿ ಅವರ ಪ್ರಕರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕಿ, ಪೊಲೀಸ್ ಅಧಿಕಾರಿ ಅಲ್ಲದೆ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕ, ಸಂಬಂಧಿ ಸಂತೋಷ್ ಪಾತ್ರವಿರುವ ಬಗ್ಗೆ ಮತ್ತೊಮ್ಮೆ ತನಿಖೆ ಆರಂಭಗೊಂಡಿದೆ.
ಸಂತೋಷ್ ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸುಭಾಷ್ ನಡುವೆ ನಿರಂತರ ಸಂಪರ್ಕವಿರುವುದು ಪತ್ತೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಈ ಮಹಿಳೆ ಆತ್ಮಹತ್ಯೆಗೆ ಶರಣಾಗುವ ತೀರ್ಮಾನ ಕೈಗೊಂಡಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.