'ಕತ್ತಿ'ವರಸೆಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ
ಗುಲ್ಬರ್ಗ, ಸೆ. 17 : 'ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ಹಾಗೂ ಎರಡನೇ ರಾಜಧಾನಿ ಸ್ಥಾಪನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯವೆಂದು' ಹೇಳಿರುವ ಸಿಎಂ ಸಿದ್ದರಾಮಯ್ಯ ಹುಕ್ಕೇರಿ ಶಾಸಕ ಉಮೇಶ್ ಕತ್ತಿಗೆ ತಿರುಗೇಟು ನೀಡಿದ್ದಾರೆ.
ಗುಲ್ಬರ್ಗದಲ್ಲಿ ಬುಧವಾರ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದ ಸಿಎಂ, ಅನೇಕ ಮಹನೀಯರು ಪ್ರಾಣ, ಆಸ್ತಿ-ಪಾಸ್ತಿ ಕಳೆದುಕೊಂಡ ಪ್ರಯುಕ್ತ ಹೈದರಾಬಾದ್ ಕರ್ನಾಟಕ ಭಾಗವು ನಿಜಾಮರ ಸಾಮ್ರಾಜ್ಯಶಾಹಿ ಆಡಳಿತ ವ್ಯವಸ್ಥೆಯಿಂದ ವಿಮೋಚನೆಗೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇರ್ಪಡೆಗೊಂಡಿತು ಎಂದರು.
ಗುಲ್ಬರ್ಗದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯ ಸಹಯೋಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮುಯ್ಯ, ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವ ಖಮರುಲ್ ಇಸ್ಲಾಂ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. [ಕರ್ನಾಟಕ ಒಡೆಯುವ ಮಾತನಾಡಿದ ಕತ್ತಿ]
ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ಹಾಗೂ ಎರಡನೇ ರಾಜಧಾನಿ ಸ್ಥಾಪನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯವೆಂದು ಹೇಳಿದರು. ರಾಜ್ಯ ಒಡೆಯುವ ಯಾವ ಮಾತಿಗೂ ಮನ್ನಣೆ ನೀಡಬೇಡಿ ಎಂದು ಸಿಎಂ ಜನರಿಗೆ ಕರೆ ನೀಡಿದರು. ಚಿತ್ರಗಳಲ್ಲಿ ನೋಡಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ [ಪ್ರತ್ಯೇಕ ರಾಜ್ಯ ಹೋರಾಟದಲ್ಲಿ ಸ್ವಾರ್ಥವಿಲ್ಲ]
371 ಜೆ ತಿದ್ದುಪಡಿ ತರಲಾಗಿದೆ
ಹೈದರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿದ್ದು, ಈ ಭಾಗದ ಅಭಿವೃದ್ಧಿಗಾಗಿ ನಂಜುಂಡಪ್ಪ ವರದಿ ಜಾರಿಯ ಪ್ರಯತ್ನಗಳು ನಡೆದಿವೆ. ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಸಂವಿಧಾನದ 371(ಜೆ) ಪರಿಚ್ಛೇದಕ್ಕೆ ತಿದ್ದುಪಡಿ ತರಲಾಗಿದ್ದು, ಇದರ ಜಾರಿಗೆ ರಾಜ್ಯ ಸರ್ಕಾರ ಹಲವಾರು ಕ್ರಮ ಕೈಗೊಂಡಿದ್ದು, ಈ ಭಾಗದವರಿಗೆ ಶೈಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ದೊರೆಯುತ್ತಿದೆ ಎಂದು ಸಿಎಂ ಹೇಳಿದರು.
ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ
ಹೈ-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಪ್ರಸಕ್ತ ವರ್ಷದ ಬಜೆಟ್ನಲ್ಲಿ ಸರ್ಕಾರ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 600 ಕೋಟಿ ರೂ.ಗಳ ಅನುದಾನ ನೀಡಿದೆ. ಇನ್ನೂ 1,500 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಸಹ ಕಾಯ್ದಿರಿಸಿ ಈ ಭಾಗದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಹೊಸ ಕೈಗಾರಿಕಾ ನೀತಿಯಲ್ಲಿ ಆದ್ಯತೆ
ಈಗಾಗಲೇ 2014-2019ರ ಅವಧಿಯ ನೂತನ ಕೈಗಾರಿಕಾ ನೀತಿಗೆ ಅನುಮೋದನೆ ನೀಡಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಜಿಲ್ಲೆಗಳ ಕೈಗಾರಿಕಾ ಬೆಳವಣಿಗೆಗಾಗಿ ವಿಶೇಷ ಸೌಲಭ್ಯ ಮತ್ತು ರಿಯಾಯಿತಿ ನೀಡಲು ಈ ನೀತಿಯಲ್ಲಿ ಆದ್ಯತೆ ನೀಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ರೈತರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸರ್ಕಾರ ಈ ಭಾಗದ ಅಭಿವೃದ್ಧಿಗೂ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಸಿಎಂ ಭರವಸೆ ನೀಡಿದರು.
ಗೌರವ ವಂದನೆ ಸ್ವೀಕರಿಸಿದ ಸಿಎಂ
ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿಗಳು ಜಿಲ್ಲಾ ಸಶಸ್ತ್ರ ಮತ್ತು ಸಿವಿಲ್ ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ ಮತ್ತು ಇತರ ಶಾಲಾ ಕಾಲೇಜು ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು.
ಶೀಘ್ರ ಹೊಸ ತಾಲೂಕುಗಳ ಘೋಷಣೆ
ರಾಜ್ಯದಲ್ಲಿ ಹೊಸ ತಾಲೂಕುಗಳ ರಚನೆಗೆ ಸಂಬಂಧಿಸಿದಂತೆ ನಾಲ್ಕು ಸಮಿತಿಗಳ ವರದಿಯಿದ್ದು, ಇವುಗಳ ವರದಿಯನ್ನಾಧರಿಸಿ ಮುಂದಿನ ವರ್ಷ ಹೊಸ ತಾಲೂಕುಗಳ ರಚನೆಯ ತೀರ್ಮಾನ ಕೈಗೊಳ್ಳಲಾಗುವುದೆಂದು ಸಿದ್ದರಾಮಯ್ಯ ಹೇಳಿದರು. ಹಿಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಅಧಿಕಾರವಧಿಯ ಕೊನೆಯಲ್ಲಿ 43 ತಾಲೂಕುಗಳನ್ನು ಘೋಷಿಸಿದ್ದು, ಈ ಕುರಿತು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
426 ಕೋಟಿ ಅನುದಾನಕ್ಕೆ ಕೇಂದ್ರಕ್ಕೆ ಮನವಿ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಾಗಿದ್ದು, ರಾಜ್ಯ ಸರ್ಕಾರ ಇದಕ್ಕಾಗಿ 130 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ನೆರೆ ಹಾವಳಿಯಿಂದ ತೊಂದರೆಗೊಳಗಾದ ಪ್ರದೇಶದಲ್ಲಿ ಹೆಚ್ಚಿನ ಪರಿಹಾರ ಕೈಗೊಳ್ಳಲು 426 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಗುಲ್ಬರ್ಗ ಬಿ ನಗರ
ಜನಸಂಖ್ಯೆಗೆ ಅನುಗುಣವಾಗಿ ಗುಲ್ಬರ್ಗ ನಗರವನ್ನು 'ಬಿ' ನಗರವನ್ನಾಗಿ ಘೋಷಿಸುವ ಬಗ್ಗೆ, ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಕುರಿತು ಮತ್ತು ಗುಲ್ಬರ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಗುಲ್ಬರ್ಗದಲ್ಲಿ ಸಚಿವ ಸಂಪುಟ ಸಭೆ
ದೀಪಾವಳಿಯ ಬಳಿಕ ಗುಲ್ಬರ್ಗ ನಗರದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸುವ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕತ್ತಿವರಸೆಗೆ ವಿರೋಧ
ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ಹಾಗೂ ಎರಡನೇ ರಾಜಧಾನಿ ಸ್ಥಾಪನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯವೆಂದು ಹೇಳಿದ ಸಿಎಂ ಸಿದ್ದರಾಮಯ್ಯ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಯಾರು ಪಾಲ್ಗೊಂಡಿದ್ದರು
ಕಾರ್ಯಕ್ರಮದಲ್ಲಿ ಲೋಕಸಭಾಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್, ಮಾಜಿ ಸಚಿವ ವೈಜಿನಾಥ್ ಪಾಟೀಲ್, ಪೌರಾಡಳಿತ ಹಾಗೂ ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ಗುಲ್ಬರ್ಗ ಮಹಾನಗರ ಪಾಲಿಕೆ ಮೇಯರ್ ಆಲಿಯಾ ಶಿರೀನ್ ಬಡೇಖಾನ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.