ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮುಂದೆ ಹೈಡ್ರಾಮಾ!
ಧಾರವಾಡದಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮುಂದೆ ಹೈಡ್ರಾಮಾವೇ ನಡೆದು ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಧಾರವಾಡ ಪ್ರವಾಸ ಕೈಗೊಂಡಿದ್ದಾರೆ. ಆದರೆ, ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ವಿವಿಧ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮುಂದೆಯೂ...
ಧಾರವಾಡದ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಭಾನುವಾರ ಮುಜುಗರದ ಪ್ರಸಂಗ ಎದುರಾಗಿದೆ. ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒಳಮೀಸಲಾತಿಯ ಪ್ರತಿಭಟನೆ ಬಿಸಿ ಮುಟ್ಟಿದೆ.

ರೆಡ್ಡಿ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಮಲಿಂಗಾ ರೆಡ್ಡಿ, ಎಚ್.ಕೆ.ಪಾಟೀಲ, ಶಾಸಕ ಎನ್.ಎಚ್.ಕೋನರಡ್ಡಿ ಸೇರಿದಂತೆ ಹಲವು ಪ್ರಮುಖ ನಾಯಕರು ಇಲ್ಲಿಗೆ ಬಂದಿದ್ದರು. ಆದರೆ, ಸಮಾರಂಭ ನಡೆಯುವ ಸಂದರ್ಭದಲ್ಲಿ ಈ ನಾಯಕರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ. ಅಲ್ಲದೇ ಭಾರೀ ಹೈಡ್ರಾಮವೇ ನಡೆದಿದೆ. ಸ್ಥಳದಲ್ಲಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಘಟನೆ ಸದಸ್ಯರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಏನು ಮಾತನಾಡದೆ ಒಳಗೆ ಹೋದರು. ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಭಾಂಗಣದ ಒಳಗೆ ಹೋಗುವ ವರೆಗೂ ಪ್ರತಿಭಟನಾಕಾರರು ಒಳಮೀಸಲಾತಿ ಜಾರಿಯಾಗಲಿ ಎಂದು ಘೋಷಣೆ ಕೂಗಿದರು.
ಪ್ರತಿಭಟನೆ ಹಾಗೂ ಘೋಷಣೆ ತಿಳಿಯಾದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಭಾಂಗಣದ ಒಳಗೆ ಹೋದರು. ರೆಡ್ಡಿ ಬ್ಯಾಂಕ್ ಒಳಹೋದ ಮೇಲೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಸಹಕಾರ ರಂಗದ ಭೀಷ್ಮ ಕೆ.ಎಚ್.ಪಾಟೀಲ ಹಾಗೂ ರೆಡ್ಡಿ ಬ್ಯಾಂಕ್ ಸ್ಥಾಪಕ ಎಫ್.ಟಿ.ನಲವಡಿ ಅವರ ಪುತ್ಥಳಿಗಳನ್ನು ಅನಾವರಣ ಮಾಡಿದರು.

ಬಿಜೆಪಿಯಿಂದ ಒಳಮೀಸಲಾತಿ ಅಸ್ತ್ರ: ರಾಜ್ಯದಲ್ಲಿ ಮುಡಾ ಹಗರಣದ ನಂತರ ಹಲವು ಬೆಳವಣಿಗೆ ಆಗಿದೆ. ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದ ಮೇಲೆ ವಿರೋಧ ಪಕ್ಷಗಳು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆಗಳನ್ನು ನೀಡುತ್ತಿವೆ. ಮುಡಾದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಜುಗರದ ಪ್ರಸಂಗಗಳನ್ನು ವಿರೋಧ ಪಕ್ಷಗಳು ಸೃಷ್ಟಿ ಮಾಡಿವೆ. ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಮುಡಾದ ವಿಚಾರವೇ ಹೆಚ್ಚು ಚರ್ಚೆಯಾಗುತ್ತಿದೆ.
ಈ ಬೆಳವಣಿಗೆಗಳ ನಡುವೆ ರಾಜ್ಯ ಸರ್ಕಾರವು ಜಾತಿಗಣತಿ ವರದಿಯ ಬಗ್ಗೆ ಪ್ರಸ್ತಾಪ ಮಾಡಿರುವುದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ. ಮುಡಾ ಹಗರಣದ ವಿಷಯವನ್ನು ಡೈವರ್ಟ್ (ವಿಷಯಾಂತರ) ಮಾಡುವ ಉದ್ದೇಶದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯು ಒಳ ಮೀಸಲಾತಿ ಅಸ್ತ್ರವನ್ನು ಪ್ರಯೋಗಿಸಿ ಕಾಂಗ್ರೆಸ್ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಒಳ ಮೀಸಲಾತಿ ಹೆಚ್ಚು ಚರ್ಚೆಯಾಗುತ್ತಿದೆ.











Click it and Unblock the Notifications