2023ರ ಚುನಾವಣೆ; ಕಾಂಗ್ರೆಸ್ ಟಿಕೆಟ್ ಕೇಳಿದ ಕನ್ನಡ ನಟಿ!
ಬೆಂಗಳೂರು, ಅಕ್ಟೋಬರ್ 12; ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳ ತಯಾರಿ ಚುನಾವಣೆಗೆ ಜೋರಾಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ.
ಮುಂದಿನ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ತುಸು ಹೆಚ್ಚಿದೆ. ಈಗ ಕನ್ನಡದ ನಟಿಯೊಬ್ಬರು ನಾನು ಸಹ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಹೇಳುವ ಮೂಲಕ ಚುನಾವಣಾ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಟಿ ಮಾಧ್ಯಮಗಳ ಜೊತೆ ಮಾತನಾಡುವಾಗ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.
ನಟಿ ಭಾವನಾ ರಾಮಣ್ಣ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಬಳಿಕ ಬಿಜೆಪಿ ಸೇರಿದ್ದರು. 2021ರಲ್ಲಿ ಅವರು ಕಾಂಗ್ರೆಸ್ಗೆ ಪುನಃ ಮರಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ.

ಭಾವನಾ ರಾಮಣ್ಣ ಹೇಳಿಕೆ
ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಾವನಾ ರಾಮಣ್ಣ ಮಾಧ್ಯಮಗಳ ಜೊತೆ ಮಾತನಾಡಿ, "ನಾನು ಈ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಕೇಳುತ್ತೇನೆ. ಜನರ ಸೇವೆಗಾಗಿ ಚುನಾವಣೆಗೆ ನಿಲ್ಲುತ್ತೇನೆ" ಎಂದು ಹೇಳಿದ್ದಾರೆ.
2018ರ ಚುನಾವಣೆಯ ಸಂದರ್ಭದಲ್ಲಿಯೂ ಭಾವನಾ ಕಾಂಗ್ರೆಸ್ನಿಂದ ಚಿತ್ರದುರ್ಗದಲ್ಲಿ ಟಿಕೆಟ್ ಬಯಸಿದ್ದರು. ಆದರೆ ಟಿಕೆಟ್ ಸಿಕ್ಕಿರಲಿಲ್ಲ. ಆದ್ದರಿಂದ ವಿಧಾನಸಭೆ ಚುನಾವಣೆಗೆ ಎರಡು ದಿನಗಳು ಇರುವಾಗ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

ರಾಹುಲ್ ಗಾಂಧಿ ಮತ್ತು ಮೋದಿ
ನಟಿ ಭಾವನಾ ಮಾತನಾಡಿ, "ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಸಮನಾದ ವ್ಯಕ್ತಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ 2023ರ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕಿದೆ.

ಕಾಂಗ್ರೆಸ್ಗೆ ಮರಳಿದ್ದ ಭಾವನಾ ರಾಮಣ್ಣ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನವೆಂಬರ್ 16, 2021ರಂದು ಟ್ವೀಟ್ ಮಾಡಿದ್ದರು. 'ಕಾಂಗ್ರೆಸ್ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ, ಅವರಿಗೆ ಶುಭಾಶಯಗಳು' ಎಂದು ತಿಳಿಸಿದ್ದರು.
ಕಾಂಗ್ರೆಸ್ ಸೇರಿದ ಬಳಿಕ ಪಕ್ಷದ ಹಲವಾರು ಹೋರಾಟಗಳಲ್ಲಿ ಭಾವನಾ ಭಾಗವಹಿಸುತ್ತಿದ್ದಾರೆ. ಈಗ ಭಾರತ್ ಜೋಡೋ ಪಾದಯಾತ್ರೆಯಲ್ಲಿಯೂ ಪಾಲ್ಗೊಂಡು ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
2018ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಮಾತನಾಡಿದ್ದ ಭಾವನಾ ರಾಮಣ್ಣ, "ನಾನು ಮೂಲತಃ ದಕ್ಷಿಣ ಕನ್ನಡದವಳು. ಆದರೆ ನಾನು ಚಿತ್ರದುರ್ಗದಲ್ಲಿ ವಾಸವಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯಳಾಗಿದ್ದೇನೆ. ಚಿತ್ರದುರ್ಗದಿಂದ ಸ್ಪರ್ಧಿಸಲು ಟಿಕೆಟ್ ನೀಡಿದರೆ ಚುನಾವಣಾ ಕಣಕ್ಕಿಳಿಯಲಿದ್ದೇನೆ" ಎಂದು ಹೇಳಿದ್ದರು.
ಆದರೆ ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಕ್ಷೇತ್ರದಲ್ಲಿ ಹೆಚ್. ಎ. ಷಣ್ಮುಖಪ್ಪಗೆ ಟಿಕೆಟ್ ನೀಡಿತ್ತು. ಆದರೆ ಅವರು 49,014 ಮತಗಳನ್ನು ಪಡೆದು ಸೋಲು ಕಂಡಿದ್ದರು. ಭಾವನಾ ರಾಮಣ್ಣ ಚುನಾವಣೆಗೆ 2 ದಿನಗಳು ಇರುವಾಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು.












Click it and Unblock the Notifications