CM Siddaramaiah: ನನಗೆ ಮಂತ್ರಿಗಿರಿಗಿಂತ ಸಿದ್ದರಾಮಯ್ಯ ಸಿಎಂ ಆಗಿದ್ದೆ ಖುಷಿ: ಶಾಸಕ ಬಸವರಾಜ ರಾಯರೆಡ್ಡಿ
ಕೊಪ್ಪಳ, ಜೂನ್ 03: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸಿದ್ದ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಕಾಂಗ್ರೆಸ್ ನ 135 ಶಾಸಕರ ಪೈಕಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಕೆಲ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಬೇಕೆನ್ನುವುದು ನನ್ನ ಬಯಕೆಯಾಗಿತ್ತೇ ವಿನಃ ನನಗೆ ಮಂತ್ರಿ ಸ್ಥಾನ ಸಿಗದಿರುವುದು ಮುಖ್ಯವಲ್ಲ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತು ಕಾಂಗ್ರೆಸ್ಗೆ 135 ಸ್ಥಾನಗಳನ್ನು ನೀಡುವ ಮೂಲಕ ಸುಭದ್ರ ಆಡಳಿತ ನೀಡಲು ಅಧಿಕಾರ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿರುವುದೇ ನನಗೆ ಸಂತಸ ತಂದಿದೆ ಎಂದ ಅವರು, ರಾಜ್ಯದ ಜನರ ಹಿತ ಕಾಪಾಡಲು ಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಬೇಕು ಎನ್ನುವುದು ರಾಜ್ಯದ ಬಹುಜನರ ಬೇಡಿಕೆಯಾಗಿತ್ತು. ಅದರಲ್ಲಿ ನಾನೊಬ್ಬನಾಗಿದ್ದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ನನಗೆ ಅತೀವ ಸಂತಸ ತಂದಿದೆ ಎಂದು ಹೇಳಿದ್ದಾರೆ.
ಮೈಶುಗರ್ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ 50 ಕೋಟಿ ಮಂಜೂರಿಗೆ ಸಿಎಂ ಅನುಮೋದನೆ
ಜಿಲ್ಲೆಯ ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಹಂಗಾಮಿನ ಕಬ್ಬು ನುರಿಸುವಿಕೆಯನ್ನು ಪ್ರಾರಂಭಿಸಲು ಹಾಗೂ ದುಡಿಯುವ ಬಂಡವಾಳಕ್ಕೆ ಸರ್ಕಾರದಿಂದ 50 ಕೋಟಿ ರೂ. ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರಕಿದೆ ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಂಡ್ಯ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ ಗೂಳಿಗೌಡ ತಿಳಿಸಿದ್ದಾರೆ.
2023-24 ನೇ ಸಾಲಿನಲ್ಲಿ ಕಬ್ಬು ನುರಿಸಲು ಸರ್ಕಾರದಿಂದ ತುರ್ತಾಗಿ ಧನ ಸಹಾಯ ನೀಡಬೇಕೆಂದು ತಾವು ಹಾಗೂ ಶಾಸಕ ರವಿ ಗಣಗ ಅವರು ಮಾಡಿದ್ದ ಮನವಿಗೆ ಸ್ಪಂದಿಸಿ ಸಿಎಂ ತಕ್ಷಣವೇ ಹಣ ಬಿಡುಗಡೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ರೈತರ ಪರವಾಗಿ ಅಭಿನಂದನೆಗಳು ಎಂದು ಹೇಳಿದ್ದಾರೆ.
ಕಬ್ಬು ಕಟಾವು ಪ್ರಾರಂಭವಾಗುವ ಮೊದಲು ಗ್ಯಾಂಗ್ಗಳಿಗೆ ನೀಡಲು ಹಣದ ಅವಶ್ಯಕತೆ ಇದೆ. ಯಂತ್ರಗಳ ದುರಸ್ತಿಗಳೂ ಇವೆ. ಅದಕ್ಕಾಗಿ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಹೀಗಾಗಿ ಕಾರ್ಖಾನೆ ಪ್ರಾರಂಭೋತ್ಸವ ಹಾಗೂ ಗ್ಯಾಂಗ್ಗಳಿಗೆ ನೀಡಲು 15 ಕೋಟಿ ರೂ. ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳ (ವರ್ಕಿಂಗ್ ಕ್ಯಾಪಿಟಲ್ ) ಗಾಗಿ 35 ಕೋಟಿ ರೂ. ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಸರ್ಕಾರದ ಈ ಸಹಾಯದಿಂದ ಅವಧಿಗೆ ಸರಿಯಾಗಿ ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭಿಸಲು ಅನುಕೂಲವಾಗಲಿದೆ. ರೈತರಿಗೆ ಸಕಾಲದಲ್ಲಿ ಕಬ್ಬು ಕಟಾವು ಹಾಗೂ ಹಣ ಬಿಡುಗಡೆಗೂ ಸಹಕಾರಿಯಾಗಲಿದೆ ಎಂದು ಶಾಸಕ ದಿನೇಶ ಗೂಳಿಗೌಡ ಅವರು ತಿಳಿಸಿದ್ದಾರೆ.












Click it and Unblock the Notifications