Karnataka CM: 'ಮುಂದಿನ ಸಿಎಂ ನೀವೇ' ಎಂದವರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
ರಾಜ್ಯ ಕಾಂಗ್ರೆಸ್ನಲ್ಲಿ ಇದೀಗ ಸಿಎಂ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದೆ. ನವೆಂಬರ್ ತಿಂಗಳಲ್ಲೇ ಸಿಎಂ ಬದಲಾಗಲಿದ್ದಾರೆ, ನವೆಂಬರ್ ಕ್ರಾಂತಿಯಾಗುತ್ತೆ ಎಂಬೆಲ್ಲ ಚರ್ಚೆಗಳು ಜೋರಾಗಿವೆ. ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಎಂಬಿ.ಪಾಟೀಲ್, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ನ ಹಲವು ಪ್ರಬಲ ನಾಯಕರ ಹೆಸರುಗಳು ಮಂಚೂಣಿಗೆ ಬಂದಿವೆ. ಇದೇ ವಿಚಾರವಾಗಿ ಬಿಜೆಪಿ ಕೂಡ ಗೇಲಿ ಮಾಡುತ್ತಿದೆ. ಮುಂದಿನ ಮುಖ್ಯಮಂತ್ರಿಯಾಗುವ ವಿಚಾರದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ.
ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಮುಂದಿನ ಸಿಎಂ ಎಂದು ಹಲವರ ಹೆಸರುಗಳು, ಫೋಟೋಗಳು ವೈರಲ್ ಆಗಿವೆ. ಈ ಪೈಕಿ ರಾಮಲಿಂಗಾರೆಡ್ಡಿ ಅವರ ಹೆಸರು ಕೂಡ ಇದೆ. ಸೋಷಿಯಲ್ ಮೀಡಿಯಾದಲ್ಲಿ RamalingaReddyForCM ಎಂದು ಹಲವರು ಪೋಸ್ಟ್ ಹಂಚಿಕೊಂಡಿದ್ದಾರೆ. ಇವುಗಳಿಗೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ನಾನು ಸಿಎಂ ಆಕಾಂಕ್ಷಿಯಲ್ಲ
ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ RamalingaReddyForCM ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ. ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರವು ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು. ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದ್ದರಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು. ಇದರಲ್ಲಿ ಭಾಗಿಯಾಗಬಾರದು ಎಂದು ಕೋರುತ್ತೇನೆ. ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.
ಇತ್ತೀಚೆಗೆ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದ ಮಾತೊಂದು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ತಂದೆ ಸಿದ್ದರಾಮಯ್ಯ ಅವರ ಬಳಿಕ ನಾಯಕತ್ವಕ್ಕೆ ಸತೀಶ್ ಜಾರಕಿಹೊಳಿ ಅವರು ಸಮರ್ಥರು ಎಂದಿದ್ದರು. ಬಳಿಕ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಬಂದಿದ್ದರು. ಇದೇ ತಿಂಗಳು ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡಿತ್ತು. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದರು.












Click it and Unblock the Notifications