ನಾನು ಕೈಗೊಂಬೆಯಲ್ಲ: ಬಿಜೆಪಿ ನಾಯಕರ ವಿರುದ್ಧ ಸೋಮಣ್ಣ ಪರೋಕ್ಷ ವಾಗ್ದಾಳಿ- ಲೋಕಸಭಾ ಟಿಕೆಟ್ಗೆ ಬೇಡಿಕೆ?
ಬೆಂಗಳೂರು, ಸೆಪ್ಟೆಂಬರ್ 21: ಬಿಜೆಪಿಯ ಹಿರಿಯ ನಾಯಕ ವಿ ಸೋಮಣ್ಣ ಅವರು ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಇನ್ನು ಮುಂದೆ ನಾನು ಯಾರ ಕೈಗೊಂಬೆಯೂ ಅಲ್ಲ. ಪಕ್ಷದ ಉತ್ತಮ ಕಾರ್ಯಕರ್ತನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಉನ್ನತ ನಾಯಕರಿಗೆ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, 'ಅವಳಿ ಸೋಲಿನ ಆಘಾತದಿಂದ ಇನ್ನೂ ಹೊರಬಂದಿಲ್ಲ' ಎಂದು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಮಣ್ಣ ಅವರು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ.

'ನನ್ನ ಉಭಯ ಸೋಲು ನನಗೆ ಅನೇಕ ವಿಷಯಗಳನ್ನು ಕಲಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ನಾನು ಇನ್ನು ಮುಂದೆ ಕೈಗೊಂಬೆಯಲ್ಲ ಎಂಬುದನ್ನು ನಿಮಗೆ (ಮಾಧ್ಯಮಗಳಿಗೆ) ಹೇಳುತ್ತೇನೆ' ಎಂದು ಸೋಮಣ್ಣ ತಿಳಿಸಿದ್ದಾರೆ.
ಸೋಮಣ್ಣ ಅವರು ತುಮಕೂರು ಲೋಕಸಭಾ ಟಿಕೆಟ್ಗೆ ಬೇಡಿಕೆ ಇಡಬಹುದು ಎಂಬ ಮಾತುಗಳು ಕೇಳಿಬಂದಿವೆ.
ಜಾತಿ, ಧರ್ಮ, ಪಂಥದ ಬಗ್ಗೆ ಯೋಚಿಸದೆ ಜನಸೇವೆ ಮಾಡುವುದಕ್ಕಾಗಿಯೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಬೊಮ್ಮಾಯಿಯೊಂದಿಗಿನ ಭೇಟಿಯಲ್ಲಿ ಕುರಿತು ಮಾತನಾಡಿದ ಅವರು, 'ಇದು ಸೌಜನ್ಯಯುತ ಭೇಟಿಯಾಗಿದೆ. ಅವರು ನನ್ನ ಕುಟುಂಬದ ಹಳೆಯ ಸ್ನೇಹತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸಬೇಕಿಲ್ಲ' ಎಂದು ಹೇಳಿದ್ದಾರೆ.
'ನಾವು ಒಬ್ಬರಿಗೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ. ಅವರ ತಂದೆ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ಕಾಲದಿಂದಲೂ ಒಂದೇ ಕುಟುಂಬದವರಂತೆ ಇದ್ದೇವೆ. ನಮ್ಮ ಭೇಟಿಯಲ್ಲಿ ವಿಶೇಷವೇನೂ ಇಲ್ಲ' ಎಂದು ಅವರು ಹೇಳಿದ್ದಾರೆ.
2018 ರ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜ ನಗರದಿಂದ ಸ್ಪರ್ಧಿಸಿದ್ದ ಸೋಮಣ್ಣ ಗೆಲುವು ಸಾಧಿಸಿದ್ದರು. ಅವರು ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
2023 ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೋವಿಂದರಾಜ ನಗರ ಕ್ಷೇತ್ರದ ಟಿಕೆಟ್ ಸಿಗಲಿಲ್ಲ. ಬದಲಾಗಿ ಅವರನ್ನು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಲ್ಲಿಸಲಾಯಿತು. ಚಾಮರಾಜ ನಗರದಲ್ಲಿಯೂ ಅವರಿಕೆ ಟಿಕೆಟ್ ನೀಡಲಾಯಿತು. ಆದರೆ, ಸೋಮಣ್ಣ ಇವೆರಡೂ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದರು. ಬಿಜೆಪಿಯು ಸೋಮಣ್ಣನವರನ್ನು ಹರಕೆಯ ಕುರಿಯನ್ನಾಗಿ ಮಾಡಿದೆ ಎಂಬ ಮಾತುಗಳನ್ನು ವಿರೋಧ ಪಕ್ಷದ ನಾಯಕರು ಆಡಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ನಾಯಕರ ವಿರುದ್ಧ ವಿ ಸೋಮಣ್ಣನವರು ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದಾರೆ. ಈ ಲೋಕಸಭೆ ಟಿಕೆಟ್ಗೂ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.












Click it and Unblock the Notifications