ರಾಜ್ಯಸಭೆ ಟಿಕೆಟ್ ಗೊಂದಲಕ್ಕೆ ತೆರೆ ಎಳೆದ ಎಸ್.ಎಂ.ಕೃಷ್ಣ
ಬೆಂಗಳೂರು, ಮೇ 27 : ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಂ.ಕೃಷ್ಣ ಅವರು ರಾಜ್ಯಸಭೆ ಟಿಕೆಟ್ ಗೊಂದಲಕ್ಕೆ ತೆರೆ ಎಳೆದಿದ್ದಾರೆ. 'ತಾವು ಟಿಕೆಟ್ ಆಕಾಂಕ್ಷಿಯಲ್ಲ, ಚುನಾವಣೆಗೆ ಸ್ಪರ್ಧಿಸುತ್ತಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಎಸ್.ಎಂ.ಕೃಷ್ಣ ಅವರು ಪತ್ರಿಕಾ ಪ್ರಕಟಣೆ ಮೂಲಕ ಮಾಧ್ಯಮಗಳಿಗೆ ಈ ಕುರಿತು ಸ್ಪಷ್ಟನೆ ಕೊಟ್ಟರು. 'ರಾಜ್ಯಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತೇನೆ ಎಂಬ ವರದಿಗಳು ಸತ್ಯಕ್ಕೆ ದೂರವಾದದ್ದು. ನಾನು ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಲ್ಲ' ಎಂದು ಪ್ರಕಟಣೆಯಲ್ಲಿ ತಿಳಿಸಿದರು. [ರಾಜ್ಯಸಭೆ ಸದಸ್ಯರಾಗಲು ಪೈಪೋಟಿ?]
ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಎಂ.ಕೃಷ್ಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಈ ಸುದ್ದಿಗಳನ್ನು ಕೃಷ್ಣ ಅವರು ತಳ್ಳಿ ಹಾಕಿದ್ದಾರೆ. [ರಾಜ್ಯಸಭೆ ಚುನಾವಣಾ ವೇಳಾಪಟ್ಟಿ 2016]
ವಿವಿಧ ಮಾಧ್ಯಮಗಳ ವರದಿಯಲ್ಲಿ ರಾಜ್ಯಸಭೆ ಸದಸ್ಯರಾಗಲು ಮಾಜಿ ಸಚಿವ ಎಸ್.ಎಂ.ಕೃಷ್ಣ, ಪಿ.ಚಿದಂಬರಂ, ಜೈರಾಮ್ ರಮೇಶ್ ಮುಂತಾದವರು ಪೈಪೋಟಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ, ಕೃಷ್ಣ ಅವರು ಈ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ. [ಕನ್ನಡಿಗರಿಗೆ ರಾಜ್ಯಸಭೆ ಟಿಕೆಟ್ : ಎಚ್ಡಿಕೆ]
ಅಭ್ಯರ್ಥಿಗಳು ಅಂತಿಮಗೊಂಡಿಲ್ಲ : ಕರ್ನಾಟಕ ವಿಧಾನಸಭೆಯಲ್ಲಿ 123 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿದೆ. ಆದರೆ, ಇನ್ನೂ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಇಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಲಿದ್ದು, ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.