ನಿಂತ್ರೂ, ಸೋತ್ರೂ, ಗೆದ್ರೂ ಮಂಡ್ಯದಲ್ಲೇ : ಮಹತ್ವದ ನಿರ್ಧಾರ ಘೋಷಿಸಿದ ಸುಮಲತಾ
ಮಂಡ್ಯ, ಏಪ್ರಿಲ್ 03: ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರು ಇಂದು(ಬುಧವಾರ) ಬಹಿರಂಗ ಸಭೆಯಲ್ಲಿ ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಈ ಕುರಿತು ಬಹಿರಂಗ ಸಭೆಯಲ್ಲಿ ಐದು ವರ್ಷದ ಸಾಧನೆಗಳ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿ ಸುಮಲತಾ ಭಾವುಕರಾಗಿ ಮಾತನಾಡಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಕೊನೆಯವರೆಗೂ ಮಂಡ್ಯ ಕ್ಷೇತ್ರವನ್ನ ಬಿಜೆಪಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾನು ಸಾಕಷ್ಟು ಹೋರಾಟ ನಡೆಸಿದ್ದೇ ಎಂದ ಸುಮಲತಾ ಸ್ಪರ್ಧೆಯಿಂದ ಹಿಂದೆ ಸರಿದು, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ಸಂಸದೆ ಸ್ಥಾನ ಶಾಶ್ವತವಲ್ಲ. ಮತ್ತೊಬ್ಬರು ಸಂಸದರಾಗಿ ಬರುತ್ತಾರೆ. ಆದರೆ ನಾನು ಮಂಡ್ಯದ ಸೊಸೆಯಾಗಿ ಕೊನೆಯವರೆಗೂ ಉಳಿಯುತ್ತೇನೆ. ಬದಲಾದ ಪರಿಸ್ಥಿತಿ, ಸನ್ನಿವೇಶವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಠ ಸಾಧನೆ ಮಾಡುವ ಉದ್ದೇಶ ಇದ್ದರೇ ಪಕ್ಷೇತರ ಸ್ಪರ್ಧೆ ಮಾಡಬಹುದು. ಅದರಿಂದ ನನ್ನ ಸ್ವಾರ್ಥ ಏನು ಇಲ್ಲ, ಲಾಭಕ್ಕಾಗಿ ಯೋಚಿಸಿದರೇ ಬೇರೆ ಕ್ಷೇತ್ರ ಆಯ್ಕೆ ಮಾಡಬಹುದಿತ್ತು. ಬಂದ ಅವಕಾಶಗಳನ್ನು ಮಂಡ್ಯಕ್ಕಾಗಿ ಬಿಟ್ಟಿದ್ದೇನೆ. ನನ್ನ ರಾಜಕೀಯ ಏನೇ ಇದ್ರೂ ಅದು ಮಂಡ್ಯದಿಂದ ಮಾತ್ರ. ಅಂಬರೀಶ್ ಅವರ ಮಾರ್ಗದರ್ಶನದಲ್ಲೇ ನಾನು ಅನುಸರಿಸಿದ್ದೇನೆ ಅಸಂಖ್ಯಾತ ಅಂಬರೀಶ್ ಅಭಿಮಾನಿಗಳನ್ನ ಬಿಟ್ಟು ಹೋದರೆ ಮಂಡ್ಯ ಸೊಸೆ ಅನಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಸುಮಲತಾ ಅವಶ್ಯಕತೆ ನಮಗೆ ಬೇಕಿಲ್ಲ, ಮುಂದೆಯೂ ಇಲ್ಲ, ಈಗಲೂ ಇಲ್ಲ ಅಂತ ಕಾಂಗ್ರೆಸ್ನ ಪ್ರಮುಖ ನಾಯಕರು ಹೇಳಿದರು. ನನಗೆ ಗೌರವ ಇಲ್ಲದ ಕಡೆ ಹೋಗಿ ಎಂದು ಒತ್ತಾಯಿಸಬೇಡಿ. ನಾನು ಕಾಂಗ್ರೆಸ್ಗೆ ಹೋಗಲ್ಲ. ಕಾಂಗ್ರೆಸ್ನವರು ಬೇಡ ಎಂದಿದ್ದಾರೆ, ನಾನು ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಗೆಲುವ ಕಂಡ ನನಗೆ ಕೇಂದ್ರ ಸರ್ಕಾರ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಪ್ರತಿಯೊಂದು ವಿಷಯದಲ್ಲೂ ನನ್ನನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದರು. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು ಎಂದು ತಿಳಿಸಿದ್ದಾರೆ.












Click it and Unblock the Notifications