Satish Jarkiholi: ಮುಂದಿನ ಅವಧಿಗೆ ಸಿಎಂ ರೇಸ್ ನಲ್ಲಿ ನಾನು ಇರುತ್ತೇನೆ: ಸತೀಶ್ ಜಾರಕಿಹೊಳಿ
ಬೆಂಗಳೂರು, ಜುಲೈ 28: ಈ ಅವಧಿಯಲ್ಲಿ ಮುಖ್ಯಮಂತ್ರಿ ರೇಸ್ನಲ್ಲಿ ನಾನಿಲ್ಲ. ಮುಂದಿನ ಅವಧಿಯಲ್ಲಿ ರೇಸ್ ನಲ್ಲಿ ನಾನು ಇರುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು, ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನೂ ಮುಖ್ಯಮಂತ್ರಿ ಮಾಡುವುದು ಹಾಗೂ ಕೆಳಗಿಳಿಸುವುದು ಗೊತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಹೇಳಿಕೆ ಕುರಿತು ಮಾತನಾಡಿದ ಅವರು, ಬಿ.ಕೆ ಹರಿಪ್ರಸಾದ್ ಅವರು ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರು ಕೂಡ ಕೆಲವು ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡಿದ್ದಾರೆ. ಮುಖ್ಯಮಂತ್ರಿ ಮಾಡುವುದಕ್ಕೂ ಗೊತ್ತು ಇಳಿಸುವುದಕ್ಕೂ ಗೊತ್ತು ಎಂಬ ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಬಿ ಕೆ ಹರಿಪ್ರಸಾದ್ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.
ಇತ್ತ ಶಾಸಕಾಂಗ ಸಭೆಯಲ್ಲಿ ಸಚಿವರ ವಿರುದ್ದ ಶಾಸಕರ ಅಸಮಾಧಾನ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಗುರುವಾರ ಸಿಎಲ್ ಪಿ ಸಭೆ ಶಾಂತವಾಗಿ ನಡೆದಿದೆ. ಕೆಲವು ಸಮಸ್ಯೆ ಇದ್ದೇ ಇರುತ್ತದೆ, ಇಲ್ಲಾ ಅಂತಾ ಹೇಳೋಕೆ ಆಗಲ್ಲ. ವರ್ಗಾವಣೆ ವಿಚಾರವಾಗಿ ನಮಗೂ ಇತಿಮಿತಿ ಇದೆ. ಕೇವಲ 6% ವರ್ಗಾವಣೆ ನಾವು ಮಾಡಬಹುದು. ಉಳಿದದ್ದು ಸಿಎಂ ಮಾಡಬೇಕು. ಕೆಲವೊಂದಕ್ಕೆ ಶಾಸಕರಿಗೆ ಇದು ಮನವರಿಕೆ ಆಗುವುದಿಲ್ಲ ಎಂದು ಹೇಳಿದರು.
ಇನ್ನೂ ಹೈಕಮಾಂಡ್ ನಾಯಕರ ಜೊತೆಗೆ ಸಭೆ ವಿಚಾರವಾಗಿ ಮಾತನಾಡಿದ ಅವರು, ಆಗಸ್ಟ್ 2 ರಂದು ಹೈಕಮಾಂಡ್ ಮೀಟಿಂಗ್ ಕರೆದಿದ್ದಾರೆ. ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೇ ಶಾಸಕರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಜಿಲ್ಲಾವಾರು ಮೀಟಿಂಗ್ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.
ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯ ನಾಯಕರ ಸಭೆ ಕರೆದಿದೆ. ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರೊಂದಿಗೆ ಸಭೆ ನಡೆಯಲಿದೆ. ಅಲ್ಲದೇ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೂ ಮಲ್ಲಿಕಾರ್ಜುನ್ ಖರ್ಗೆ ಬುಲಾವ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications