ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಬಯಸಿದರೆ ನಾನು ಆ ಸ್ಥಾನವನ್ನು ಬಿಟ್ಟುಕೊಡುತ್ತೇನೆ: ಡಿಕೆಶಿ ಮಹತ್ವದ ಹೇಳಿಕೆ
ಬೆಂಗಳೂರು, ಏಪ್ರಿಲ್ 08: ಕರ್ನಾಟಕ ವಿಧಾನಸಭೆ ಚುನಾವಣೆಗೂ ( Karnataka Assembly Elections 2023 ) ಮುನ್ನ ಯಾರನ್ನೂ ಮುಖ್ಯಮಂತ್ರಿಯಾಗಿ ಬಿಂಬಿಸಬೇಡಿ ಎಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಇದರ ಹೊರತಾಗಿಯೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ವದಂತಿಗಳು ಜೋರಾಗಿಯೇ ಕೇಳಿಬರುತ್ತಿವೆ.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನದ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಇಬ್ಬರು ನಾಯಕರು ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಚುನಾವಣಾ ಪ್ರಚಾರದುದ್ದಕ್ಕೂ ಹೈಕಮಾಂಡ್ ತೀರ್ಪಿಗೆ ಬದ್ಧರಾಗಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಬಯಸಿದರೆ, ಆ ಸ್ಥಾನವನ್ನು ಸಂತೋಷದಿಂದ ಬಿಟ್ಟು ಕೊಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ಹಿರಿಯ ನಾಯಕರು. ಅವರಿಗೆ 50 ವರ್ಷಗಳ ರಾಜಕೀಯ ಅನುಭವವಿದೆ. ಈ ಚುನಾವಣೆಯಲ್ಲಿ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಕರ್ನಾಟಕ ರಾಜಕೀಯದ ಪ್ರತಿಯೊಂದು ಅಂಶವೂ ಅವರಿಗೆ ತಿಳಿದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಬಹುಮತ ಪಡೆದರೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಹೈಕಮಾಂಡ್ ನಿರ್ಧಾರ ಎಂದು ಅವರು ತಿಳಿಸಿದ್ದಾರೆ.

ಸಿಎಂ ಅಕಾಂಕ್ಷಿಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ, 'ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿ ಹೊಂದಾಣಿಕೆಯಲ್ಲಿದ್ದೇವೆ. ಅವರು ನನ್ನ ನಡುವೆ ಯಾವುದೇ ಪ್ರಮುಖ ಭಿನ್ನಾಭಿಪ್ರಾಯಗಳಿಲ್ಲ. ಪ್ರಜಾಪ್ರಭುತ್ವದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಆದರೆ ಯಾವುದೂ ಪಕ್ಷದ ಹಿತಾಸಕ್ತಿಗೆ ಧಕ್ಕೆ ತರುವಷ್ಟು ಮಹತ್ವದ್ದಲ್ಲ' ಎಂದಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯು ತಮ್ಮ ಕೊನೆಯ ಚುನಾವಣಾ ಸಮರವಾಗಿದ್ದು, ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸಿದ್ದರಾಮಯ್ಯ ಮತ್ತೆ ಹೇಳಿದ್ದಾರೆ.
ನನ್ನ ಹುಟ್ಟೂರು ಈ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ನಾನು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಇನ್ನೂ ಸಕ್ರಿಯ ರಾಜಕೀಯದಲ್ಲಿರುತ್ತೇನೆ. ಆದರೆ ಈ ಚುನಾವಣೆಯ ನಂತರ ದೆಹಲಿಯಲ್ಲಿ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಹೈಕಮಾಂಡ್ ಅನುಮತಿ ನೀಡಿರುವುದರಿಂದ ನಾನು ವರುಣಾದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
'ನಾವು ಈ ಬಾರಿ 130 ಕ್ಕೂ ಹೆಚ್ಚು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಮತ್ತು ಕಾಂಗ್ರೆಸ್ ಪಕ್ಷವು ತನ್ನದೇ ಆದ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಜನರು ಸರ್ಕಾರವನ್ನು ಬದಲಾಯಿಸಲು ನಿರ್ಧರಿಸಿದ್ದಾರೆ' ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮುಸಲ್ಮಾನರ ಮೀಸಲಾತಿಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, 'ಮೀಸಲಾತಿಯನ್ನು ಪುನರ್ ವಿಂಗಡಣೆ ಮಾಡುವುದು ಸರಿಯಲ್ಲ, ಸಾಂವಿಧಾನಿಕವಲ್ಲ. ಇದು ಮಾನ್ಯವಲ್ಲ. ಮೀಸಲಾತಿ ಹೆಚ್ಚಳಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ನೀವು ಮುಸ್ಲಿಮರ ಮೀಸಲಾತಿಯನ್ನು ಏಕೆ ರದ್ದುಗೊಳಿಸಿದ್ದೀರಿ. ಇದು ದ್ವೇಷದ ರಾಜಕಾರಣವನ್ನು ಸ್ಪಷ್ಟವಾಗಿ ತೋರಿಸುತ್ತದೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಆದರೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರೂ ಸಹ ಯಾರು ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.












Click it and Unblock the Notifications