ನಾನೇ ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್
ಬೆಳಗಾವಿ, ಆಗಸ್ಟ್ 31: ಬೆಳಗಾವಿ ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಬೆಳಗಾವಿ ಗೋವಾ ಹೆದ್ದಾರಿ ಮೇಲೆ ಫೌಂಡ್ರಿ ಪಾರ್ಕ್ ಮಾಡುತ್ತೇವೆ. ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಗುರುಸಿಕೊಂಡಿದೆ. ಅಲ್ಲಿ ಕೂಡ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಯುವ ಉದ್ಯಮಿಗಳಿಗೆ ಈ ಯೋಜನೆ ಅನುಕೂಲವಾಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕಿತ್ತು. ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸಿದ ಕಾರಣ ಇದು ಸಾಧ್ಯವಾಗಿಲ್ಲ. ಬೆಳಗಾವಿ- ಹುಬ್ಬಳ್ಳಿ ನಡುವೆ ಇಂಡಸ್ಟ್ರೀಯಲ್ ಕಾರಿಡಾರ್ ಮಾಡಲು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಸಹ ಮಾಡಲಿದೆ ಎಂದಿದ್ದಾರೆ.

ಹುಬ್ಬಳ್ಳಿ ಹಾಗೂ ಬೆಳಗಾವಿ ನೇರ ರೈಲು ಮಾರ್ಗ ವಿಚಾರವಾಗಿ ಮಾತನಾಡಿದ ಸಚಿವರು, ನೇರ ರೈಲು ಮಾರ್ಗಕ್ಕೆ ಅಲೈನ್ಮೆಂಟ್ ಸಮಸ್ಯೆ ಇವೆ. ನಾಲ್ಕೈದು ದಿನಗಳ ಹಿಂದೆ ಸಭೆ ಮಾಡಿದ್ದೇನೆ. ಸೂಕ್ತ ತಾಂತ್ರಿಕ ಕ್ರಮವಹಿಸಲು ಸೂಚನೆ ನೀಡಲಾಗಿದೆ. ಬೆಳಗಾವಿ ಹಾಗೂ ಬೆಂಗಳೂರಿನ ರೈಲು ಪ್ರಯಾಣದ ಅಂತರ ಐದು ಗಂಟೆ ಕಡಿಮೆಯಾಲಿದೆ. ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಹಾಗೂ ಸಚಿವರ ಜೊತೆಗೆ ಮಾತನಾಡಿದ್ದೇನೆ. ಅಲೈನ್ ಮೆಂಟ್ ಬದಲಾವಣೆಗೆ ರೈಲು ಇಲಾಖೆ ಒಪ್ಪಲ್ಲ ಎಂದು ಹೇಳಿದರು.
ನಾನೇ ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ
ಸಚಿವ ಎಂ.ಬಿ ಪಾಟೀಲ್ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಆಸೆ ಇದೆ, ದುರಾಸೆ ಇಲ್ಲ. ಸಿಎಂ ಆಗಬೇಕು ಅಂದರೆ ಪಕ್ಷ, ಶಾಸಕರು ಒಪ್ಪಬೇಕು. ನಾನೇ ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾರು ದುರಾಸೆ ಪಡುತ್ತಿಲ್ಲ. ಎಲ್ಲಾ ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾನೇ ಎನ್ನುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ನಿಯಮ ಇದೆ. ಹೈಕಮಾಂಡ್ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಹೆಸರು ಸಹ ಪರಿಗಣಿಸಲಾಗುವುದು ಎಂದು ಹೇಳಿದರು.












Click it and Unblock the Notifications