ಸಚಿವ ಸ್ಥಾನಕ್ಕೆ ಲಾಭಿ ಮಾಡಲ್ಲ, ವರಿಷ್ಠರೇ ನೀಡಲಿ: ಬಸವರಾಜ ಹೊರಟ್ಟಿ
ಶಿರಸಿ, ನವೆಂಬರ್ 21: ನನಗೆ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇದೆ ಹಾಗಿದ್ದ ಮೇಲೆ ನಾನೇಕೆ ಸಚಿವ ಸ್ಥಾನಕ್ಕೆ ಲಾಭಿ ಮಾಡಬೇಕು ಎಂದು ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಬಗ್ಗೆ ಆಶಾವಾದಿಯೂ ಅಲ್ಲ, ನಿರಾಶಾವಾಧಿಯೂ ಅಲ್ಲ ಎಂದಿದ್ದಾರೆ.
ನನ್ನ ಸಾಮರ್ಥ್ಯವನ್ನು ಗುರುತಿಸಿ ಪಕ್ಷದ ವರಿಷ್ಠರು ಸಚಿವ ಸ್ಥಾನ ಕೊಡುವುದಿದ್ದರೆ ಕೊಡಲಿ ವಿನಃ ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಕರ್ನಾಟಕದಿಂದ 96 ಶಾಸಕರು ಆಯ್ಕೆ ಆಗಿದ್ದಾರೆ. ಸಂಖ್ಯೆಯನ್ನು ಗಮನಿಸಿ ಸಚಿವ ಸ್ಥಾನ ನೀಡುವಾಗಿ ಉತ್ತರ ಕರ್ನಾಟಕವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಸರ್ಕಾರಕ್ಕೆ ಅದರದ್ದೇ ಆದ ಸಮಸ್ಯೆಗಳಿವೆ, ಸಮ್ಮಿಶ್ರ ಸರ್ಕಾರದಲ್ಲಿ ಆಕಾಂಕ್ಷಿಗಳ ಪಟ್ಟಿ ಯಾವಾಗಲೂ ಉದ್ದವೇ ಇರುತ್ತದೆ. ಇಂತಹಾ ಸಮಯದಲ್ಲಿ ಲಾಭಿಗಳನ್ನು ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಅವರು ಹೇಳಿದರು.
ಶಿಕ್ಷಣ ಸಚಿವ ಮಹೇಶ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಬಸವರಾಜ ಹೊರಟ್ಟಿ ಅವರಿಗೆ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.












Click it and Unblock the Notifications