ದಿನಕ್ಕೆ 15 ತಾಸು ಕೆಲಸ ಮಾಡುವ ಶಕ್ತಿ ನನ್ನಲಿದೆ: ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಡಿಸೆಂಬರ್ 29: ನಾನು ದಣಿವರಿಯದೇ ಕೆಲಸ ಮಾಡುವ ಶಕ್ತಿ ಹೊಂದಿದ್ದೇನೆ. 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಗೆ ಮಂಡಿ ನೋವು ಹೆಚ್ಚಾಗಿದೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೂ ನಡೆಯಲಿದೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ತಾವು ಫಿಟ್ ಅಂಡ್ ಫೈನ್ ಎಂಬ ಸಂದೇಶ ನೀಡಿದ್ದಾರೆ.
ವರ್ಷದ 365 ದಿನಗಳು ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ, ಸ್ಪೂರ್ತಿ ನನ್ನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಕೆಲಸಮಯ ವಿಶ್ರಮಿಸಬೇಕು ಎನ್ನುವ ಎಂ.ಪಿ.ಕುಮಾರಸ್ವಾಮಿಯವರ ಅಭಿಪ್ರಾಯಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ದಿನದಲ್ಲಿ ಕನಿಷ್ಟ 15 ತಾಸು ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ . ಈ ನಿಟ್ಟಿನಲ್ಲಿ ತಯಾರಿಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಬಿಜೆಪಿ ಪಕ್ಷದ ಕಾರ್ಯಕಾರಣಿ ಸಭೆ ನಡೆಯಲಿದ್ದು, ಪಕ್ಷದ ಸಂಘಟನೆ ಹಾಗೂ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಕಾರ್ಯಕಾರಣಿ ಸಭೆಯ ಕಾರ್ಯಸೂಚಿ ಮತ್ತು ಪಕ್ಷದ ರಾಜ್ಯಧ್ಯಕ್ಷರು ಮತ್ತು ಅರುಣ್ ಸಿಂಗ್ ಅವರು ನಿರ್ಧರಿಸಲಿದ್ದಾರೆ ಎಂದರು.
2023ರ ಚುನಾವಣೆಯಲ್ಲಿ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಅರುಣ್ ಸಿಂಗ್ ಅವರು ತಿಳಿಸಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ. ಬಿಜೆಪಿ ಪಕ್ಷ ಟೀಂವರ್ಕ್ನಲ್ಲಿ ನಂಬಿಕೆ ಇಟ್ಟಿದ್ದು, ಒಗ್ಗಟ್ಟಾಗಿ ಸಂಘಟಿತರಾಗಿ ಕೆಲಸ ಮಾಡಲಾಗುವುದು. ಪಕ್ಷ ಮತ್ತು ಸರ್ಕಾರ ನಡುವೆ ಉತ್ತಮ ಸಂಬಂಧವನ್ನು ಸಂಯೋಜಿಸಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಇಂತಹ ಮುಖ್ಯಮಂತ್ರಿಯನ್ನು ಎಲ್ಲೂ ನೋಡಿಲ್ಲ:
'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ 100 ದಿನದ ಆಡಳಿತದಲ್ಲಿ ಅನೇಕ ಯೋಜನೆಗಳನ್ನು ರಾಜ್ಯಕ್ಕೆ ಕೊಡುಗೆ ನೀಡಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ನಾನು ಎಲ್ಲಿಯೂ ನೋಡಿಲ್ಲ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಎಲ್ಲಿಯೂ ಭ್ರಷ್ಟಾಚಾರ ನಡೆದಿಲ್ಲ. ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ. ಯಾವಾಗಲೂ ಸುಳ್ಳು ಆರೋಪಗಳನ್ನೇ ಮಾಡುತ್ತಿರುತ್ತಾರೆ. ಬಸವರಾಜ ಬೊಮ್ಮಾಯಿ ಸರಳವಾದ ಆಡಳಿತ ನೀಡುತ್ತಿದ್ದು, ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಅವಕಾಶ ಮಾಡಿಕೊಡುತ್ತಿಲ್ಲ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ 2023ರ ಚುನಾವಣೆ ಎದುರಿಸುತ್ತೇವೆ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು












Click it and Unblock the Notifications