ಮುನಿಸು ಮರೆತ್ರಾ ಹೆಚ್ ಡಿ ಕುಮಾರಸ್ವಾಮಿ: ಸುಮಲತಾ ಭೇಟಿಯಾಗುತ್ತೇನೆ ಎಂದು ಹೆಚ್ಡಿಕೆ ಹೇಳಿದ್ಯಾಕೆ?
ಬೆಂಗಳೂರು, ಜನವರಿ 08: 2019 ರ ಮಂಡ್ಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜಕೀಯ ಎದುರಾಳಿಗಳಾಗಿದ್ದು, ಪರಸ್ಪರ ಈ ಇಬ್ಬರು ನಾಯಕರ ನಡುವೆ ಮಾತಿನ ಸಮರವೇ ನಡೆದಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಸುಮಲತಾ ಹಾಗೂ ಕುಮಾರಸ್ವಾಮಿ ಮುನಿಸಿ ಮರೆತಂತೆ ಕಾಣುತ್ತಿದೆ.
ಹೌದು, 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಅತೀ ಹೆಚ್ಚು ಸ್ಥಾನವನ್ನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದಾರೆ.

ಈಗಾಗಲೇ ನನ್ನ ಸ್ವಾಭಿಮಾನ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಸುಮಲತಾ ಅವರಿಗೆ ಈ ಬಾರೀ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಅನುಮಾನ. ಏಕೆಂದರೆ, ಕ್ಷೇತ್ರ ಹಂಚಿಕೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ನಾಯಕರ ಕೈ ಸೇರಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಇನ್ನೂ ಕಳೆದು ಕೊಂಡ ಮಂಡ್ಯ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ನಾಯಕರು ಮಾಸ್ಟರ್ ಪ್ಲಾನ್ ನಡೆಸಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ನಡೆಸುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಈಗಾಗಲೇ ಮಂಡ್ಯ ಸಂಸದರಾದ ಸುಮಲತಾ ಅವರ ಬೆಂಬಲಿಗ ಸಚ್ಚಿದಾನಂದ ಅವರು, ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಮಂಡ್ಯ ರಾಜಕೀಯದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕುಮಾರಸ್ವಾಮಿ ಅವರು, ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ? ಎಂದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದ್ರೆ ಕೊಟ್ಟು ನಿಲ್ಲಬೇಕು ಅಂತಾನೂ ಇದ್ದೀವಾ? ಖಂಡಿತಾ ಇಲ್ಲ.
ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇವೆಲ್ಲಾ ಪ್ರಾರಂಭಿಕ ಹಂತದಲ್ಲಿ ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಲೋಕಸಭೆಗೆ ಕುಮಾರಸ್ವಾಮಿ ನಿಲ್ಲುವ ವಿಚಾರದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು.
ಮುಂದಿನ ಲೋಕಸಭಾ ಚುನಾವಣೆ ಜೆಡಿಎಸ್ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅಲ್ಲದೇ ಮೈತ್ರಿಯಿಂದ ಸಿಗಲಿರುವ ನಾಲ್ಕು ಕ್ಷೇತ್ರದಲ್ಲಿ ಗೆಲ್ಲುವುದು ಜೆಡಿಎಸ್ ನಾಯಕರಿಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಜೆಡಿಎಸ್ ಜೊತೆಗೆ ವಿರೋಧ ಕಟ್ಟಿಕೊಂಡ ಎಲ್ಲಾ ನಾಯಕರನ್ನ ಸಂಪರ್ಕಿಸುವ ಮೂಲಕ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. ಇನ್ನೂ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೇ, ಅಲ್ಲಿ ಸುಮಲತಾ ಬೆಂಬಲವೂ ಸಹ ಬೇಕಾಗುತ್ತದೆ. ಹೀಗಾಗಿ ಹಿಂದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ನಡೆದ ಮುನಿಸುಗಳು ಮರೆಯಾಗಿ, ಚರ್ಚೆಗೆ ಮುಂದಾಗಿದ್ದಾರಾ ಎನ್ನುವ ಮಾತುಗಳು ಕೇಳಿ ಬಂದಿವೆ.












Click it and Unblock the Notifications