BSY ಶಿಕಾರಿಪುರದಿಂದಲೇ ಸ್ಪರ್ಧಿಸಲು ನಿರ್ಧರಿಸಿದರೆ ಸಂತೋಷದಿಂದ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ ಹೇಳಿದ್ದೇನು? ವರದಿ
ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರದಿ ಓದಿ
ಬೆಂಗಳೂರು, ಫೆಬ್ರವರಿ 23: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ ಎಂದು ವಿಧಾನಸಭೆ ವಿರೋಧ ಸಭೆ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬುಧವಾರ ಯಡಿಯೂರಪ್ಪನವರು ವಿಧಾನಸಭೆ ಕಲಾಪದಲ್ಲಿ ವಿದಾಯದ ಭಾಷಣ ಮಾಡಿದ್ದರು.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ. ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ' ಎಂಬುದಾಗಿ ತಿಳಿಸಿದ್ದಾರೆ.

'ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ. ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು, ಜನರ ಕಷ್ಟದಲ್ಲಿ ಭಾಗಿಯಾಗಬೇಕು, ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಬೇಕು. ಆದರೆ, ವಯಸ್ಸು 75 ದಾಟಿದೆ, ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
'ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ. ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ' ಎಂದೂ ವಿರೋಧ ಪಕ್ಷದ ನಾಯಕರು ತಿಳಿಸಿದ್ದಾರೆ.

'ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವ ಯಡಿಯೂರಪ್ಪನವರು ಮತ್ತೊಮ್ಮೆ ಶಾಸಕರಾಗಿ ಜನಸೇವೆ ಮಾಡಲು ದೈಹಿಕವಾಗಿ ಶಕ್ತರಿದ್ದಾರೆ. ಹೀಗಿದ್ದಾಗ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ ದಶಕಗಳಿಂದ ಗೆಲ್ಲಿಸುತ್ತಾ ಬಂದಿರುವ ಶಿಕಾರಿಪುರದ ಜನರಿಗೆ ದ್ರೋಹ ಬಗೆದಂತಾಗುವುದಿಲ್ಲವೇ?' ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.
'ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ನನ್ನ ಸಲಹೆಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆಂದು ಭಾವಿಸಿದ್ದೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬುಧವಾರ ವಿಧಾನಸಭೆ ಕಲಾಪದಲ್ಲಿ ವಿದಾಯದ ಭಾಷಣ ಮಾಡಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ ಮುಂಬರುವ ಚುನಾವಣೆಗೆ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂದು ಟೀಕಿಸಿದ್ದರು. 'ಪ್ರತಿಪಕ್ಷಗಳ ಮಾತುಗಳು ನಮ್ಮನ್ನು ನಿರುತ್ಸಾಹಗೊಳಿಸುವುದಿಲ್ಲ' ಎಂದು ಅವರು ತಮ್ಮ ಪಕ್ಷದ ಶಾಸಕರಿಗೆ ಹೇಳಿದರು. ಯಡಿಯೂರಪ್ಪ ಅವರನ್ನು ಶುಕ್ರವಾರ ಬಜೆಟ್ ಅಧಿವೇಶನ ಕೊನೆಗೊಳ್ಳುವ ವೇಳೆಗೆ ಶಾಸಕಾಂಗದಿಂದ ಔಪಚಾರಿಕವಾಗಿ ಸನ್ಮಾನಿಸಿ ಕಳುಹಿಸಲಾಗುವುದು.












Click it and Unblock the Notifications