ಆರು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ : ಮುತಾಲಿಕ್

ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಾತನಾಡಿದ ಪ್ರಮೋದ್ ಮುತಾಲಿಕ್, 2014ರ ಲೋಕಸಭೆ ಚುನಾವಣೆಯಲ್ಲಿ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶ್ರೀರಾಮ ಸೇನೆ ನಿರ್ಧರಿಸಿದೆ. ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು.
ಆರು ಕ್ಷೇತ್ರಗಳಲ್ಲಿಯೂ ಸೇನೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿಗೆ ಮನವಿ ಮಾಡಲಾಗುತ್ತದೆ. ಒಂದು ವೇಳೆ ಬಿಜೆಪಿ ಟಿಕೆಟ್ ನಿರಾಕರಿಸಿದರೂ ಸ್ವತಂತ್ರವಾಗಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಮುತಾಲಿಕ್ ಹೇಳಿದರು.
ಚಿಕ್ಕಮಗಳೂರು, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಹಾವೇರಿ, ಹುಬ್ಬಳ್ಳಿ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಶೀಘ್ರದಲ್ಲೇ ನಿರ್ಧರಿಸುತ್ತೇನೆ ಎಂದು ಮುತಾಲಿಕ್ ತಿಳಿಸಿದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಶ್ರೀರಾಮ ಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸಲು ಸೇನೆ ತೀರ್ಮಾನಿಸಿದೆ. ಬಿಜೆಪಿ ಟಿಕೆಟ್ ನೀಡದಿದ್ದರೂ, ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದರು.
ದತ್ತಮಲಾ ಅಭಿಯಾನ : ಅ.23ರಿಂದ 27ರವರೆಗೆ ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ ಶ್ರೀರಾಮ ಸೇನೆ ದತ್ತಮಲಾ ಅಭಿಯಾನ ಹಮ್ಮಿಕೊಂಡಿದೆ. ಸುಮಾರು 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.












Click it and Unblock the Notifications