ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧಿಸುತ್ತೇನೆ : ರಕ್ಷಿತಾ
ಶುಕ್ರವಾರ ಮಂಡ್ಯದಲ್ಲಿ ಮಾತನಾಡಿದ ನಟಿ ರಕ್ಷಿತಾ ನಾನು ಮುಂದಿನ ಲೋಕಸಭೆ ಚುನಾಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು. ನಾನು ಮಂಡ್ಯದ ಸೊಸೆಯಾಗಿದ್ದು, ಈ ಕ್ಷೇತ್ರದಿಂದಲೇ ಸ್ಪರ್ಧಿಸಲು ಇಚ್ಛಿಸಿರುವುದಾಗಿ ಹೇಳಿದರು.
ಜೆಡಿಎಸ್ ಪಕ್ಷ ಬೇರೆ ಯಾವುದೇ ಕ್ಷೇತ್ರದಿಂದ ಟಿಕೆಟ್ ನೀಡಿದರೂ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮಂಡ್ಯ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ, ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದೇನೆ ಎಂದರು.
ನಟಿ ಎನ್ನಬೇಡಿ : ತಮ್ಮನ್ನು ನಟಿ ಎಂದು ಕರೆಯಬೇಡಿ ಎಂದು ರಕ್ಷಿತಾ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ತಾವು ನಟಿಸುವುದನ್ನು ಬಿಟ್ಟು ಬಹಳ ವರ್ಷಗಳು ಕಳೆದಿವೆ. ಆದ್ದರಿಂದ ತಮ್ಮನ್ನು ನಟಿ ಎಂದು ಕರೆಯಬಾರದು ಎಂದು ಅವರು ಮನವಿ ಮಾಡಿದರು.
ಎಚ್ಡಿಕೆ ಏನು ಹೇಳ್ತಾರೆ : ರಕ್ಷಿತಾ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿಕೆ ನೀಡಿದ್ದು, ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಸೇರಿದಂತೆ ತಮ್ಮ ಕುಟುಂಬದ ಯಾರೂ ಸ್ಪರ್ಧಿಸುವುದಿಲ್ಲ, ನಟಿ ರಕ್ಷಿತಾ ಸ್ಪರ್ಧೆ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.[ರಕ್ಷಿತಾ ಸ್ಪರ್ಧೆ ಮಂಡ್ಯದಿಂದ]
ರಕ್ಷಿತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಆಸಕ್ತಿ ಹೊಂದಿದ್ದಾರೆ. ರಕ್ಷಿತಾ ಅವರ ಜೊತೆಗೆ ಜೆಡಿಎಸ್ನಿಂದ ಹಲವಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದು, ಜಿಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಒಬ್ಬರು ಅಭ್ಯರ್ಥಿಯನ್ನು ಘೋಷಿಸಿ ಚುನಾವಣಾ ಸಿದ್ಧತೆ ಆರಂಭಿಸಿರುವ ಜೆಡಿಎಸ್ ತನ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸಿ.ಎಸ್.ಪುಟ್ಟರಾಜು ಅವರ ಹೆಸರನ್ನು ಆಯ್ಕೆ ಮಾಡಿದೆ. ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಸಿ.ಎಸ್.ಪುಟ್ಟರಾಜು ಅವರಿಗೆ ಟಿಕೆಟ್ ನೀಡಲಾಗುತ್ತದೆಯೋ ಅಥವ ರಕ್ಷಿತಾಗೆ ಅವಕಾಶ ನೀಡುತ್ತಾರೆಯೋ ಕಾದು ನೋಡಬೇಕು.[ಜೆಡಿಎಸ್ ಸಂಭಾವ್ಯ ಪಟ್ಟಿ]