ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ, ಚಾಮುಂಡೇಶ್ವರಿಯಿಂದಲೇ ಸ್ಪರ್ಧೆ: ಸಿದ್ದು
ಮಡಿಕೇರಿ, ಜನವರಿ 09: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಜ.09 ರಂದು ಮಡಿಕೇರಿ ನಗರದ ಗಾಲ್ಫ್ಮೈದಾನಕ್ಕೆ ಹೆಲಿಕಾಫ್ಟರ್ ನಲ್ಲಿ ಬಂದಿಳಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವ ಮಾತೇ ಇಲ್ಲ. ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನಗಳು ಬರುತ್ತಿವೆ. ಆದರೆ ಚಾಮುಂಡೇಶ್ವರಿ ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಕ್ಷೇತ್ರ ಹೀಗಾಗಿ ಅಲ್ಲಿಂದಲೇ ಸ್ಪರ್ಧಿಸುವುದಾಗಿ ಅವರು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿದ್ದು ಐದು ಬಾರಿ ಗೆದ್ದಿದ್ದೇನೆ. ಹೀಗಾಗಿ ಅಲ್ಲಿನ ಜನರ ಬಗ್ಗೆ ನನಗೆ ವಿಶ್ವಾಸವಿದೆ. ಈಗಾಗಲೇ ಕ್ಷೇತ್ರ ಬದಲಾವಣೆ ಮಾಡುತ್ತೇನೆ ಎನ್ನುವುದು ಬರೀ ಊಹಾಪೋಹವಾಗಿದ್ದು, ಯಾರೋ ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಂತು ಸತ್ಯ. ಅದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಹೇಳಿದರು.

ಕೊಡಗಿನಲ್ಲಿರುವ ಕೆಲವು ಸಮಸ್ಯೆಗಳು ನನ್ನ ಅರಿವಿಗೆ ಬಂದಿದ್ದು ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ, ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಕಾಂಗ್ರೆಸ್ ಗೆ ಬರುವುದು ಸಂತೋಷದ ವಿಚಾರವೇ ಈ ಕುರಿತು ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದರು.
ಮಂಗಳೂರಿನ ದೀಪಕ್ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿ ಬಳಿ ಈ ಬಗ್ಗೆ ಮಾಹಿತಿಯಿದ್ದರೆ ಪೊಲೀಸರಿಗೆ ನೀಡಲಿ ಎಂದರು. ರಾಜ್ಯದಲ್ಲಿ ಕೋಮುವಾದಿಗಳ ಕುಮ್ಮಕ್ಕಿನಿಂದಾಗಿ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕೋಮುವಾದವನ್ನು ಯಾರೇ ಹರಡಲಿ ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವುದಾಗಿ ಇದೇ ವೇಳೆ ಹೇಳಿದರು.











Click it and Unblock the Notifications