ಕಾಂಗ್ರೆಸ್ ನ ಪ್ರಭಾವಿ ನಾಯಕರು ಎರೆಡೆರಡೂ ಕ್ಷೇತ್ರದಲ್ಲಿ ಸ್ಪರ್ಧೆ ಚರ್ಚೆ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಶೋಭಾ ಕರಂದ್ಲಾಜೆ, ಸಿ.ಟಿ ರವಿ, ಅಶ್ವತ್ ನಾರಾಯಣ ಅವರು ದೇಶ, ರಾಜ್ಯ, ಒಕ್ಕಲಿಗ ಹಾಗೂ ಹಿಂದೂ ವಿರೋಧಿಗಳು ಎಂದು ಡಿ ಕೆ ಶಿವಕುಮಾರ್ ಕಿಡಿಕಾರಿದರು.
ಬೆಳಗಾವಿ, ಮಾರ್ಚ್20: ರಾಜ್ಯ ವಿಧಾನಸಭಾ ಚುನಾವಣಾ ರಣಕಣಕ್ಕೆ ವೇದಿಕೆ ಸಜ್ಜಾಗಿದ್ದು, ಪಕ್ಷವನ್ನ ಅಧಿಕಾರಕ್ಕೆ ತರಲು ರಾಜಕೀಯ ಪಕ್ಷಗಳು ಭರಜರಿ ತಯಾರಿಯನ್ನ ನಡೆಸುತ್ತವೆ. ಈ ನಡುವೆ ಅಭ್ಯರ್ಥಿಗಳ ಘೋಷಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ಕಗ್ಗಂಟಾಗಿದೆ.
ಇನ್ನೂ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸೇರಿದಂತೆ ಕೆಲ ನಾಯಕರು ಎರೆಡೆರಡೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ಧಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಇನ್ನೂ ಎರಡ್ಮೂರು ದಿನಗಳಲ್ಲಿ 120 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಈ ಕುರಿತು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ. ಒಂದೇ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಸ್ಪರ್ಧೆಯ ಕ್ಷೇತ್ರದ ವಿಚಾರವಾಗಿ ಮಾತನಾಡಿದ ಅವರು, ಪಕ್ಷಕ್ಕೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ಬದ್ಧ ಎಂದು ಹೇಳಿದ್ದಾರೆ. ಉಳಿದ ವಿಚಾರ ಅವರ ಬಳಿ ಕೇಳಬೇಕು ಎಂದು ತಿಳಿಸಿದ ಅವರು, ನಮ್ಮಲ್ಲಿ ಯಾವುದೇ ಸಂಘರ್ಷವಿಲ್ಲ. ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮುಂದೆ ಪಕ್ಷ ಯಾವ ತೀರ್ಮಾನ ಮಾಡುತ್ತದೆಯೋ ಅದಕ್ಕೆ ಬದ್ಧವಾಗಿ ನಾವು ನಡೆದುಕೊಳ್ಳುತ್ತೇವೆ ಎಂದರು.

ಉರಿಗೌಡ ನಂಜೇಗೌಡ ವಿರೋಧಿಸುವವರು ದೇಶದ್ರೋಹಿಗಳು ಎಂಬ ಸಿ. ಟಿ ರವಿ ಹೇಳಿಕೆ ಕುರಿತು ಮಾತನಾಡಿ, ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವ ಶೋಭಾ ಕರಂದ್ಲಾಜೆ, ಸಿ.ಟಿ ರವಿ, ಅಶ್ವತ್ ನಾರಾಯಣ ಅವರು ದೇಶ, ರಾಜ್ಯ, ಒಕ್ಕಲಿಗ ಹಾಗೂ ಹಿಂದೂ ವಿರೋಧಿಗಳು ಎಂದು ಹರಿಹಾಯ್ದರು.
ನಾನು ಮಂತ್ರಿಯಾದ ನಂತರ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ನನಗೂ ದೇಶ ಹಾಗೂ ರಾಜ್ಯದ ಇತಿಹಾಸ ಗೊತ್ತಿದೆ. ರಾಜ್ಯಕ್ಕಾಗಿ ಮಹಾರಾಜರು, ಟಿಪ್ಪು ಅವರ ತ್ಯಾಗದ ಬಗ್ಗೆ ತಿಳಿದಿದೆ. ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿಗಳು, ರಾಜ್ಯದ ಧರ್ಮಪೀಠಗಳ ತ್ಯಾಗದ ಬಗ್ಗೆ ಗೊತ್ತಿದೆ. ಅವರು ಎಲ್ಲ ವಿಚಾರದಲ್ಲಿ ವಿಫಲವಾಗಿದ್ದು, ಜನರ ಗಮನ ಬೇರೆಡೆ ಸೆಳೆಯಲು ಭಾವನೆಗಳ ಜತೆ ಆಟವಾಡುತ್ತಿದ್ದಾರೆ ಎಂದು ತಿಳಿಸಿದರು.
ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಇತಿಹಾಸ ತಿರಿಚಿದ್ದ ಬಿಜೆಪಿ, ಈಗ ಉರಿಗೌಡ ನಂಜೇಗೌಡ ಎಂಬ ಹೆಸರಲ್ಲಿ ಒಕ್ಕಲಿಗರ ಇತಿಹಾಸ ತಿರುಚುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು;.
ಜಾತಿ, ಕೋಮುಗಳ ನಡುವೆ ದ್ವೇಷ ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಟಿಪ್ಪು ಸುಲ್ತಾನ್ ಸತ್ತು ಎರಡು ಶತಮಾನಗಳೇ ಕಳೆದಿವೆ. ಈಗ ಊರಿಗೌಡ, ನಂಜೇಗೌಡರನ್ನು ಬಿಜೆಪಿ ಸೃಷ್ಟಿಸಿದೆ. ಮಂಡ್ಯ ಜಿಲ್ಲೆಗೆ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಾ. ದೇ. ಜವರೇಗೌಡ ಅವರ ಸಂಪಾದಕತ್ವದಲ್ಲಿ 'ಸುವರ್ಣ ಮಂಡ್ಯ ' ಎಂಬ ಸಂಚಿಕೆ ತರಲಾಗಿತ್ತು.
ಅದರ ಪರಿಸ್ಕೃತ ಸಂಚಿಕೆಯಲ್ಲಿ ಸಂಶೋಧಕ ಹ.ಕ. ರಾಜೇಗೌಡರು ಮಂಡ್ಯ ಐವತ್ತು; ಒಂದು ಪಕ್ಷಿ ನೋಟ ಎಂಬ ಲೇಖನ ಬರೆದಿದ್ದರು.
ಅದರಲ್ಲಿ ದೊಡ್ಡನಂಜೆಗೌಡ, ಉರಿಗೌಡ ಎಂಬುವರು ಹೈದರಾಲಿ, ಟಿಪ್ಪು ವಿರುದ್ಧ ಸೆಟೆದು ನಿಂತಿದ್ದರು ಎಂದು ಉಲ್ಲೇಖಿಸಿದ್ದರು. ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ ಮಾಡಿರುವ ಬಗ್ಗೆ ಕೆಲವರು ರಾಜೇಗೌಡರನ್ನು ಪ್ರಶ್ನೆ ಮಾಡಿದಾಗ ಒಕ್ಕಲಿಗರಿಗೆ ಪ್ರಾಮುಖ್ಯತೆ ಸಿಗಲಿ ಎಂದು ಹೀಗೆ ಬರೆದಿದ್ದೇನೆ, ಇರಲಿ ಬಿಡಿ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಸ್ಪಷ್ಟನೆ ನೀಡಲು ಈಗ ಹ.ಕ. ರಾಜೇಗೌಡರು ಜೀವಂತವಾಗಿ ಇಲ್ಲ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಬಿಜೆಪಿಯ ವಾಟ್ಸಾಪ್ ಯೂನಿವರ್ಸಿಟಿ ಹೊಸ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಕಿಡಿಕಾರಿದರು.
ಅನೇಕ ಇತಿಹಾಸ ತಜ್ಞರು, ಸಂಶೋಧಕರು ಉರಿಗೌಡ, ನಂಜೇಗೌಡ ಕೇವಲ ಕಾಲ್ಪನಿಕ ಪಾತ್ರ ಎಂದು ಹೇಳುತ್ತಿದ್ದರೂ ಬಿಜೆಪಿಯವರು ಮಾತ್ರ ಇದನ್ನು ಬಿಡಲು ರೆಡಿ ಇಲ್ಲ. ಇತಿಹಾಸದ ಯಾವ ದಾಖಲೆಯಲ್ಲಿ ಉರಿಗೌಡ ನಂಜೇಗೌಡ ಟಿಪ್ಪು ಸುಲ್ತಾನ್ ಕೊಂದರು ಎಂಬುದು ಇದೆ ನೀವೇ ಹೇಳಿ ನೋಡೋಣ. ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಸುಲ್ತಾನನನ್ನು ಒಕ್ಕಲಿಗರು ಕೊಂದರು, ಆ ಮೂಲಕ ಒಕ್ಕಲಿಗರು ದೇಶವಿರೋಧಿಗಳು, ಕೊಲೆಗಡುಕರು ಎಂದು ಅವರ ಗೌರವ, ಸ್ವಾಭಿಮಾನಕ್ಕೆ ಮಸಿ ಬಳಿಯಲಾಗುತ್ತಿದೆ.
ಬಿಜೆಪಿಯವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯಾರನ್ನು ಬೇಕಾದರೂ ಸೃಷ್ಟಿಸುತ್ತಾರೆ, ಯಾರ ಮನೆಯನ್ನು ಬೇಕಾದರೂ ಹಾಳು ಮಾಡುತ್ತಾರೆ. ಸಿ.ಟಿ ರವಿ ಹಾಗೂ ಅಶ್ವತ್ ನಾರಾಯಣ್ ಎಂಬ ಅವಿವೇಕಿಗಳು ಈ ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯದ ವಿರುದ್ಧ ಬೇರೆಯವರನ್ನು ಎತ್ತಿ ಕಟ್ಟುತ್ತಿದ್ದಾರೆ.
ಒಕ್ಕಲಿಗ ಸಮುದಾಯದ ಹೆಸರನ್ನು ಬಳಸಿಕೊಂಡು ರಾಜಕೀಯವಾಗಿ ಬೆಳೆಯುತ್ತಿರುವ ಇವರು ಈಗ ಅದೇ ಸಮಾಜದ ಸ್ವಾಭಿಮಾನ ಹಾಗೂ ಘನತೆಗೆ ಮಸಿ ಬಳಿಯುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಲವು ಸಂಘಟನೆಗಳು ನನಗೆ ಒತ್ತಡ ಹೇರುತ್ತಿದ್ದು, ಇತಿಹಾಸ ತಿರುಚುವ ಈ ಷಡ್ಯಂತ್ರ ಖಂಡಿಸಿ, ಅದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.












Click it and Unblock the Notifications