ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ - ಸಿದ್ದರಾಮಯ್ಯ
ಬೆಂಗಳೂರು ಸೆಪ್ಟೆಂಬರ್ 11: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಶುರುವಾದ ಬೆನ್ನಲ್ಲೆ ಕಾಂಗ್ರೆಸ್ ವಲಯದಲ್ಲಿ ಭಾರೀ ಮಹತ್ವದ ಬೆಳವಣಿಗೆಗಳು ಕಂಡು ಬರುತ್ತಿವೆ. ಒಂದೆಡೆ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕಾಗಿ ಹಗ್ಗಜಗ್ಗಾಟ ಆರಂಭವಾಗಿದ್ದರೆ ಮತ್ತೊಂದೆಡೆ ಮುಡಾ ಹಗರಣದಲ್ಲಿ ತನಿಖೆಗೆ ಸಹಕರಿಸಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಈ ನಡುವೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ದಿನಕ್ಕೊಬ್ಬರು ನಾನು ಸಿಎಂ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ''ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ. ಇದರಲ್ಲಿ ಯಾವುದೇ ಅನುಮಾನವೇ ಇಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ'' ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆಯ ಬೆನ್ನಲ್ಲೇ ಹಲವು ಸಚಿವರು ನಾನೂ ಸಿಎಂ ಆಕಾಂಕ್ಷಿ ಎಂದು ಹೇಳಿಕೆ ಕೊಟ್ಟಿದ್ದಾರೆ. ಎಂಬಿ ಪಾಟೀಲ್, ಆರ್ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್, ಜಿ ಪರಮೇಶ್ವರ್, ಶಿವಾನಂದ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.
ಅಲ್ಲದೆ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಂಜುನಾಥ್ ಬಂಡಾರಿ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ಸಿಎಂ ಸ್ಥಾನದ ಬಗ್ಗೆ ಬಹಿರಂಗ ಹೇಳಿಕೆ ಕೊಡದಂತೆ ಎಚ್ಚರಿಕೆ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸಚಿವರು ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಸಿಎಂ ಬದಲಾವಣೆ ಆಗುವುದಾದರೆ ನಾನೂ ಕೂಡ ಸ್ಪರ್ಧಿಸುವೆ ಎಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಇತ್ತ ಸಿಎಂ ಕುರ್ಚಿ ಫೈಟ್ ವಿಚಾರದ ಬಗ್ಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರ್ತಾರೆ. ಸಿಎಂ ರೇಸ್ನಲ್ಲಿ ಯಾರು ಇಲ್ಲ. ಬಿಜೆಪಿಯವರು ಸರ್ಕಾರ ಅಸ್ಥಿರ ಮಾಡುವುದೇ ಅವರ ಉದ್ದೇಶ. ಅದಕ್ಕಾಗಿ ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಅಪರೇಷನ್ ಮಾಡುವ ಕೆಲಸ ಮಾಡ್ತಿದ್ದಾರೆ. ಆದ್ರೆ ಸರ್ಕಾರ ಕೆಡವಲು ಸಾಧ್ಯವೇ ಇಲ್ಲ. ಸಿಎಂ ಬದಲಾವಣೆಯೂ ಆಗಲ್ಲ ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಸಚಿವ ಮಧುಬಂಗಾರಪ್ಪ ಕೂಡ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಸಾಹೇಬ್ರನ ಇಳಿಸೊಕೆ ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ಸಂದರ್ಭವನ್ನು ಬಳಸಿಕೊಂಡ ವಿಪಕ್ಷ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ. ಪಕ್ಷ ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಟೀಕಿಸುತ್ತಿದ್ದಾರೆ. ಇದೇ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ''ಹೊರಗೆ ಸಿದ್ದರಾಮಯ್ಯನವರ ಪರವಾಗಿ ಬಂಡೆ ತರ ನಿಂತಿದ್ದೇವೆ ಅಂತಾರೆ ಆದರೆ ಕಾಂಗ್ರೆಸ್ನಲ್ಲಿ ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ'' ಎಂದು ವ್ಯಂಗ್ಯವಾಡಿದ್ದಾರೆ.












Click it and Unblock the Notifications