ಧಾರವಾಡದಿಂದ ದಿಂಗಾಲೇಶ್ವರ ಸ್ವಾಮಿಜಿಗಳು ಕಣಕ್ಕೆ; ಕಾಂಗ್ರೆಸ್ ಸಂಪರ್ಕದ ಕುರಿತು ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ 09: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ದೊಡ್ಡ ಸವಾಲು ಎದುರಾಗಿದ್ದು, ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ದಿಂಗಾಲೇಶ್ವರ ಸ್ವಾಮೀಜಿಗಳು ಇದ್ದಾರೆ ಎನ್ನುವ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದ್ದು, ಈ ಕುರಿತು ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ಧಾರವಾಡದಿಂದ ದಿಂಗಾಲೇಶ್ವರ ಸ್ವಾಮಿಜಿಗಳು ಈಗ ಚುನಾವಣೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದು, ಈ ಬಗ್ಗೆ ಅನೇಕರು ನನಗೆ ಸಲಹೆ ನೀಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿ ನಿರ್ಧಾರದಂತೆ ನಾವು ಈಗಾಗಲೇ ಆನಂದ್ ಅಸೂಟಿ ಅವರಿಗೆ ಬಿ ಫಾರಂ ನೀಡಿದ್ದೇವೆ. ನಮ್ಮ ಅಭ್ಯರ್ಥಿ ಯುವಕರಾಗಿದ್ದಾರೆ. ಈ ಕುರಿತ ಪ್ರಸ್ತಾವನೆ ಇದೆ. ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ.

ನಾನು ಏಕಾಂಗಿಯಾಗಿ ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು. ಸ್ವಾಮೀಜಿಗಳು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವರು. ಮೊದಲೇ ಈ ವಿಚಾರ ನಮಗೆ ಗೊತ್ತಿದ್ದರೆ ಸುಲಭವಾಗುತ್ತಿತ್ತು ಎಂದು ತಿಳಿಸಿದರು.
ರಮೇಶ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದು, ಮತ್ತೊಂದೆಡೆ ಮುನಿಯಪ್ಪ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿದ ಅವರು, ಮೊನ್ನೆಯಷ್ಟೇ ನಾವು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಪ್ರಚಾರ ಮಾಡಿದ್ದೇವೆ. ಇನ್ನು ವೇದಿಕೆ ಮೇಲೆ ಭಾಷಣ ಮಾಡಿದರೆ ಮಾತ್ರ ಪ್ರಚಾರವೇ? ರಮೇಶ್ ಕುಮಾರ್ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದಷ್ಟೇ ಹೇಳಿದ್ದಾರೆ. ರಾಜಕೀಯದಲ್ಲಿ ಒಂದು ಪಕ್ಷದ ಸಿದ್ಧಾಂತ ಇದ್ದರೆ ಸಾಯುವವರೆಗೂ ಸೇವೆ ಮಾಡುತ್ತಲೇ ಇರುತ್ತಾರೆ. ಚುನಾವಣಾ ರಾಜಕೀಯಕ್ಕೂ ಸಕ್ರಿಯ ರಾಜಕೀಯಕ್ಕೂ ವ್ಯತ್ಯಾಸವಿದೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ಒಂದೆರಡು ದಿನಾಂಕಗಳನ್ನು ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೂ ಒಂದೆರಡು ದಿನ ರಾಜ್ಯದಲ್ಲಿ ಪ್ರಚಾರ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಭಾರತದಲ್ಲಿ ಖರ್ಗೆ ಅವರಿಗೆ ಬಹಳ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಾವು ಇವರ ಪ್ರವಾಸದ ಕುರಿತ ದಿನಾಂಕ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ಗ್ಯಾರಂಟಿ ನೋಡಿ ಮತ ಹಾಕಿದರೆ ಕುಕ್ಕರ್ ಬ್ಲಾಸ್ಟ್ ಸಂಭವಿಸಲಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆ ವಿಚಾರವಾಗಿ ಮಾತನಾಡಿ, ಗ್ಯಾರಂಟಿ ಬಗ್ಗೆ ಮಾತನಾಡಿ ಅವರೂ ಬ್ಲಾಸ್ಟ್ ಆಗಿದ್ದಾರೆ. ಅವರು ಶೋಭಕ್ಕಂಗೆ ಗೋಬ್ಯಾಕ್ ಎಂದು ನಮ್ಮ ಸದಾನಂದ ಗೌಡರನ್ನು ಬ್ಲಾಸ್ಟ್ ಮಾಡಿದ್ದಾರೆ. ಸಿ.ಟಿ ರವಿಯನ್ನು ನಮ್ಮ ತಮ್ಮಣ್ಣ ಬ್ಲಾಸ್ಟ್ ಮಾಡಿದರು ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ವಕ್ತಾರರಾಗಿ ತೇಜಸ್ವಿನಿ ಗೌಡ
ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್ ಮೂಲದವರು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಪಕ್ಷಕ್ಕೆ ಬಂದಿದ್ದಾರೆ. ತೇಜಸ್ವಿನಿ ಗೌಡ ಅವರು ನಮ್ಮ ಸಂಸದರಾಗಿದ್ದರು. ಪಕ್ಷದ ಅಧ್ಯಕ್ಷನಾಗಿ ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದಿನಿಂದ ತೇಜಸ್ವಿನಿ ಗೌಡ ಅವರನ್ನು ಪಕ್ಷದ ಅಧಿಕೃತ ವಕ್ತಾರರಾಗಿದ್ದಾರೆ.












Click it and Unblock the Notifications