ಕಾರ್ಯಕರ್ತನ ಹುಟ್ಟುಹಬ್ಬವಿದೆ, ಇಡಿ ವಿಚಾರಣೆಗೆ ಹಾಜರಾಗಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು, ನ.07: ಪಕ್ಷದ ಕಾರ್ಯಕರ್ತರೊಬ್ಬರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
"ನಾನು ನಾಳೆ ಇಡಿ ಮುಂದೆ ಹಾಜರಾಗುವುದಿಲ್ಲ, ಪಕ್ಷದ ಕಾರ್ಯಕರ್ತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ" ಎಂದು ಶಿವಕುಮಾರ್ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
"ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಪ್ರಕರಣದ ತನಿಖಾ ಅಧಿಕಾರಿ (ಐಒ) ಈಗ ಬದಲಾಗಿದ್ದಾರೆ. ನವೆಂಬರ್ 7 ರಂದು ಕೆಲವು ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತು ನನ್ನ ಸಹೋದರನಿಗೆ ಗುರುವಾರ ಸಮನ್ಸ್ ಬಂದಿದೆ" ಎಂದು ಶಿವಕುಮಾರ್ ಈ ಹಿಂದೆ ಸುದ್ದಿಗಾರರಿಗೆ ತಿಳಿಸಿದ್ದರು.

ದಾಖಲೆ ಒದಗಿಸಿದರೂ ಹಿಂಸೆ ನೀಡುತ್ತಿದ್ದಾರೆ
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪದೇ ಪದೇ ಯಾಕೆ ಕರೆದು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದರು. ನಾನು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದೇನೆ, ವಿಚಾರಣೆಗೆ ಹಾಜರಾಗುವ ಬಗ್ಗೆ ಯೋಚಿಸುತ್ತೇನೆ ಎಂದಿದ್ದ ಅವರು, ಈಗ ವಿಚಾರಣೆಗೆ ಹೋಗುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಿದ ದಾಖಲೆಗಳನ್ನು ಒದಗಿಸಿದ್ದರೂ ಮತ್ತೆ ಮತ್ತೆ ಹಿಂಸೆ ನೀಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಒಂದೇ ವಿಚಾರಕ್ಕೆ ಎರಡು ಪ್ರತ್ಯೇಕ ಪ್ರಕರಣ ದಾಖಲು
"ಮೊದಲು ಕೆಲವು ದಾಖಲಾತಿಗಳನ್ನು ಕೇಳಿದ್ದರು. ಇನ್ನು ಕೆಲವು ದಾಖಲೆಗಳನ್ನು ಅವರಿಗೆ ಕಳಿಸುತ್ತೇವೆ. ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಒಂದೇ ವಿಚಾರಕ್ಕೆ ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಿದ್ದಾರೆ. ಆ ರೀತಿ ಮಾಡಲು ಬರುವುದಿಲ್ಲ ಎಂದು ಆಕ್ಷೇಪಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇನೆ. ನಾನು ಕಾನೂನು ಹೋರಾಟವನ್ನು ಮುಂದುವರಿಸುತ್ತಿದ್ದೇನೆ. ಪದೇ ಪದೇ ಸಮನ್ಸ್ ನೀಡಿ ನನ್ನನ್ನು ಏಕೆ ಹಿಂಸಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ" ಎಂದಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದತಿಗೆ ಡಿಕೆಶಿ ಆಗ್ರಹ
ಇತ್ತ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯ(ಇಡಿ)ಗೆ ನೋಟಿಸ್ ಜಾರಿ ಮಾಡಿದೆ. ಕೆಲ ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಮನವಿ ಮೇರೆಗೆ ಸದ್ಯ ದೆಹಲಿ ಹೈಕೋರ್ಟ್ನಿಂದ ಇಡಿಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸೋನಿಯಾ, ರಾಹುಲ್, ಖರ್ಗೆಯವರ ವಿಚಾರಣೆ ನಡೆಸಿರುವ ಇಡಿ
ಶಿವಕುಮಾರ್ ಮತ್ತು ಸುರೇಶ್ ಅವರು ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಕಂಪನಿಯಾದ ಯಂಗ್ ಇಂಡಿಯಾಗೆ ಈ ಹಿಂದೆ ಅನಿರ್ದಿಷ್ಟ ಮೊತ್ತದ ಹಣವನ್ನು ದೇಣಿಗೆ ನೀಡಿದ್ದಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದಾರೆ. ವಹಿವಾಟಿನ ವಿವರಗಳನ್ನು ತಿಳಿಯಲು ಜಾರಿ ನಿರ್ದೇಶನಾಲಯ ಬಯಸಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲವು ತಿಂಗಳುಗಳಿಂದ ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಮುಂತಾದವರನ್ನು ಇಡಿ ವಿಚಾರಣೆ ನಡೆಸುತ್ತಿದೆ.












Click it and Unblock the Notifications