ಕಾಂಗ್ರೆಸ್ ಸೇರುವ ಕುರಿತು ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದೇನು?
ಮಂಡ್ಯ, ಮಾರ್ಚ್ 07 : 'ನಾನು ಕಾಂಗ್ರೆಸ್ ಬೆಂಬಲಿಸುವ ಗಾಳಿ ಸುದ್ದಿ ಹಬ್ಬಿದೆ. ಇದು ಸತ್ಯಕ್ಕೆ ದೂರವಾದ ಮಾತು. ನಮ್ಮನ್ನು ಯಾವ ಪಕ್ಷದವರೂ ಸಂಪರ್ಕಿಸಿಲ್ಲ' ಎಂದು ದರ್ಶನ್ ಪುಟ್ಟಣ್ಣಯ್ಯ ಸ್ಪಷ್ಟಪಡಿಸಿದರು.
ಮೇಲುಕೋಟೆ ಶಾಸಕರಾಗಿದ್ದ ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 'ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಸ್ವರಾಜ್ ಇಂಡಿಯ ಪಕ್ಷದಿಂದಲೇ ಸ್ಪರ್ಧಿಸಲಿದ್ದೇನೆ' ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ
'ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸುದ್ದಿಗಳು ಹಬ್ಬಿವೆ. ಇದು ಸತ್ಯಕ್ಕೆ ದೂರವಾದ ಸುದ್ದಿಯಾಗಿದೆ. ಯಾವ ಪಕ್ಷದವರೂ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಯಾರಿಗೂ ಬೆಂಬಲ ನೀಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ರೈತರ ಏಕೈಕ ಜನಪ್ರತಿನಿಧಿ ಕೆಎಸ್ ಪುಟ್ಟಣ್ಣಯ್ಯ
2013ರ ಚುನಾವಣೆಯಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರು ಸರ್ವೋದಯ ಕರ್ನಾಟಕ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಫೆಬ್ರವರಿ 18ರಂದು ಅವರು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.
ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಕೆಲವು ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು...
ಸ್ಪಷ್ಟನೆ ನೀಡಿದ್ದು ಏಕೆ?
ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಮಾರ್ಚ್ ಅಂತ್ಯದ ವೇಳೆಗೆ ಅವರು ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ದರಿಂದ, ದರ್ಶನ್ ಪುಟ್ಟಣ್ಣಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
2013ರ ಚುನಾವಣೆಯಲ್ಲಿ ಗೆಲುವು
ಕೆ.ಎಸ್.ಪುಟ್ಟಣ್ಣಯ್ಯ ಅವರು 2013ರ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 80,041 ಮತಗಳನ್ನು ಪಡೆದು ಜಯಗಳಿಸಿದ್ದರು.
ಸ್ವರಾಜ್ ಇಂಡಿಯಾದಿಂದ ಸ್ಪರ್ಧೆ
ಈ ಬಾರಿಯ ಚುನಾವಣೆಯಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರು ಸ್ವರಾಜ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ, 2018ರ ಫೆಬ್ರವರಿ 18ರಂದು ಅವರು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಅಂತಿಮ
ಮೇಲುಕೋಟೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಂತ್ರ ರೂಪಿಸುತ್ತಿದದ್ದವು. ಜೆಡಿಎಸ್ ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಅವರನ್ನು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ಕಾಂಗ್ರೆಸ್ ಟಿಕೆಟ್ ಯಾರಿಗೆ?
ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗೆ ಭಾರೀ ಪೈಪೋಟಿ ನಡೆಯುತ್ತಿದೆ. ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಆಪ್ತರಾದ ರೇವಣ್ಣ, ಅಂಬರೀಶ್ ಬೆಂಬಲಿಗರಾದ ಎಲ್.ಡಿ.ರವಿ, ಎಲ್.ಸಿ.ಮಂಜುನಾಥ ಅವರು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.