ಕಾಂಗ್ರೆಸ್ ತೊರೆಯುವುದಾಗಿ ಘೋಷಿಸಿದ ಗುತ್ತೇದಾರ್!
ಬೆಂಗಳೂರು, ಮಾರ್ಚ್ 29 : ಅಫ್ಜಲ್ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಹಾಲಿ ಶಾಸಕರೇ ಪಕ್ಷ ತೊರೆಯುತ್ತಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಲಿದೆ.
ಗುರುವಾರ ಮಧ್ಯಾಹ್ನ ಮಾಲೀಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ಭೇಟಿಯ ಬಳಿಕ 'ಕಾಂಗ್ರೆಸ್ ತೊರೆಯಲಿದ್ದೇನೆ' ಎಂದು ಘೋಷಣೆ ಮಾಡಿದರು.
ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್ ಅವರು, 'ಸ್ಪೀಕರ್ ಅವರು ಊರಿನಲ್ಲಿ ಇಲ್ಲ. ಅವರು ಬಂದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಲಿದ್ದೇನೆ' ಎಂದರು.
ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ಮಾಲೀಕಯ್ಯ ಗುತ್ತೇದಾರ್ ರಾಜೀನಾಮೆ
'ಬೆಂಬಲಿಗರ ಜೊತೆ ಚರ್ಚೆ ನಡೆಸಿದ್ದೇನೆ. ಎಲ್ಲರೂ ಬಿಜೆಪಿ ಸೇರುವ ಬಗ್ಗೆ ಸಲಹೆ ನೀಡಿದ್ದಾರೆ. ನನ್ನ ಕ್ಷೇತ್ರಕ್ಕೆ ನಾನೇ ಚಿಹ್ನೆ. ಬೆಂಬಲಿಗರ ಜೊತೆ ಯಾವುದೇ ಷರತ್ತು ಇಲ್ಲದೇ ಬಿಜೆಪಿ ಸೇರಲಿದ್ದೇನೆ' ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿದರು.
ಕಲಬುರಗಿ: 2013ರ ಚುನಾವಣೆಯಲ್ಲಿ ಗೆದ್ದವರು, ಬಿದ್ದವರು
ಕಲಬುರಗಿ ಜಿಲ್ಲೆಯ ಅಫ್ಜಲ್ಪುರ ಕ್ಷೇತ್ರ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 6 ಬಾರಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ 38,093 ಮತಗಳನ್ನು ಪಡೆದು ಅವರು ಗೆಲುವು ಸಾಧಿಸಿದ್ದಾರೆ.
ಮಾಲೀಕಯ್ಯ ಗುತ್ತೇದಾರ್ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಭಾರೀ ಪ್ರಯತ್ನ ನಡೆಸಿದ್ದರು. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ 2016ರ ಜೂನ್ನಲ್ಲಿ ಕೆಪಿಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕೆಲವು ದಿನಗಳ ಹಿಂದೆ ಅಫ್ಜಲ್ಪುರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಂದಾಗ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕಿದ್ದರು. ಇದರಿಂದ ಅವರು ಜೆಡಿಎಸ್ ಸೇರಬಹುದು ಎಂದು ಸುದ್ದಿಗಳು ಹಬ್ಬಿದ್ದವು.