IAS: ಐಎಎಸ್ ಅಧಿಕಾರಿ ಸಿ. ಶಿಖಾ ಕರ್ನಾಟಕ ಸರ್ಕಾರದ ಸೇವೆಯಿಂದ ಬಿಡುಗಡೆ
ಬೆಂಗಳೂರು, ನವೆಂಬರ್ 16: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಸೇವೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಸಿ. ಶಿಖಾ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಜಂಟಿ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದು, ಶೀಘ್ರವೇ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
2004ನೇ ಬ್ಯಾಚ್ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಸಿ. ಶಿಖಾ ಅವರನ್ನು ಅವರನ್ನು ರಾಜ್ಯದ ಸೇವೆಯಿಂದ ಬಿಡುಗಡೆಗೊಳಿಸಿದೆ.

ಸಿ. ಶಿಖಾ ಅವರು ಕೇಂದ್ರ ಸೇವೆಗೆ ತೆರಳುವ ಕಾರಣ ಅವರಿಂದ ತೆರವಾಗುವ ಹುದ್ದೆಗೆ ಚಂದ್ರಶೇಖರ ನಾಯಕ ಎಲ್. ಅವರನ್ನು ಪ್ರಭಾರಿಯಾಗಿ ನೇಮಿಸಿದೆ. ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ಸಿ. ಶಿಖಾ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.
ಕರ್ನಾಟಕ ಕೇಡರ್ನ ಹಿರಿಯ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ, ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶೀಘ್ರದಲ್ಲೇ ಅವರು ಕೇಂದ್ರದ ಸೇವೆಗೆ ತೆರಳಲಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಜಂಟಿ ಕಾರ್ಯದರ್ಶಿಯಾಗಿ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
ಕಳೆದ ವಾರವೇ ಬೀಳ್ಕೊಡುಗೆ: ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸಿ. ಶಿಖಾ ಅವರಿಗೆ ಕಳೆದ ವಾರವೇ ಕಛೇರಿಯಲ್ಲಿ ಬೀಳ್ಕೊಡುಗೆ ನೀಡಲಾಗಿತ್ತು. ಕೇಂದ್ರ ಸೇವೆಯಲ್ಲಿಯೂ ಅವರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಲಿ ಎಂದು ಅಧಿಕಾರಿಗಳು/ ಸಿಬ್ಬಂದಿಗಳು ಶುಭ ಹಾರೈಸಿದ್ದರು. ಈಗ ರಾಜ್ಯ ಸರ್ಕಾರದ ಸೇವೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.
ಶಿ. ಶಿಖಾ ಅವರು 2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ ಕಾರಣಕ್ಕೆ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಸಹ ಪಡೆದಿದ್ದರು. ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರಿಗೆ ಪ್ರಶಸ್ತಿಯನ್ನು ನೀಡಿತ್ತು.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದ ಸಿ. ಶಿಖಾ ಅವರು ಹೊರ ವರ್ತುಲ ರಸ್ತೆಯಲ್ಲಿ ಬಿಎಂಟಿಸಿ ಬಸ್ಗಳಿಗೆ ಪ್ರತ್ಯೇಕ ಪಥ ನಿರ್ಮಾಣ ಮಾಡುವ ಮೂಲಕ ಬಸ್ಗಳ ಸಂಚಾರಕ್ಕೆ ಸುಗಲ ವ್ಯವಸ್ಥೆಯನ್ನು ಮಾಡಿದ್ದರು.
ಸುಮಾರು ಮೂರುವರೆ ವರ್ಷಗಳ ಕಾಲ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಅವರು ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಮಾಡಿದ್ದರು.
ಮೈಸೂರಿನಲ್ಲಿ ಕಾರ್ಯ ನಿರ್ವಹಣೆ ಮಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಮುಡಾ ಮಾಜಿ ಅಧ್ಯಕ್ಷ ಕೆ. ಮರೀಗೌಡ ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ಸಹ ನೀಡಿದ್ದರು.












Click it and Unblock the Notifications