ಸಿಬಿಐ ತನಿಖೆಗೆ ರಾಜ್ಯದ ಊರೂರಿನಿಂದ ತೇಲಿಬಂದ ಕೂಗು
ಬೆಂಗಳೂರು, ಮಾ. 19: ದಕ್ಷ ಅಧಿಕಾರಿ ಡಿಕೆ ರವಿ ಸಾವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಜೋರಾಗಿದೆ. ನಾಗರೀಕರು, ರಾಜಕೀಯ ಪಕ್ಷಗಳು ಮತ್ತು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಆರಂಭಿಸಿವೆ.
ರಾಜ್ಯದ ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಾಗಡಿ, ಹೊಸಕೋಟೆ, ಮುಧೋಳ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಅನೇಕ ಕಡೆ ನಾಗರೀಕರು ರಸ್ತೆ ತಡೆ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರ ಈ ಬಗ್ಗೆ ಸಚಿವ ಸಂಪುಟ ಸಭೆ ನಡೆಸಿದೆ. ತನಿಖೆಯನ್ನು ಯಾವ ಕಾರಣಕ್ಕೂ ಸಿಬಿಐಗೆ ಒಪ್ಪಿಸುವುದಿಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ಅಘೋಷಿತ ಬಂದ್
ಡಿಕೆ ರವಿಯವರ ಕಾರ್ಯಕ್ಷೇತ್ರವಾಗಿದ್ದ ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಅಲ್ಲದೇ ಅವರ ತವರು ತುಮಕೂರಿನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ವಿವಿಧ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಬಳ್ಳಾಪುರ ಬಂದ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲೂ ಆಕ್ರೋಶ
ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಯುವಜನತೆ ಸರ್ಕಾರದ ವಿರುದ್ಧ ಆಕ್ರೊಶ ಹೊರಹಾಕಿದೆ. ವಿವಿಧ ಬಗೆಯ ಕಮೆಂಟ್ ಗಳ ಮೂಲಕ ಸರ್ಕಾರದ ಮೇಲೆ ಟೀಕಾ ಪ್ರಹಾರ ಮಾಡಲಾಗಿದೆ. ಎಬಿವಿಪಿ ಸಂಘಟನೆ ಸಹ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ವಿಪಕ್ಷಗಳ ಮುಂದುವರಿದ ಧರಣಿ
ಸಿಬಿಐ ತನಿಖೆಗೆ ಒತ್ತಾಯಿಸಿ ರವಿ ಪಾಲಕರು ಧರಣಿ ಕುಳಿತಿದ್ದಾರೆ. ಇತ್ತ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಬಿಜೆಪಿ ಸಂಸದರು ಸಂಸತ್ ಭವನದ ಬಳಿಯ ಗಾಂಧಿ ಪ್ರತಿಮೆ ಬಳಿ ಭಿತ್ತಿ ಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಗುಡುಗು
ಸಾವಿನ ತನಿಖೆಯನ್ನು ಸಿಬಿಐಗೆ ವಹಿಸದಿದ್ದರೆ ರವಿ ಹುಟ್ಟೂರಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮಾಡುವುದಾಗಿ ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಭದ್ರತೆಗೆ ಮನವಿ
ಸರ್ಕಾರಿ ನೌಕರರು ಬೆದರಿಕೆ ಎದುರಿಸುವಂತಾಗಿದ್ದು ಎಲ್ಲರಿಗೂ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮುಧೋಳದಲ್ಲಿ ಸರ್ಕಾರಿ ನೌಕರರ ಸಂಘದಿಂದ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳ ಆಕ್ರೋಶ
ಡಿಕೆ ರವಿ ಸಾವಿನಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿ ಸಮುದಾಯ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿತು. ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರಿನಲ್ಲಿ ನಮನ
ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಡಿಕೆ ರವಿಯವರಿಗೆ ನಮನ ಸಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.











Click it and Unblock the Notifications