IAS Transfer; ಬಿಎಂಟಿಸಿಗೆ ಎಂಡಿ ಜಿ. ಸತ್ಯವತಿ ವರ್ಗಾವಣೆ
ಬೆಂಗಳೂರು, ಜನವರಿ 08: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ.
ಸೋಮವಾರ ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ರಾಮಚಂದ್ರನ್ ಆರ್. (ಕೆಎನ್ : 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಿ. ಸತ್ಯವತಿ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ ಹುದ್ದೆಯನ್ನು ತೋರಿಸಿಲ್ಲ.
ಸದ್ಯ ರಾಮಚಂದ್ರನ್ ಆರ್. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರು (ಚುನಾವಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಲಾಗಿದೆ.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಜಿ. ಸತ್ಯವತಿ ವಿರುದ್ಧ ಸಾರಿಗೆ ಸಚಿವರಿಗೆ ಹಲವು ದೂರುಗಳು ಬಂದಿದ್ದವು ಎಂಬ ಮಾಹಿತಿ ಇದೆ. ಕೆಎಸ್ಆರ್ಟಿಸಿ ಸ್ಟಾಫ್ ಎಂಡ್ ವರ್ಕರ್ಸ್ ಫೆಡರೇಷನ್ ಸಹ ಸಚಿವರ ಬಳಿ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿತ್ತು.
ಬಿಎಂಟಿಸಿ ನಿರ್ದೇಶಕಿಯಾಗಿ ನೇಮಕ; ಡಿಸೆಂಬರ್ 28ರಂದು ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಹುದ್ದೆಯ ನಿರೀಕ್ಷೆಯಲ್ಲಿದ್ದ 8 ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿತ್ತು.
ಶಿಲ್ಪ ಎಂ. (ಕೆಎನ್:2017) ಬೀದರ್ ಜಿಲ್ಲಾ ಪಂಚಾಯಿತಿಯ ಸಿಇಒ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ನಿರ್ದೇಶಕಿ (ಐಟಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬೆಂಗಳೂರು ಆಗಿ ನೇಮಕ ಮಾಡಲಾಗಿತ್ತು.












Click it and Unblock the Notifications