ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕಕ್ಕೆ ಐಐಟಿ, ಐಐಎಂ ಭರವಸೆ
ಬೆಂಗಳೂರು, ಏಪ್ರಿಲ್ 29: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ಥಾಪಿಸಲಾಗುವುದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಸಂವಿಧಾನದ 371(ಜೆ) ಕಲಂ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗದು ಎಂದು ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಹೇಳಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿಶೇಷ ಸ್ಥಾನಮಾನ ನೀಡಿದೆ. ಇದರಿಂದ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಆದರೆ, ಬಿಜೆಪಿ ಈ ವಿಶೇಷ ಸ್ಥಾನಮಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿಲ್ಲ ಎಂದು ಜೇವರ್ಗಿಯಲ್ಲಿ ಶುಕ್ರವಾರ ಚುನಾವಣಾ ಸಭೆಯನ್ನುದ್ದೇಶಿಸಿ ರಾಹುಲ್ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆಯಾದ 3,000 ಕೋಟಿ ರೂ.ಗಳಲ್ಲಿ ಕೇವಲ 12% ಮಾತ್ರ ಬಳಸಿಕೊಳ್ಳಲಾಗಿದೆ ಮತ್ತು ಕರ್ನಾಟಕದ ಈ ಭಾಗದಲ್ಲಿ ಇನ್ನೂ 50,000 ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ಪ್ರತಿ ವರ್ಷ ಮಂಡಳಿಗೆ 5,000 ಕೋಟಿ ರೂ. ಅನುದಾನ ನೀಡಲಾಗುವುದು, ಜೊತೆಗೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇವೆ" ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ 40% ಕಮಿಷನ್ ಸರ್ಕಾರ ಅಧಿಕಾರದಲ್ಲಿದೆ ಎಂದು ಪುನರುಚ್ಚರಿಸಿದ ರಾಹುಲ್, ಮುಖ್ಯಮಂತ್ರಿ ಸ್ಥಾನವನ್ನು 2,500 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಜೇವರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಧರಂ ಸಿಂಗ್ ಅವರ ಪುತ್ರ ಅಜಯ್ ಸಿಂಗ್ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ ನಿಲ್ದಾಣದಿಂದ ಜೇವರ್ಗಿಗೆ ಹೆಲಿಕಾಪ್ಟರ್ನಲ್ಲಿ ತೆರಳಲು ಸಾಧ್ಯವಾಗಲಿಲ್ಲ. ರಸ್ತೆ ಮಾರ್ಗವಾಗಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರುವಷ್ಟರಲ್ಲಿ ಮಳೆ ಸುರಿಯಲಾರಂಭಿಸಿತ್ತು.

ಜೇವರ್ಗಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಸ್ಥಳದಲ್ಲಿ ನೆರೆದಿದ್ದ ಜನರು ಮಳೆಯಿಂದ ರಕ್ಷಣೆ ಪಡೆಯಲು ಕುರ್ಚಿಗಳನ್ನು ಬಳಸಿಕೊಂಡರು. ರಾಹುಲ್ ಗಾಂಧಿ ಭಾಷಣ ಕೇಳಲು ಹಿಂದೆ ಭಾರತ್ ಜೋಡೊ ಯಾತ್ರೆಯಲ್ಲಿ ಮಳೆಯಲ್ಲೇ ನಿಂತು ಭಾಷಣ ಕೇಳಿದಂತೆ ಜನರು ಅವರ ಭಾಷಣವನ್ನು ಇಂದಿಗೂ ಕೇಳಿದರು.
ಬಳ್ಳಾರಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್, ಜಿಲ್ಲೆಯಲ್ಲಿ ಕಾಂಗ್ರೆಸ್ ಜೀನ್ಸ್ ಪಾರ್ಕ್ ಸ್ಥಾಪಿಸಲಿದೆ ಮತ್ತು ಯೋಜನೆಗೆ 5,000 ಕೋಟಿ ರೂಪಾಯಿ ನೀಡಲಿದೆ ಎಂದು ಹೇಳಿದರು.












Click it and Unblock the Notifications