'ವಿದ್ಯಾಗಮ' ಅಪಸ್ವರದ ಹಿಂದೆ 'ಖಾಸಗಿ ಶಿಕ್ಷಣ' ಸಂಸ್ಥೆಗಳ ಲಾಬಿ?
ಬೆಂಗಳೂರು, ಅ. 10: ವಿದ್ಯಾಗಮ ಕಾರ್ಯಕ್ರಮದ ಕುರಿತಂತೆ ರಾಜ್ಯದಲ್ಲಿ ಎದ್ದಿರುವ ಅಪಸ್ವರದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದ್ದಾರೆ. ವಿಶೇಷವಾಗಿ ಸಾಮಾಜಿಕ, ಆರ್ಥಿಕವಾಗಿ ದುರ್ಬಲರಾದ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹುಪಾಲು ನಮ್ಮ ಸರ್ಕಾರಿ ಶಾಲೆಗಳಿಗೆ ಸೇರಿದ 47 ಲಕ್ಷ ಮಕ್ಕಳು ಈ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಎಲ್ಲಿಯೂ ಕಾರ್ಯಕ್ರಮದ ಕಾರಣದಿಂದಲೇ ಕೊರೊನಾ ಸೋಂಕು ಹರಡಿದೆಯೆನ್ನುವುದು ಅಧಿಕೃತವಾಗಿ ದೃಢಪಟ್ಟಿಲ್ಲ ಎಂದು ಸುರೇಶ್ ಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಬೇರೆಯದ್ದೆ ಲಾಬಿ ವಿದ್ಯಾಗಮ ಯೋಜನೆ ಕುರಿತು ಅಪಪ್ರಚಾರ ಮಾಡುತ್ತಿದೆ ಎಂಬ ವಾದಕ್ಕೆ ಶಿಕ್ಷಣ ಸಚಿವರ ಸ್ಪಷ್ಟನೆ ಮತ್ತಷ್ಟು ಪುಷ್ಟಿ ಕೊಡುವಂತಿದೆ. ಹಾಗಾದರೆ ಆ ಲಾಬಿ ಯಾವುದು? ಮುಂದಿದೆ ಸಂಪೂರ್ಣ ಮಾಹಿತಿ.'
'ವಿದ್ಯಾಗಮ' ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಸುರೇಶ್ ಕುಮಾರ್!
ವೈಜ್ಞಾನಿಕವಾಗಿ ರೂಪಿತ
ವಿದ್ಯಾಗಮ ಕಾರ್ಯಕ್ರಮ ಅತ್ಯಂತ ವೈಜ್ಞಾನಿಕವಾಗಿ ರೂಪಿತವಾಗಿದ್ದು, ಸಮಾಜದ ದುರ್ಬಲ ಮಕ್ಕಳ ಕಲಿಕೆಯನ್ನು ಮುಂದುವರೆಸಲು, ಶಿಕ್ಷಕ-ವಿದ್ಯಾರ್ಥಿಗಳ ನಡುವಿನ ಸ್ನೇಹ ಸಂಬಂಧ ಗಟ್ಟಿಗೊಳ್ಳುವ ಮೂಲಕ ವಿದ್ಯಾರ್ಥಿಯ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ.
ಜೊತೆಗೆ ಆ ಸ್ತರದ ಮಕ್ಕಳ ಮಾನಸಿಕ, ದೈಹಿಕ ಸ್ಥಿತಿಗತಿಗಳನ್ನು ಸುಸ್ಥಿತಿಯಲ್ಲಿಡಲು ವಿದ್ಯಾಗಮ ಪೂರಕವಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯದ ವಿದ್ಯಾಗಮ ಕಾರ್ಯಕ್ರಮ ಮಾದರಿಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾಗಮದ ಕಾರ್ಯಕ್ರಮದಲ್ಲಿ ಅಳವಡಿಸಿಕೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಯಾರಲ್ಲಿಯೂ ಸಂಶಯ ಬೇಡ ಎಂದು ಅವರು ವಿನಂತಿಸಿದ್ದಾರೆ. ಆದರೂ ಯೋಜನೆ ಬಗ್ಗೆ ಅಪಸ್ವರ ಹೆಚ್ಚಾಗಲು ಕಾರಣ ಏನು?
ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ?
ಸ್ವತಃ ಶಿಕ್ಷಣ ಸಚಿವರೇ ಇಷ್ಟೆಲ್ಲ ಭರವಸೆ ನೀಡಿದರೂ ಕಾರ್ಯಕ್ರಮದ ಕುರಿತು ಅಪಸ್ವರ ಹೆಚ್ಚಾಗುತ್ತಲೇ ಇದೆ. ಒಂದು ಮೂಲದ ಪ್ರಕಾರ ವಿದ್ಯಾಗಮ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸ ನಿರಾತಂಕವಾಗಿ ಸಾಗಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳ ನೆಮ್ಮದಿಯನ್ನು ಹಾಳು ಮಾಡಿದೆ.
ಹೀಗಾಗಿ ಹೇಗಾದರೂ ಮಾಡಿ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳೇ ಮೇಲು ಎಂಬುದನ್ನು ಸಾಬೀತು ಪಡಿಸಲು ಅವು ಇನ್ನಿಲ್ಲದ ಕಸರತ್ತು ನಡೆಸಿವೆ. ಅದಕ್ಕೆ ರಾಜ್ಯದ ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿನ ಘಟನೆಗಳನ್ನೇ ನೆಪವಾಗಿಟ್ಟುಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಅಡೆತಡೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬಂದಿವೆ.
ಆದರೂ ಸೂಕ್ತ ತನಿಖೆ
ಇದೆಲ್ಲದರ ಮಧ್ಯೆ ಶಿಕ್ಷಕರ ಕಾರಣಕ್ಕೇ ಮಕ್ಕಳು ಕೋವಿಡ್ ಸೋಂಕಿತರಾಗಿದ್ದಾರೆಯೇ, ಮಕ್ಕಳಿಂದ ಶಿಕ್ಷಕರಿಗೆ ಅದು ಹರಡಿದೆಯೇ ಎಂಬ ಬಗ್ಗೆ ರಾಜ್ಯಾದ್ಯಂತ ಮಾಹಿತಿ ಸಂಗ್ರಹಣೆಗೆ ಇಂದಿನಿಂದಲೇ ನಾವು ಮುಂದಾಗಿದ್ದೇವೆ. ಪ್ರತಿ ಜಿಲ್ಲೆಯಿಂದ, ಸಂಬಂಧಪಟ್ಟವರಿಂದ ಈ ಸಂಪೂರ್ಣ ಮಾಹಿತಿ ಈ ಕೂಡಲೇ ಸಂಗ್ರಹಿಸಲಾಗುವುದು. ಸಂಪೂರ್ಣ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ-ಶಿಕ್ಷಕರ ಆರೋಗ್ಯಕ್ಕಿಂತ ಇನ್ನಾವ ಕಾರ್ಯಕ್ರಮವೂ ಮುಖ್ಯವಲ್ಲ ಎಂಬುದನ್ನು ಸ್ಪಷ್ಟಪಡಿಸಲಿಚ್ಛಿಸುತ್ತೇನೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಆ ಮೂಲಕ ಕೊರೊನಾ ವೈರಸ್ ಸೋಂಕು ವಿದ್ಯಾಗಮ ಯೋಜನೆಯಿಂದಲೇ ಹರಡುತ್ತಿರುವುದು ಸಾಬೀತಾದರೆ, ಆ ಬಗ್ಗೆ ಪರ್ಯಾಯ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದ್ದಾರೆ.
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ದತಿ
ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣದ ಬಗ್ಗೆ, ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಗಳ ನಿಯಂತ್ರಣ ಕುರಿತಾದ ನಮ್ಮೆಲ್ಲರ ಕಾಳಜಿಯಿರಲಿ. ಈ ಪದ್ದತಿಗಳನ್ನು ತಡೆಯಲು ಶೈಕ್ಷಣಿಕ ಚಟುವಟಿಕೆಗಳನ್ನು ಸಕ್ರಿಯವಾಗಿಡುವುದು ಅಗತ್ಯ ಎಂಬುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮತ್ತೊಮ್ಮೆ ನೆನಪಿಸಿದ್ದಾರೆ.
ಒಟ್ಟಾರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಹಾಗೂ ಬಾಲ ಕಾರ್ಮಿಕ ಪದ್ದತಿಯನ್ನು ಪೋಷಿಷಿಕೊಂಡು ಹೋಗುತ್ತಿರುವ ಲಾಬಿಗಳಿಂದ ವಿದ್ಯಾಗಮ ಕಾರ್ಯಕ್ರಮದ ಕುರಿತು ಅಪಸ್ವರ ಎದ್ದಿದೆ ಎಂಬ ಮಾತನ್ನೂ ಸಂಪೂರ್ಣವಾಗಿ ತಳ್ಳಿ ಹಾಕುವಂತಿಲ್ಲ.